ರಾಜ್ಯದಲ್ಲಿ ಕೊವಿಡ್ ಎರಡನೇ ಅಲೆ ಆತಂಕ; ತಜ್ಞರ ಜೊತೆ ಸಭೆ ನಡೆಸಿ ಅಂತಿಮ ನಿರ್ಧಾರ ಅಂದ್ರು ಡಾ.ಕೆ.ಸುಧಾಕರ್
ಯಾವ ವ್ಯಾಕ್ಸಿನ್? ಎಷ್ಟು ಪ್ರಮಾಣದಲ್ಲಿ ನೀಡಬೇಕು? ಯಾರಿಗೆ ನೀಡಬೇಕು ಎಂಬ ವಿಷಯಗಳು ಇತ್ಯರ್ಥ ಆದ ಬೆನ್ನಲ್ಲೇ ವ್ಯಾಕ್ಸಿನ್ ವಿತರಣೆ ವ್ಯವಸ್ಥಿತವಾಗಿ ನಡೆಯಲಿದೆ ಎಂದರು.

ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ಎರಡನೆ ಅಲೆ ಕಾಣಿಸಿಕೊಳ್ಳಲಿದೆ ಎಂಬ ವರದಿಯನ್ನು ತಜ್ಞರು ನೀಡಿದ್ದರು. ಈ ಕುರಿತಂತೆ ಅಧಿಕಾರಿಗಳು ಮತ್ತು ತಜ್ಞರು ಸಭೆ ನಡೆಸಿ ಸೂಕ್ತ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿರುವ ಅವರು, ತಜ್ಞರು ನೀಡಿರುವ ವರದಿ ಇನ್ನೂ ಕೈಸೇರಿಲ್ಲ. ಅದು ಅಧಿಕಾರಿಗಳ ಮಟ್ಟದಲ್ಲಿದೆ. ಆ ವರದಿ ಮತ್ತು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಮಿತಿ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಲಾಗುವುದು. ಸಭೆಯ ತೀರ್ಮಾನಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಇತರ ಸಚಿವರ ಜತೆ ಸಮಾಲೋಚಿಸಿ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದರು.
ಕೊವಿಡ್ ಎರಡನೇ ಅಲೆ ಹೆಚ್ಚು ಪರಿಣಾಮ ಬೀರಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ವೈಯಕ್ತಿಕವಾಗಿ ನನಗೆ ಹಾಗನಿಸುತ್ತಿಲ್ಲ. ಆದರೂ ತಜ್ಞರು ನಡೆಸಿರುವ ಅಧ್ಯಯನ ವರದಿಯಲ್ಲಿ ಏನಿದೆ ಎಂಬುದನ್ನು ಪರಿಶೀಲಿಸಬೇಕಿದೆ. ಯಾವ ಮಟ್ಟದ ಪರಿಣಾಮ? ಯಾವ್ಯಾವ ಪ್ರದೇಶಗಳಲ್ಲಿ ಹೇಗಿರುತ್ತದೆ? ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು? ಈ ಎಲ್ಲಾ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಎಚ್ಚರಿಕೆಯ ಹೆಜ್ಜೆ ಇರಿಸಲಾಗುವುದು ಎಂದರು.
ಕೊರೊನಾ ವೈರಸ್ ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಘೋಷಣೆ ಮಾಡಬೇಕು ಎಂದು ಕೆಲವರು ಆಗ್ರಹಿಸಿದ್ದರು. ಈ ಬಗ್ಗೆ ಮಾತನಾಡಿರುವ ಸುಧಾಕರ್, ಕೊವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಶಾಶ್ವತ ಪರಿಹಾರ ಅಲ್ಲ. ಮಾಸ್ಕ್, ಸಾಮಾಜಿಕ ಅಂತರ ಮತ್ತು ಶುಚಿತ್ವ ಲಸಿಕೆಗಿಂತಲೂ ಹೆಚ್ಚು ಪರಿಣಾಮಕಾರಿ ಎಂಬುದನ್ನು ತಜ್ಞರೇ ಹೇಳಿದ್ದಾರೆ. ಇತರೆ ರಾಷ್ಟ್ರಗಳ ಸ್ಥಿತಿಗತಿಗಳನ್ನೂ ಗಮನಿಸಲಾಗುತ್ತಿದೆ. ಯೂರೋಪ್ನಲ್ಲಿ ಲಾಕ್ಡೌನ್ ಮಾಡಿದ್ದರೂ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಸರ್ಕಾರದ ಸೂಚನೆಗಳನ್ನು ಜನರು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ಅದಕ್ಕಿಂತ ಬೇರೆ ಲಸಿಕೆ ಅಗತ್ಯವಿಲ್ಲ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ವಿವರಿಸಿದರು.
ಸಂಭ್ರಮಾಚರಣೆ ಅಗತ್ಯ ವೇನಿದೆ?
ಈ ಬಾರಿ ಹೊಸ ವರ್ಷ ಆಚರಣೆಗೆ ಬ್ರೇಕ್ ಹಾಕುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ಸುಧಾಕರ್, ಹೊಸ ವರ್ಷ ಮತ್ತು ಕ್ರಿಸ್ಮಸ್ ಹಿನ್ನೆಲೆಯಲ್ಲಿ ಬಿಗಿ ಕ್ರಮ ಜಾರಿಗೊಳಿಸುವ ಬಗ್ಗೆಯೂ ತಜ್ಞರ ಜತೆ ಚರ್ಚಿಸಲಾಗುವುದು. ಇದು ಭಾರತೀಯ ಕ್ಯಾಲೆಂಡರ್ನ ಹೊಸ ವರ್ಷ ಅಲ್ಲ. ಯುಗಾದಿ ನಮ್ಮ ಹೊಸ ವರ್ಷ. ಎಲ್ಲಕ್ಕಿಂತ ಮಿಗಿಲಾಗಿ ಕೋವಿಡ್ನ ಸಂಕಷ್ಟ ಸ್ಥಿತಿಯಲ್ಲಿ ಸಂಭ್ರಮಾಚರಣೆ ಅಗತ್ಯವಾದರೂ ಏನಿದೆ? ನೂರಾರು ಜನರನ್ನು ಕಳೆದುಕೊಂಡಿದ್ದೇವೆ. ಆರ್ಥಿಕ ಸ್ಥಿತಿ ಡೋಲಾಯಮಾನವಾಗಿದೆ, ನೂರಾರು ಜನ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ, ಇನ್ನೂ ಪರಿಸ್ಥಿತಿ ಸುಧಾರಣೆ ಆಗಿಲ್ಲ, ಇಂಥ ಸನ್ನಿವೇಶದಲ್ಲಿ ಸಂಭ್ರಮದ ಅಗತ್ಯವಾದರು ಏಕೆ ಬೇಕು ಹೇಳಿ ಎಂದು ಪ್ರಶ್ನಿಸಿದರು.
ವಾರದೊಳಗೆ ವೇತನ ಬಿಡುಗಡೆ ಇದೇ ಮೊದಲ ಸಲ ಕಡ್ಡಾಯ ಸೇವೆಗಾಗಿ ರಾಜ್ಯಾದ್ಯಂತ ರೆಸಿಡೆಂಟ್ ಡಾಕ್ಟರ್ಗಳನ್ನು ನಿಯೋಜಿಸಲಾಗಿತ್ತು. ಅವರಿಗೆ ವೇತನ ಸಿಕ್ಕಿರಲಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ವೇತನ ನೀಡುವುದು ತಾಂತ್ರಿಕ ಕಾರಣಗಳಿಂದ ತಡವಾಗಿದೆ. ವಾರದೊಳಗಾಗಿ ವೇತನ ಬಿಡುಗಡೆ ಆಗಲಿದೆ. ಅಲ್ಲಿಯವರೆಗೆ ಅವರಿಗೆ ಕಾಲೇಜುಗಳ ಆಡಳಿತ ಮಂಡಳಿಗಳಿಂದ ವೇತನ ನೀಡಲು ಸೂಚಿಸಲಾಗಿದೆ. ಹಣಕಾಸು ಇಲಾಖೆ ಜತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಹ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಸಿದ್ಧತೆ ಪೂರ್ಣಗೊಂಡಿದೆ ವ್ಯಾಕ್ಸಿನ್ ವಿತರಣೆ ಮತ್ತು ದಾಸ್ತಾನು ಸಂಬಂಧ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶೈತ್ಯಾಗಾರ, ವಿತರಣಾ ಸಿಬ್ಬಂದಿ ಸಹಿತ ಎಲ್ಲಾ ವಿಷಯಗಳ ಬಗ್ಗೆ ಅನೇಕ ಸುತ್ತುಗಳ ಸಮಾಲೋಚನೆ ಪೂರ್ಣಗೊಳಿಸಿದ್ದೇವೆ. ಹಿಂದೆ ಅನೇಕ ಸಲ ವ್ಯಾಕ್ಸಿನ್ ಬಳಕೆ ಮಾಡಿರುವ ಅನುಭವ ಇದೆ. ಕೋವಿಡ್ ಬರುವ ಮೊದಲಿಗಿಂತ ಈಗ ಮೂಲಸೌಕರ್ಯದಲ್ಲಿ ಸಾಕಷ್ಟು ಸುಧಾರಣೆ ಮಾಡಿಕೊಳ್ಳಲಾಗಿದೆ. ಅಂತಿಮವಾಗಿ ಯಾವ ವ್ಯಾಕ್ಸಿನ್? ಎಷ್ಟು ಪ್ರಮಾಣದಲ್ಲಿ ನೀಡಬೇಕು? ಯಾರಿಗೆ ನೀಡಬೇಕು ಎಂಬ ವಿಷಯಗಳು ಇತ್ಯರ್ಥ ಆದ ಬೆನ್ನಲ್ಲೇ ವ್ಯಾಕ್ಸಿನ್ ವಿತರಣೆ ವ್ಯವಸ್ಥಿತವಾಗಿ ನಡೆಯಲಿದೆ ಎಂದರು.



