
ಮಂಗಳೂರು, (ಸೆಪ್ಟೆಂಬರ್ 23): ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಕೇಸಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi ) ಅವರನ್ನು ಗಡಿಪಾರು ಮಾಡಲಾಗಿದೆ. ಒಂದು ವರ್ಷ ಅವಧಿಗೆ ದಕ್ಷಿಣ ಕನ್ನಡ (Dakshina kannada) ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ಇವೆ. ಹೀಗಾಗಿ ಇವರನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಇದೀಗ ಈ ಕ್ರಮ ಕೈಗೊಳ್ಳಲಾಗಿದೆ.
ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಇನ್ನೂ ಕೂಡ ಗಡಿಪಾರು ಪ್ರಕ್ರಿಯೆ ನಡೆದಿಲ್ಲ. ಯಾಕಂದ್ರೆ ಗಡಿಪಾರು ನೋಟಿಸ್ ಅನ್ನು ಪೊಲೀಸರು ಖುದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನೀಡಬೇಕು. ಅದಾದ ಬಳಿಕ ಗಡಿಪಾರು ಪ್ರಕ್ರಿಯೆ ನಡೆಯುತ್ತದೆ.
ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ ಅವರು ಹಲವು ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದಾರೆ. ಸೌಜನ್ಯ ಪರ ಹೋರಾಟದಲ್ಲೂ ಸಹ ಇವರು ಮುಂಚೂಣಿಯಲ್ಲಿದ್ದರು. ಅಲ್ಲದೇ ಧರ್ಮಸ್ಥಳ ಪ್ರಕರಣದಲ್ಲೂ ಸಹ ಕಾಣಿಸಿಕೊಂಡಿದ್ದು, ಈ ಸಂಬಂಧ ಇವರ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧವೂ ಸಹ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದರು. ಸದ್ಯ ಇವರ ವಿರುದ್ಧ ಸುಮಾರು 32 ಪ್ರಕರಣ ಇದ್ದು, ವಿಚಾರಣೆ ಹಂತದಲ್ಲಿವೆ.
Published On - 4:35 pm, Tue, 23 September 25