
ಬೆಂಗಳೂರು, (ಮೇ.28) : ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ 15,441.17 ಕೋಟಿ ರೂ.ಗಳ ಬಂಡವಾಳ ಹೂಡಿಕೆಯ 6 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದಾಗಿ ರಾಜ್ಯದಲ್ಲಿ 5,277 ಜನರಿಗೆ ಉದ್ಯೋಗಾವಕಾಶಗಳು (Jobs) ಸೃಷ್ಟಿಯಾಗಲಿದ್ದು, ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ. ಹೆಚ್ಚುವರಿಯಾಗಿ ಕೆಲವು ಯೋಜನೆಗಳ ಅನುಷ್ಠಾನಕ್ಕೆ ಸಮಯ ವಿಸ್ತರಣೆ ಮತ್ತು ಭೂಮಿ ಸ್ವಾಧೀನಕ್ಕೆ ಅನುಮತಿ ನೀಡಲಾಗಿದೆ.
ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ, ದಾಲ್ಮಿಯಾ ಸಿಮೆಂಟ್ (ಭಾರತ್) ಲಿ.ನ 3,000 ಕೋಟಿ ರೂ.ಹೂಡಿಕೆಯಿಂದ 570 ಉದ್ಯೋಗ, ದಾಲ್ಮಿಯಾ(ಭಾರತ್) ಲಿ. ಸಂಸ್ಥೆಯ 3020 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಸೃಷ್ಠಿಯಾಗಲಿವೆ. ಇನ್ನು ಎಂವೀ ಎನರ್ಜಿ ಪ್ರೈ.ಲಿ ಸಂಸ್ಥೆಯ 5495 ಕೋಟಿ ರೂ. ಹೂಡಿಕೆಯಿಂದ 2508 ಉದ್ಯೋಗ ಸೃಷ್ಟಿಯಾಗಲಿವೆ. ಒಟ್ಟಾರೆ 13,921 ಕೋಟಿ ಮೊತ್ತದ ಹೊಸ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ಒಟ್ಟಾರೆ 3,948 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.
ಕಲರ್ಟೋನ್ ಟೆಕ್ಸ್ಟೈಲ್ಸ್ ಪ್ರೈ. ಲಿ.ನ 190.17 ಕೋಟಿ ರೂ., ಬಾಷ್ ಅಟೊಮೋಟಿವ್ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈ. ಲಿ.ನ 1,330 ಕೋಟಿ ರೂ. ಸೇರಿದಂತೆ ಒಟ್ಟು 1,520.17 ಕೋಟಿ ರೂ. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೂ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ 1,329 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ತಿದ್ದುಪಡಿ ಯೋಜನೆಗಳ ಪ್ರಸ್ತಾವನೆಗಳನ್ನು ಕಾರ್ಯಗತಗೊಳಿಸಲು ಸಮಯ ವಿಸ್ತರಣೆಗೆ ಮತ್ತು ಹೆಚ್ಚುವರಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮಿತಿಯು ಒಪ್ಪಿಗೆ ನೀಡಿದೆ.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ, ಇಂಧನ ಸಚಿವ ಕೆ. ಜೆ. ಜಾರ್ಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ ಸಿಂಗ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Published On - 9:17 pm, Wed, 28 May 25