ಬಿಪೊರ್ ಜಾಯ್ ಅಬ್ಬರ, ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್, ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ

ಬಿಪರ್ ಜಾಯ್ ಚಂಡಮಾರುತ ತೀವ್ರಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಅಲ್ಲದೆ, ಮುಂದಿನ 5 ದಿನ ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಪೊರ್ ಜಾಯ್ ಅಬ್ಬರ, ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್, ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ
Rakesh Nayak Manchi

Updated on: Jun 14, 2023 | 3:27 PM

ಮಂಗಳೂರು: ಬಿಪೊರ್ ಜಾಯ್ ಚಂಡಮಾರುತ (Biparjoy Cyclone) ತೀವ್ರಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಅಲೆ ಏಳುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು (India Meteorological Department) ಅಲರ್ಟ್ ಘೋಷಣೆ ಮಾಡಿದೆ. ಯಾವುದೇ ಕಾರಣಕ್ಕೂ ಮುಂದಿನ 5 ದಿನ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದ್ದು, ಸಮುದ್ರದ ಹತ್ತಿರ ಓಡಾಡುವುದು, ಆಟವಾಡುವುದು ಕೂಡಾ ನಿಷೇಧಿಸಿ ದಕ್ಷಿಣಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆದೇಶ ಹೊರಡಿಸಿದೆ.

ದಕ್ಷಿಣಕನ್ನಡ ಜಿಲ್ಲೆಯು 42 ಕಿ.ಮೀ ಕರಾವಳಿ ತೀರ ಹೊಂದಿದೆ. ಪಶ್ಚಿಮ ಕರಾವಳಿಗೆ ಬಿಪರ್ ಜಾಯ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹಿನ್ನೆಲೆ ಎಚ್ಚರಿಕೆ ನೀಡಲಾಗಿದ್ದು, ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಜೂನ್ 19 ರ ವರೆಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Cyclone Biparjoy: ಚಂಡಮಾರುತ ಸಮಯದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಸಲಹೆ ನೀಡಿದ ಎನ್​ಡಿಆರ್​ಎಫ್

ಈಶಾನ್ಯ ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜಾಯ್ ಚಂಡಮಾರುತವು ಮತ್ತಷ್ಟು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು ಬೆಳಿಗ್ಗೆ ಸೌರಾಷ್ಟ್ರ ಮತ್ತು ಕಚ್ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಇತರ ರಾಜ್ಯಗಳಿಗೂ ಚಂಡಮಾರುತ ಅಪ್ಪಳಿಸಲಿದೆ ಎಂದು ನಿರೀಕ್ಷಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಬಿಪೊರ್‌ ಜಾಯ್ ಚಂಡಮಾರುತದ ಬಗ್ಗೆ ಸಭೆಯನ್ನು ನಡೆಸಿ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಯಾವುದೇ ಸಾವು ನೋವುಗಳು ದಾಖಲಾಗದಂತೆ ಹಾಗೂ ಸಂಭವನೀಯ ಹಾನಿಯನ್ನು ಕಡಿಮೆ ಮಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ, ಸಚಿವರಿಗೆ ಸೂಚನೆ ನೀಡಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಚಂಡಮಾರುತದ ಪ್ರಭಾವ ಬೀರಿರುವ ರಾಜ್ಯದ ಎಂಟು ಜಿಲ್ಲೆಗಳ ಸಂಸದರು ಸಭೆಯಲ್ಲಿ ಭಾಗವಹಿಸಿದ್ದರು. ಬಿಪರ್‌ಜೋಯ್ ಚಂಡಮಾರುತವು ಜೂನ್ 15 ರಂದು ಗುಜರಾತ್ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ.

ಇದನ್ನೂ ಓದಿ: Biparjoy Cyclone: ಬೆಳೆಹಾನಿ ನಷ್ಟ ಪರಿಹಾರ ಹೆಚ್ಚಿಸಲು ಕೇಂದ್ರಕ್ಕೆ ಕೃಷ್ಣಭೈರೇಗೌಡ ಮನವಿ

ಗುಜರಾತ್‌ನ ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಬಿಪರ್‌ಜೋಯ್‌ ಚಂಡಮಾರುತದ ಪ್ರಭಾವದಿಂದ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಎರಡು ದಿನಗಳ ಮೊದಲೇ ಅಧಿಕಾರಿಗಳು ಕರಾವಳಿ ಪ್ರದೇಶಗಳಿಂದ 30,000 ಜನರನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿದ್ದಾರೆ.

ಹವಾಮಾನ ಇಲಾಖೆಯ ಪ್ರಕಾರ, ಚಂಡಮಾರುತವು ಗಂಟೆಗೆ ಐದು ಕಿಲೋಮೀಟರ್ ವೇಗದಲ್ಲಿ ಉತ್ತರಾಭಿಮುಖವಾಗಿ ಚಲಿಸುತ್ತಿದೆ ಮತ್ತು ಗುಜರಾತ್‌ನ ಪೋರಬಂದರ್‌ನಿಂದ ಸುಮಾರು 290 ಕಿಮೀ ನೈಋತ್ಯಕ್ಕೆ ಅಪ್ಪಳಿಸಲಿದೆ. ಇದು ಗುರುವಾರ ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಹಾಗೂ ಪಕ್ಕದ ಪಾಕಿಸ್ತಾನದ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ ಎಂದು ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us