ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್: ಕಲ್ಯಾಣ ಕರ್ನಾಟಕದ ನಾಯಕರ ಮಹತ್ವದ ಸಭೆ ಕರೆದ ಕೆಪಿಸಿಸಿ
ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭಿಸುತ್ತಿರುವ ಬೆನ್ನಲ್ಲೇ, ಬಿಜೆಪಿ ನಾಯಕರಿಗೆ ರಾಜಕೀಯವಾಗಿ ಕೌಂಟರ್ ನೀಡಲು ಕಾಂಗ್ರೆಸ್ ಸಜ್ಜಾಗಿದೆ. ಕಲ್ಯಾಣ ಕರ್ನಾಟಕದ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರ ಸಭೆ ಕರೆದು, ಪಾದಯಾತ್ರೆಯಲ್ಲಿ ಬಿಜೆಪಿ ಪ್ರಸ್ತಾಪಿಸುವ ಪ್ರತಿಯೊಂದು ವಿಚಾರಕ್ಕೂ ತಿರುಗೇಟು ನೀಡಲು ತಂತ್ರ ರೂಪಿಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ ಇದೀಗ.

ಮುಖ್ಯಾಂಶಗಳು
- ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್ ತಂತ್ರ
- ಕಲ್ಯಾಣ ಕರ್ನಾಟಕ ನಾಯಕರ ಮಹತ್ವದ ಸಭೆ
- ಬಿಜೆಪಿ ಆರೋಪಗಳಿಗೆ ತಕ್ಷಣ ತಿರುಗೇಟು ಸಿದ್ಧ
ಬೆಂಗಳೂರು, ಸೆಪ್ಟೆಂಬರ್ 1: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸೇರಿದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭಿಸುತ್ತಿರುವ ಬೆನ್ನಲ್ಲೇ, ಬಿಜೆಪಿ ನಾಯಕರಿಗೆ ರಾಜಕೀಯವಾಗಿ ಕೌಂಟರ್ ನೀಡಲು ಕಾಂಗ್ರೆಸ್ (Congress) ಸಜ್ಜಾಗುತ್ತಿದೆ. ಪಾದಯಾತ್ರೆಯಲ್ಲಿ ಬಿಜೆಪಿ ಪ್ರಸ್ತಾಪಿಸುವ ಪ್ರತಿಯೊಂದು ವಿಚಾರಕ್ಕೂ ತಿರುಗೇಟು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ. ಈ ಸಂಬಂಧ ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಸಭೆ ಕರೆಯಲಾಗಿದೆ. ಬುಧವಾರ ಮಧ್ಯಾಹ್ನ 3 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ರಾಯಚೂರು, ಕೊಪ್ಪಳ, ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ ಹಾಗೂ ಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.
ಸಂಸದರು, ಶಾಸಕರು, ಡಿಸಿಸಿ ಅಧ್ಯಕ್ಷರು, ಬಿಸಿಸಿ ಅಧ್ಯಕ್ಷರು, ಮಾಜಿ ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಿಗೂ ಸಭೆಗೆ ಆಹ್ವಾನ ನೀಡಲಾಗಿದೆ. ಬಿಜೆಪಿ ಪಾದಯಾತ್ರೆಯಲ್ಲಿ ಯಾವೆಲ್ಲ ವಿಚಾರಗಳನ್ನು ಪ್ರಸ್ತಾಪಿಸಬಹುದು ಎಂಬುದರ ಕುರಿತು ಚರ್ಚಿಸಿ, ಪ್ರತಿಯೊಂದು ಆರೋಪಕ್ಕೂ ತಕ್ಷಣವೇ ರಾಜಕೀಯವಾಗಿ ಉತ್ತರ ನೀಡುವಂತೆ ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡುವ ಸಾಧ್ಯತೆ ಇದೆ.
ಬಿಜೆಪಿ ಯಾವುದೇ ವಿಚಾರ ಎತ್ತಿದರೂ ಕೌಂಟರ್
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ ಬಳಿಕವೂ ಬಿಜೆಪಿ ಹೋರಾಟವನ್ನು ಮುಂದುವರಿಸಿದೆ. ಹಗರಣದ ಹಣವನ್ನು ಸಂಪೂರ್ಣವಾಗಿ ವಾಪಸ್ ಪಡೆಯಬೇಕು ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಬೇಕು ಎಂಬ ಉದ್ದೇಶದಿಂದ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ನಡೆಸುತ್ತಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಎತ್ತುವ ಆರೋಪಗಳಿಗೆ ಯಾವ ರೀತಿಯಲ್ಲಿ ಪ್ರತಿಕ್ರಿಯಿಸಬೇಕು, ಸರ್ಕಾರದ ಪರವಾಗಿ ಯಾವ ಅಂಶಗಳನ್ನು ಜನರ ಮುಂದಿಡಬೇಕು ಹಾಗೂ ಪಾದಯಾತ್ರೆಯ ಸಂದರ್ಭದಲ್ಲಿ ಬಿಜೆಪಿಯಿಂದ ಬರುವ ರಾಜಕೀಯ ಟೀಕೆಗಳಿಗೆ ಹೇಗೆ ತಿರುಗೇಟು ನೀಡಬೇಕು ಎಂಬುದರ ಕುರಿತು ಕಾಂಗ್ರೆಸ್ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಂದರೆ, ಬಿಜೆಪಿ ಪಾದಯಾತ್ರೆಯಲ್ಲಿ ಯಾವುದೇ ವಿಚಾರ ಪ್ರಸ್ತಾಪಿಸಿದರೂ ಅದಕ್ಕೆ ತಕ್ಷಣವೇ ಕೌಂಟರ್ ನೀಡುವಂತೆ ಸ್ಥಳೀಯ ಕಾಂಗ್ರೆಸ್ ನಾಯಕರನ್ನು ಸಜ್ಜುಗೊಳಿಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ.
ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭಿಸುತ್ತಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಯಾತ್ರೆಗೆ ಚಾಲನೆ ದೊರೆಯಲಿದ್ದು, ಸೆಪ್ಟೆಂಬರ್ 10ರಂದು ಬಳ್ಳಾರಿಯಲ್ಲಿ ಸಮಾರೋಪ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಲಿಂಗಸೂಗೂರಿನ ಬೆಂಗಳೂರು ಬೈಪಾಸ್ ರಸ್ತೆ ಬಳಿಯಿರುವ ಜಿ.ಕೆ. ರೆಸಿಡೆನ್ಸಿ ಮುಂಭಾಗ ಸಮಾವೇಶ ನಡೆಯಲಿದೆ. ಬಳಿಕ ಸುಮಾರು 12 ಕಿಲೋಮೀಟರ್ ಪಾದಯಾತ್ರೆ ಸಾಗಲಿದೆ. ರಾತ್ರಿ ಸಂತೆಕಲ್ಲೂರು ಘನ ಮಠೇಶ್ವರ ಮಠದಲ್ಲಿ ನಾಯಕರು ವಾಸ್ತವ್ಯ ಮಾಡಲಿದ್ದಾರೆ.
ಪ್ರತಿದಿನ ಪಾದಯಾತ್ರೆಯ ನಡುವೆ ಎರಡು ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ಮಾಜಿ ಸಚಿವ ಬಿ. ಶ್ರೀರಾಮುಲು, ಗಾಲಿ ಜನಾರ್ದನ ರೆಡ್ಡಿ, ಮಾನಪ್ಪ ವಜ್ಜಲ್, ಡಾ. ಎಸ್. ಶಿವರಾಜ್ ಪಾಟೀಲ್, ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರು ಕೂಡ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಬಿಜೆಪಿ ಪಾದಯಾತ್ರೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಕೂಡ ಕೌಂಟರ್ ತಂತ್ರಕ್ಕೆ ಮುಂದಾಗಿರುವುದು ರಾಜ್ಯದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಹೀಗಾಗಿ ಮುಂದಿನ ಹತ್ತು ದಿನಗಳ ಕಾಲ ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




