Mangalore News: ಮಂಗಳೂರಿನಲ್ಲಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು

ಬಸ್ ಇಳಿದು ರಸ್ತೆ ದಾಟುತ್ತಿದ್ದಗಾ ವೇಗವಾಗಿ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಸ್ಥಳದಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.

Mangalore News: ಮಂಗಳೂರಿನಲ್ಲಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ಮಂಗಳೂರಿನಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
Rakesh Nayak Manchi

Updated on: Mar 30, 2023 | 3:47 PM

ಮುಖ್ಯಾಂಶಗಳು

  • ಮಂಗಳೂರಿನಲ್ಲಿ ಖಾಸಗಿ ಬಸ್​ಗಳ ವೇಗದ ಚಾಲನೆ, ಸಾರ್ವಜನಿಕರ ಜೀವಕ್ಕೆ ಆಪತ್ತು
  • ಮಂಗಳೂರಿನಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್, ಮಹಿಳೆ ಸ್ಥಳದಲ್ಲೇ ಸಾವು
  • ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರೊಂದಿಗೆ ಸಾರ್ವಜನಿಕರ ವಾಗ್ವಾದ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಖಾಸಗಿ ಬಸ್​ಗಳು ಅತಿವೇಗವಾಗಿ ಸಂಚರಿಸುವ ಮೂಲಕ ಸಾರ್ವಜನಿಕರ, ಪಾದಚಾರಿಗಳ ಜೀವಕ್ಕೆ ಕುತ್ತು ತರುತ್ತಿವೆ. ಇತ್ತೀಚೆಗಷ್ಟೇ ಪ್ರೈವೆಟ್ ಬಸ್ ಚಾಲಕನೋರ್ವ ಅತಿವೇಗವಾಗಿ ಬಸ್ ಚಲಾಯಿಸಿಕೊಂಡು ಬಂದು ಡಿಕ್ಕಿ (Accident in Mangaluru) ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತನ್ನ ತಾಯಿಯೊಂದಿಗೆ ಹಿಂಬದಿ ಕುಳಿತುಕೊಂಡ ಹೋಗುತ್ತಿದ್ದ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ನಗರದ ನಿವಾಸಿಗಳ ನೆನಪಿನಲ್ಲಿ ಇನ್ನೂ ಹಸಿರಾಗಿಯೇ ಉಳಿದಿರುವಾಗಲೇ ಅಂತಹದ್ದೇ ಮತ್ತೊಂದು ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಐರಿನ್ ಡಿಸೋಜಾ (65) ಮೃತ ದುರ್ದೈವಿಯಾಗಿದ್ದಾರೆ. ಅವರು ಸರಿಪಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬಂದು ಇಳಿದ ಐರಿನ್ ಡಿಸೋಜಾ ರಸ್ತೆ ದಾಟಲು ಮುಂದಾಗಿದ್ದಾರೆ. ಈ ವೇಳೆ ವೇಗವಾಗಿ ಬರುತ್ತಿದ್ದ ಯಮಸ್ವರೂಪಿ ಬಸ್, ಐರಿನ್ ಡಿಸೋಜಾಗೆ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂಭಾಗದ ಚಕ್ರ ಮಹಿಳೆಯ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ನಂತರ ಬಸ್ ಸಹಿತವಾಗಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಮಂಗಳೂರು: ನರ್ತನ ವೇಳೆಯೇ ಕುಸಿದು ಬಿದ್ದು ದೈವ ನರ್ತಕ‌ ಸಾವು

ಘಟನಾ ಸ್ಥಳಕ್ಕೆ ಸಂಚಾರ ಎಸಿಪಿ ಹಾಗೂ ಇತರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವೂ ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ ಸ್ಥಳದಲ್ಲಿ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ವಾಗ್ವಾದವೂ ನಡೆಯಿತು. ಮೃತ ಮಹಿಳೆಯ ಪಾರ್ಥಿವ ಶರೀರವನ್ನು ಸಾರ್ವಜನಿಕರ ನೆರವಿನಿಂದ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನೇ ಆಧರಿಸಿ ಆರೋಪಿಯ ಬಂಧನಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಸಾವು

ಮಂಗಳೂರು: ನಗರದ ಕೆಪಿಟಿ ಬಳಿಯ ಬಹುಮಹಡಿ ಕಟ್ಟಡದ 14ನೇ ಮಹಡಿಯಿಂದ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಅಪಾರ್ಟ್‌ಮೆಂಟ್ 14ನೇ ಮಹಡಿಯಲ್ಲಿ ವಾಸವಿದ್ದ ಅಬ್ದುಲ್ ಸಲೀಂ ಎಂಬುವವರ ಪುತ್ರ ಮೊಹಮ್ಮದ್ ಶಾಮಲ್ (21) ಮೃತಪಟ್ಟ ಯುವಕ. ಇಂದು (ಮಾರ್ಚ್ 30 ರಂದು) ಮುಂಜಾನೆ 4.45 ರ ಸುಮಾರಿಗೆ ಕಟ್ಟಡದಿಂದ ಬಿದ್ದು ಮೊಹಮ್ಮದ್ ಶಾಮಲ್ ಸಾವನ್ನಪ್ಪಿದ್ದಾನೆ ಎಂದು ಕೆಲವು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಎಜೆ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮೃತ ಯುವಕನ ಚಿಕ್ಕಪ್ಪ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Thu, 30 March 23

Follow Us