Dharmasthala Laksha Deepotsava: ಇಂದಿನಿಂದ 5 ದಿನ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಧರ್ಮಸ್ಥಳದಲ್ಲಿ 1 ಲಕ್ಷಕ್ಕೂ ಅಧಿಕ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ಇಂದಿನಿಂದ ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ನವೆಂಬರ್ 20ರವರೆಗೆ ಲಕ್ಷದೀಪೋತ್ಸವ ನಡೆಯಲಿದೆ.

ಮಂಗಳೂರು, ನವೆಂಬರ್ 15: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ (Dharmasthala Laksha Deepotsava) ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವವು ಇಂದಿನಿಂದ ನವೆಂಬರ್ 20ರವರೆಗೆ ನಡೆಯಲಿದ್ದು, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ದೇವಾಲಯವನ್ನು ಸಂಪೂರ್ಣವಾಗಿ ಅಲಂಕರಿಸಲಾಗಿದೆ. ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಈ ಪ್ರಸಿದ್ಧ ಉತ್ಸವದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ.
ಇಂದು ಹೊಸಕಟ್ಟೆ ಉತ್ಸವ, ನವೆಂಬರ್ 16ರಂದು ಕೆರೆಕಟ್ಟೆ ಉತ್ಸವ, ನವೆಂಬರ್ 17ರಂದು ಲಲಿತೋದ್ಯಾನ ಉತ್ಸವ, ನವೆಂಬರ್ 18ರಂದು ಕಂಚಿಮಾರುಕಟ್ಟೆ ಉತ್ಸವ ಮತ್ತು ನವೆಂಬರ್ 19ರಂದು ಗೌರಿಮಾರುಕಟ್ಟೆ ಉತ್ಸವ ನಡೆಯಲಿದೆ. ನವೆಂಬರ್ 20ರಂದು ಬೆಳಿಗ್ಗೆ ಲಕ್ಷದೀಪೋತ್ಸವ ಮುಕ್ತಾಯಗೊಳ್ಳಲಿದ್ದು, ಸಂಜೆ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ.
ಇದನ್ನೂ ಓದಿ: ಧರ್ಮಸ್ಥಳ ಕೇಸ್: ಸರ್ಕಾರಕ್ಕೆ ವಿರೇಂದ್ರ ಹೆಗ್ಗಡೆ ಕೃತಜ್ಞತೆ
ನವೆಂಬರ್ 18 ಹಾಗೂ 19ರಂದು 93ನೇ ಸರ್ವಧರ್ಮ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನವಂಬರ್ 19ರಂದು ಮಂಜುನಾಥ ಸ್ವಾಮಿಯ ಮಹಾ ರಥೋತ್ಸವ ನಡೆಯಲಿದೆ. ಲಕ್ಷದೀಪೋತ್ಸವದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸುಮಾರು 9 ದಶಕಗಳಿಂದ ನಡೆಯುತ್ತಿರುವ ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನವು ನವೆಂಬರ್ 18 ಮತ್ತು 19ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಈ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರಿಹರಪುರದ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತಿ ಸ್ವಾಮಿ ವಹಿಸಲಿದ್ದಾರೆ. ಪತ್ರಕರ್ತ ಎ. ಸೂರ್ಯಪ್ರಕಾಶ್ ಪಂಡಿತ್ ಮತ್ತು ಅಂಕಣಕಾರ ತನ್ವೀರ್ ಅಹ್ಮದುಲ್ಲಾ ಅವರಿಂದ ಭಾಷಣಗಳು ನಡೆಯಲಿವೆ. ರಾತ್ರಿ 8.30ಕ್ಕೆ ಚೆನ್ನೈನ ವಿದುಷಿ ಶೀಲಾ ಉನ್ನಿಕೃಷ್ಣನ್ ನಿರ್ದೇಶನದ ಭರತನಾಟ್ಯ ನೃತ್ಯ ಗಾಯನ ನಡೆಯಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




