Mangaluru News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ; ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ

|

Updated on: Jul 29, 2023 | 1:27 PM

ಮಂಗಳೂರು ನಗರವೊಂದರಲ್ಲೇ ಒಟ್ಟು 51 ಡೆಂಗ್ಯೂ ಜ್ವರ ಪ್ರಕರಣಗಳು ವರದಿಯಾಗಿವೆ. ಗ್ರಾಮೀಣ ಭಾಗದಲ್ಲಿ ಡೆಂಗ್ಯೂ ನಿಯಂತ್ರಣದಲ್ಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

Mangaluru News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ; ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ
ಸಾಂದರ್ಭಿಕ ಚಿತ್ರ
Follow us on

ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dkshina Kannada District) ಕಳೆದ ಒಂದು ತಿಂಗಳಿಂದ ಭಾರೀ ಮಳೆಯಾಗುತ್ತಿದ್ದು, ಡೆಂಗ್ಯೂ ಜ್ವರ ಪ್ರಕರಣಗಳು (Dengue Cases) ಕೂಡ ಹೆಚ್ಚಾಗಿವೆ. ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸುಮಾರು 24 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಜನವರಿಯಿಂದ ಜುಲೈ ಮೊದಲ ವಾರದವರೆಗೆ 72 ಡೆಂಗ್ಯೂ ಜ್ವರ ಪ್ರಕರಣಗಳು ದಾಖಲಾಗಿದ್ದವು. ಜೂನ್‌ನಿಂದ ಜುಲೈ ಮೊದಲ ವಾರದವರೆಗೆ 24 ಪ್ರಕರಣಗಳು ವರದಿಯಾಗಿವೆ.

ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮೂಲಗಳು ತಿಳಿಸಿವೆ.

ಕಳೆದ 15 ದಿನಗಳಿಂದ ಪರಿಸ್ಥಿತಿ ಬದಲಾಗಿದೆ. ಹೆಚ್ಚಿನ ಮನೆಗಳ ಸುತ್ತಮುತ್ತಲ ವಾತಾವರಣ ಕೂಡ ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಮಾರ್ಪಟ್ಟಿರುವುದನ್ನು ಆರೋಗ್ಯ ಕಾರ್ಯಕರ್ತರು ಗಮನಿಸಿದ್ದಾರೆ. ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಜನರು ಹೆಚ್ಚು ಜಾಗರೂಕರಾಗಿರಬೇಕು. ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಳವಾಗಿವೆ ಎಂದು ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣಾಧಿಕಾರಿ ಡಾ. ನವೀನಚಂದ್ರ ಕುಲಾಲ್ ತಿಳಿಸಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮಂಗಳೂರು ನಗರವೊಂದರಲ್ಲೇ ಒಟ್ಟು 51 ಡೆಂಗ್ಯೂ ಜ್ವರ ಪ್ರಕರಣಗಳು ವರದಿಯಾಗಿವೆ. ಗ್ರಾಮೀಣ ಭಾಗದಲ್ಲಿ ಡೆಂಗ್ಯೂ ನಿಯಂತ್ರಣದಲ್ಲಿದೆ. ಆದರೆ ನಗರದ ಎಲ್ಲಾ ವಾರ್ಡ್‌ಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚುತ್ತಿದೆ. ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ 170 ಮಂದಿ ಸುಮಾರು 5000 ಮನೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ. 30 ಸಿಬ್ಬಂದಿ, 80 ಆಶಾ ಕಾರ್ಯಕರ್ತೆಯರು, 60 ಎಂಪಿಡಬ್ಲ್ಯುಗಳು ಸೇರಿದಂತೆ ಸಿಬ್ಬಂದಿಯು ಮನೆಮನೆಗಳಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಹೂದಾನಿಗಳು, ಟೈರುಗಳು, ಟೈಲ್ಸ್ ಮತ್ತು ಹಳೆಯ ಸಾಮಗ್ರಿಗಳಲ್ಲಿ ಮಳೆ ನೀರು ಸಂಗ್ರಹವಾಗುವುದನ್ನು ತಪ್ಪಿಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಸುಮಾರು 1,300 ಆಶಾ ಕಾರ್ಯಕರ್ತೆಯರು ಇದೇ ರೀತಿಯ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ ಎಂದು ನವೀನಚಂದ್ರ ಕುಲಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Dengue Fever: ಡೆಂಗ್ಯೂ ಬಾರದಂತೆ ತಡೆಯುವುದು ಹೇಗೆ? ಸೋಂಕಿನ ಲಕ್ಷಣ, ಚಿಕಿತ್ಸೆ ಬಗ್ಗೆ ಇಲ್ಲಿದೆ ವಿವರ

ಹವಾಮಾನ ವೈಪರೀತ್ಯದಿಂದ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ 48 ಮಲೇರಿಯಾ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 21 ಮಂದಿ ಇತರ ಜಿಲ್ಲೆಗಳು ಮತ್ತು ಇತರ ರಾಜ್ಯಗಳಿಂದ ಬಂದವರು ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ