
ಬೆಂಗಳೂರು, ಮೇ 24: ರಾಜ್ಯಕ್ಕೆ ಕೊರೊನಾ ವೈರಸ್ (Covid-19) ಮತ್ತೆ ಒಕ್ಕರಿಸಿದೆ. ರಾಜ್ಯದಲ್ಲಿ ಶನಿವಾರ (ಮೇ.24) ಐವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ (Bengaluru) 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಶನಿವಾರ (ಮೇ.24) ವಿಜಯನಗರ ಜಿಲ್ಲೆಯಲ್ಲಿ ಒಬ್ಬರು, ಮೈಸೂರಿನಲ್ಲಿ ಇಬ್ಬರಿಗೆ ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ವಿಜಯನಗರ ಜಿಲ್ಲೆಯಲ್ಲಿ 54 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತ ಮಹಿಳೆ ವಿಪರೀತ ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದರು. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಮಹಿಳೆ ಹೋಂ ಐಸೋಲೇಷನ್ನಲ್ಲಿದ್ದಾರೆ. ಮಹಿಳೆ ಇತ್ತೀಚೆಗೆ ಮುಂಬೈನಿಂದ ವಾಪಸಾಗಿದ್ದಾರೆ.
ಬೆಳಗಾವಿ ಜಿಲ್ಲೆಗೂ ಕೊರೊನಾ ವೈರಸ್ ಕಾಲಿಟ್ಟದೆ. ಬೆಳಗಾವಿ ನಗರದ ಓರ್ವ ಗರ್ಭಿಣಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಗರ್ಭಿಣಿ ನ್ಯುಮೋನಿಯಾದಿಂದ ಬಳಲುತ್ತಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬೆಳಗಾವಿ ಡಿಹೆಚ್ಒ ಡಾ.ಈಶ್ವರ ಗಡಾದಿ ಮಾಹಿತಿ ನೀಡಿದರು. ಗರ್ಭಿಣಿ ತಿಂಗಳ ಹಿಂದೆ ಮಹಾರಾಷ್ಟ್ರದ ಪುಣೆಗೆ ಹೋಗಿ ಬಂದಿದ್ದರು ಎಂದು ತಿಳಿದುಬಂದಿದೆ.
ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯುಳ್ಳ ಅತ್ಯಾಧುನಿಕ 10 ಬೆಡ್ಗಳ ICU ವಾರ್ಡ್ ತೆರೆಯಲಾಗಿದೆ. ಪುರುಷ ಮತ್ತು ಮಹಿಳಾ ಕೋವಿಡ್ ರೋಗಿಗಳಿಗೆ ತಲಾ 5 ಬೆಡ್ ಮೀಸಲು ಇಡಲಾಗಿದೆ. ಧಾರವಾಡ ಜಿಲ್ಲಾಸ್ಪತ್ರೆ ಕೊವಿಡ್ 1ನೇ ಮತ್ತು 2ನೇ ಅಲೆಯಲ್ಲಿ ಉತ್ತಮ ಸೇವೆ ನೀಡಿತ್ತು. ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಯಿಂದ ಜಿಲ್ಲಾಸ್ಪತ್ರೆಗೆ ರೋಗಿಗಳು ಬಂದಿದ್ದರು.
ಇದನ್ನೂ ಓದಿ: ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ: ಇನ್ಮುಂದೆ ಕೋವಿಡ್ ಟೆಸ್ಟ್ ಕಡ್ಡಾಯ
ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ. ಸಲಹಾ ಸಮಿತಿ ಸೂಚನೆ ಮೇರೆಗೆ ರವಿವಾರ (ಮೇ.25) ದಿಂದ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ಮತ್ತೆ ಆರಂಭಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿಯೇ ಹೆಚ್ಚು ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:28 pm, Sat, 24 May 25