
ಬೆಂಗಳೂರು, ಆಗಸ್ಟ್ 5: ಲೋಕಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಮತ ಕಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಸಂಸತ್ ಆವರಣದಲ್ಲಿ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ 5ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಉದ್ದೇಶಿಸಿತ್ತು. ‘‘ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’’ ಎಂಬ ಧ್ಯೇಯದಡಿ ಹಮ್ಮಿಕೊಂಡ ಪ್ರತಿಭಟನಾ ಸಮಾವೇಶಕ್ಕೆ ಎಲ್ಲ ರೀತಿಯ ಸಿದ್ಧತೆಗಳು ಕೂಡ ನಡೆದಿದ್ದವು. ಆದರೆ ಈಗ ಅಂತಿಮ ಕ್ಷಣದಲ್ಲಿ ಸಮಾವೇಶವನ್ನು ಮುಂದೂಡಲಾಗಿದೆ.
ಆಗಸ್ಟ್ 5 ರ ಬದಲು 8 ಕ್ಕೆ ಸಮಾವೇಶ ನಡೆಸಲಾಗುವುದು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ ಹೊಂದಿದ್ದು, ಅವರಿಗೆ ಅಂತಿಮ ನಮನ ಸಲ್ಲಿಸಲು ಹಿರಿಯ ನಾಯಕರು ತೆರಳುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಾರ್ಖಂಡ್ಗೆ ತೆರಳುತ್ತಿದ್ದಾರೆ. ಹೀಗಾಗಿ ನಾಳೆ ನಿಗದಿಯಾಗಿದ್ದ ಪ್ರತಿಭಟನಾ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.
ಪ್ರತಿಭಟನಾ ಸಮಾವೇಶಕ್ಕೆ ನಾವು ಬಹಳ ಸಡಗರ ಹಾಗೂ ಕಾತರದಿಂದ ಕಾಯುತ್ತಿದ್ದೆವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜತೆಗೆ, ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ನಾಳೆಯ ಬದಲು ಆಗಸ್ಟ್ 8ಕ್ಕೆ ಪ್ರತಿಭಟನೆ ಮುಂದೂಡಿದ್ದೇವೆ. ಪಕ್ಷದ ವತಿಯಿಂದ ಶಿಬು ಸೊರೇನ್ಗೆ ಅಂತಿಮ ನಮನ ಸಲ್ಲಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಚುನಾವಣೆಯಲ್ಲಿ ಅಕ್ರಮ; ರಾಹುಲ್ ಗಾಂಧಿ ನೇತೃತ್ವದಲ್ಲಿ ಆ. 5ರಂದು ಪ್ರತಿಭಟನೆ: ಡಿಕೆ ಶಿವಕುಮಾರ್
ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನಾ ಸಮಾವೇಶಕ್ಕೆ ಬೆಂಗಳೂರಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳು ನಡೆದಿದ್ದವು. ಖುದ್ದು ರಣದೀಪ್ ಸುರ್ಜೇವಾಲ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಿದ್ಧತೆಗಳನ್ನು ಮಾಡಲಾಗಿತ್ತು. ಆರಂಭದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆಗೆ ಚಿಂತನೆ ನಡೆಸಲಾಗಿತ್ತು. ಆದರೆ, ನಂತರದಲ್ಲಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾ ಸಮಾವೇಶಕ್ಕೆ ನಿರ್ಧರಿಸಲಾಗಿತ್ತು. ಇದೀಗ ಪಕ್ಷದ ಹಿರಿಯ ನಾಯಕನ ನಿಧನದ ಕಾರಣ ಮುಂದೂಡಿಕೆ ಆಗಿದೆ.