ಧರ್ಮಸ್ಥಳ ಪ್ರಕರಣ: ಅನಾಮಿಕನ ವಶಕ್ಕೆ ಪಡೆಯಲು ಚಿಂತನೆ, ಕಾನೂನು ಅಡ್ಡಿ ನಿವಾರಣೆಗೆ ಎಸ್ಐಟಿ ಪ್ಲಾನ್ ಹೀಗಿದೆ ನೋಡಿ!
ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಉತ್ಖನನವನ್ನು ಸ್ಥಗಿತಗೊಳಿಸಲಾಗಿದ್ದು, ಅನಾಮಿಕ ದೂರುದಾರನನ್ನು ಎಸ್ಐಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ಸುಳ್ಳು ದೂರು ನೀಡಿದ ಅನುಮಾನದ ಮೇಲೆ ಎಸ್ಐಟಿ ಕೋರ್ಟ್ಗೆ ಅರ್ಜಿ ಸಲ್ಲಿಸಲು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಾಕ್ಷಿ ಆಗಿರುವುದರಿಂದ ಅನಾಮಿಕನನ್ನು ವಶಕ್ಕೆ ಪಡೆಯುವುದು ಎಸ್ಐಟಿಗೆ ಕಷ್ಟಸಾಧ್ಯ. ಆದಾಗ್ಯೂ, ಆತನನ್ನು ವಶಕ್ಕೆ ಪಡೆಯಲು ಎಸ್ಐಟಿ ಮುಂದಿರುವ ಕಾನೂನು ಆಯ್ಕೆಗಳೇನು ಎಂಬ ಮಾಹಿತಿ ಇಲ್ಲಿದೆ.

ಮಂಗಳೂರು, ಆಗಸ್ಟ್ 19: ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಅನಾಮಿಕ ನೀಡಿರುವ ದೂರಿನಂತೆ ನಡೆಸಲಾಗುತ್ತಿದ್ದ ಉತ್ಖನನವನ್ನು ಸದ್ಯಕ್ಕೆ ಸ್ಥಗಿತಗೊಳಿಸಿರುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಸೋಮವಾರ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಎಸ್ಐಟಿ ಅನಾಮಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ದೂರಿನ ಮೇಲೆಯೇ ಸದ್ಯ ಅನುಮಾನ ವ್ಯಕ್ತವಾದ ಕಾರಣ ಆತನನ್ನು ವಶಕ್ಕೆ ಪಡೆಯಲು ಎಸ್ಐಟಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಆತನನ್ನು ಸುಪರ್ದಿಗೆ ಪಡೆದು ವಿಚಾರಣೆಗೆ ಒಳಪಡಿಸಿದರೆ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆ ಇರುವುದರಿಂದ ಈ ಕ್ರಮಕ್ಕೆ ಎಸ್ಐಟಿ ಮುಂದಾಗಿದೆ ಎನ್ನಲಾಗಿದೆ. ಆದರೆ, ದೂರುದಾರ ಸಾಕ್ಷ್ಯವೂ ಆಗಿರುವುದರಿಂದ ಆತನನ್ನು ವಶಕ್ಕೆ ಪಡೆಯಲು ಕಾನೂನು ತೊಡಕು ಎದುರಾಗಿದೆ.
ಅನಾಮಿಕನ ವಶಕ್ಕೆ ಪಡೆಯಲು ಎಸ್ಐಟಿಗಿರುವ ಕಾನೂನು ತೊಡಕೇನು?
ಅನಾಮಿಕ ದೂರುದಾರನನ್ನು ಸದ್ಯದ ಮಟ್ಟಿಗೆ ಪ್ರಕರಣದ ಸಾಕ್ಷಿಯನ್ನಾಗಿ ಪರಿಗಣಿಸಲಾಗಿದೆ. ಹೀಗಾಗಿ, ಸಾಕ್ಷ್ಯ ಸಂರಕ್ಷಣಾ ಕಾಯ್ದೆಯಡಿ ಆತ ರಕ್ಷಣೆಯಲ್ಲಿದ್ದಾನೆ. ಇದರಿಂದಾಗಿ ಆತನನ್ನು ವಶಕ್ಕೆ ಪಡೆಯುವುದು ಅಥವಾ ಬಂಧಿಸುವುದು ಸಾಧ್ಯವಿಲ್ಲ.
ಆದಾಗ್ಯೂ, ಕೆಲವು ಪ್ರಬಲ ವಿಚಾರಗಳನ್ನು ಮುಂದಿಟ್ಟುಕೊಂಡು ಆತನನ್ನು ವಶಕ್ಕೆ ಪಡೆಯಲು ಎಸ್ಐಟಿ ಉದ್ದೇಶಿಸಿದೆ ಎನ್ನಲಾಗಿದೆ. ಕೆಲ ಪ್ರಬಲ ಸಾಕ್ಷ್ಯಗಳ ಮೂಲಕ ಕೋರ್ಟ್ಗೆ ಅರ್ಜಿ ಸಲ್ಲಿಸಲು ಎಸ್ಐಟಿ ಪ್ಲಾನ್ ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಅನಾಮಿಕನ ವಶಕ್ಕೆ ಪಡೆಯಲು ಎಸ್ಐಟಿ ಮುಂದಿರುವ ಆಯ್ಕೆಗಳೇನು?
- ಸುಳ್ಳು ಮಾಹಿತಿ ನೀಡಿದ ಅನುಮಾನವಿದೆ ಎಂದು ಕೋರ್ಟ್ಗೆ ವರದಿ ನೀಡುವ ಸಾಧ್ಯತೆ.
- ಈ ಮೂಲಕ ನ್ಯಾಯಾಲಯದಿಂದ ಅನಾಮಿಕನ ಬಂಧನಕ್ಕೆ ಅನುಮತಿ ಪಡೆಯಬಹುದು.
- ಸುಳ್ಳು ದೂರು ಅಥವಾ ತನಿಖೆಗೆ ಅಡ್ಡಿ ಆರೋಪಿಸಿ ಬೇರೆ FIR ದಾಖಲಿಸಿ ಬಂಧಿಸಬಹುದು.
- ಅನಾಮಿಕ ನೀಡಿದ ಮಾಹಿತಿಯು ಸುಳ್ಳು ಎಂದು ಸಾಕ್ಷ್ಯಗಳ ಮೂಲಕ ಸಾಬೀತು ಪಡಿಸಬೇಕು. ಆಗ Witness Protection Act ಅಡಿಯಲ್ಲಿ ಅವನಿಗೆ ದೊರೆಯುವ ರಕ್ಷಣೆ ಹಿಂತೆಗೆತ ಸಾಧ್ಯತೆ.
- ಎಸ್ಐಟಿ ಬಳಿ ಅನಾಮಿಕನ ವಿರುದ್ಧ ಸುಳ್ಳು ಮಾಹಿತಿ, ತಪ್ಪು ದೂರು, ತನಿಖೆಗೆ ಅಡ್ಡಿ ಕೊಟ್ಟಿದ್ದಾನೆ ಎಂಬ ಸಾಕ್ಷ್ಯ ಇರಬೇಕು.
- ಎಸ್ಐಟಿ ಆತನ ವಿರುದ್ಧ ಹೊಸ FIR (BNS 209, 227, 229 ಇತ್ಯಾದಿ ಅಡಿಯಲ್ಲಿ) ದಾಖಲಿಸಬಹುದು ಅಥವಾ ಇದೇ ಸಾಕ್ಷ್ಯಗಳ ಆಧಾರದಲ್ಲಿ ಕೋರ್ಟ್ಗೆ ಅರ್ಜಿ ಸಲ್ಲಿಸಬಹುದು.
- ಅನಾಮಿಕ ಸಾಕ್ಷಿ ಸುಳ್ಳು ಮಾಹಿತಿ ನೀಡಿದ್ದಾನೆ, ತನಿಖೆಗೆ ಅಡ್ಡಿಪಡಿಸಿದ್ದಾನೆ ಎಂಬ ನಿಖರ ಕಾರಣ ನೀಡುವುದು.
- ಅವನ ಹೇಳಿಕೆ ಮತ್ತು ನಂತರ ಪತ್ತೆಯಾದ ವಾಸ್ತವಾಂಶಗಳ ನಡುವಿನ ವೈರುಧ್ಯವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಡುವುದು.
- ಉತ್ಖನನದಲ್ಲಿ ಏನೂ ಸಿಗದಿರುವುದರ ಜೊತೆಗೆ ತಜ್ಞರ ಪ್ರಾಥಮಿಕ ವರದಿಗಳನ್ನು ಸಲ್ಲಿಸುವುದು.
ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಅನನ್ಯಾ ಭಟ್ ನಾಪತ್ತೆ ಅಸಲಿಯತ್ತೇನು? ರಿಪ್ಪನ್ ಪೇಟೆಗೆ ತೆರಳಿ ಮಾಹಿತಿ ಕಲೆ ಹಾಕಿದ ಎಸ್ಐಟಿ
ಅನಾಮಿಕನ ಬಗ್ಗೆ ಕೋರ್ಟ್ಗೆ ಮನವರಿಕೆ ಮಾಡಿಕೊಟ್ಟರೆ ಆಗ ಆತನನ್ನು ಸಾಕ್ಷಿಯಿಂದ ಆರೋಪಿಯಾಗಿ ಬದಲಾಯಿಸಲು ತಕ್ಕ ಆಧಾರ ಇದೆಯೇ ಎಂದು ಕೋರ್ಟ್ ನಿರ್ಧರಿಸುತ್ತದೆ. ಒಂದು ವೇಳೆ ಕೋರ್ಟ್, ಅನಾಮಿಕನನ್ನು ಆರೋಪಿಯನ್ನಾಗಿಸಲು ಅನುಮತಿ ನೀಡಿದರೆ ಆಗ ಎಸ್ಐಟಿ ವಶಕ್ಕೆ ಪಡೆಯಬಹುದಾಗಿದೆ. ಹೀಗಾಗಿ ಹಲವು ಆಯಾಮಗಳಲ್ಲಿ ಸಾಕ್ಷ್ಯ ಸಂಗ್ರಹಿಸಿ ಕೋರ್ಟ್ಗೆ ಸಲ್ಲಿಸಲು ಎಸ್ಐಟಿ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:56 am, Tue, 19 August 25



