ಧರ್ಮಸ್ಥಳ ಪ್ರಕರಣ; ಬುರುಡೆ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಧರ್ಮಸ್ಥಳದ ಸುತ್ತಮುತ್ತ ನೂರಾರು ಶವ ಹೂತಿದ್ದಾಗಿ ಮಾಸ್ಕ್​ ಮ್ಯಾನ್ ಚಿನ್ನಯ್ಯ ಆರೋಪಿಸಿದ್ದು, ಬಳಿಕ ಎಸ್​ಐಟಿ ತನಿಖೆ ವೇಳೆ ಯಾವುದೇ ಮನುಷ್ಯನ ಕಳೇಬರಹಗಳು ಪತ್ತೆಯಾಗಿಲ್ಲ. ಬಳಿಕ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನೇ ಬಂಧಿಸಿ ಆತನನಿಂದ ಮಹತ್ವದ ಮಾಹಿತಿ ಸಂಗ್ರಹಿಸಿ ಜೈಲಿಗಟ್ಟಿದ್ದಾರೆ. ಇತ್ತ ಚಿನ್ನಯ್ಯ ಸಹ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಧರ್ಮಸ್ಥಳ ಪ್ರಕರಣ; ಬುರುಡೆ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ
ಚಿನ್ನಯ್ಯ
Edited By:

Updated on: Sep 16, 2025 | 7:34 PM

ಮಂಗಳೂರು, (ಸೆಪ್ಟೆಂಬರ್ 16): ಧರ್ಮಸ್ಥಳದ ಪ್ರಕರಣದಲ್ಲಿ (Dharmasthala mass burial case) ಜೈಲು ಪಾಲಾಗಿರುವ ಚಿನ್ನಯ್ಯನ (chinnaya) ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ. ಚಿನ್ನಯ್ಯ ಜೈಲು ಸೇರಿದ ಮೇಲೆ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ಜಾಮೀನು ನೀಡದಂತೆ ಎಸ್​ಐಟಿ ಪರ ವಕೀಲ ದಿವ್ಯರಾಜ್ ಹೆಗ್ಡೆ ಪುತ್ತೂರು  ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು. ಎರಡು ಕಡೆಯಿಂದ ವಾದ-ಪ್ರತಿವಾದ ಆಲಿಸಿದ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶ ವಿಜಯೇಂದ್ರ ಅವರು ಚಿನ್ನಯ್ಯನ ಜಾಮೀನು ಅರ್ಜಿ ವಜಾ ಮಾಡಿ ಇಂದು (ಸೆಪ್ಟೆಂಬರ್ 16) ಆದೇಶ ಹೊರಡಿಸಿದ್ದಾರೆ. ಇದರಿಂದ ಆರೋಪಿ ಚಿನ್ನಯ್ಯ ಜೈಲಿನಲ್ಲಿಯೇ ದಿನ ಕಳೆಯಬೇಕಾಗಿದೆ.

ಚಿನ್ನಯ್ಯ ತೋರಿಸಿದ್ದ ಜಾಗಗಳಲ್ಲಿ ಅಗೆದು ನೋಡಿದರೂ ಸಹ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಕೊನೆಗೆ ಎಸ್​ಐಟಿ ಅಧಿಕಾರಿಗಳೇ ಚಿನ್ನಯ್ಯನನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದು, ಈ ವೇಳೆ ಕಲೆ ಮಹತ್ವ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಸದ್ಯ ಚಿನ್ನಯ್ಯಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಭದ್ರತಾ ಕಾರಣಗಳಿಂದಾಗಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಶವ ಹೂತಿಟ್ಟ ಕೇಸ್​: ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ, ಶಿವಮೊಗ್ಗ ಜೈಲಿಗೆ ಶಿಫ್ಟ್

ಹೆಚ್ಚು ಕಡಿಮೆ ಎರಡು ತಿಂಗಳು ಬುರುಡೆ ಬಿಟ್ಟಿದ್ದ ಚಿನ್ನಯ್ಯ, ಧರ್ಮಸ್ಥಳ ಸುತ್ತ ಮುತ್ತ 17 ಗುಂಡಿ ಅಗೆಸಿದ್ದ. ಕೊನೆಗೆ ನಾನು ಹೇಳಿದ್ದೆಲ್ಲ ಸುಳ್ಳು ಅಂತಾ ತಪ್ಪೊಪ್ಪಿಕೊಂಡಿದ್ದ. ಕಳೆದ 15 ದಿನದಿಂದ ತೀವ್ರ ವಿಚಾರಣೆ ನಡೆಸಿ ಮಹತ್ವದ ದಾಖಲೆಗಳನ್ನ ಸಂಗ್ರಹಿಸಿರುವ ಎಸ್‌ಐಟಿ ಅಧಿಕಾರಿಗಳು, ಬುರುಡೆ ಮ್ಯಾನ್‌ನನ್ನ ಜೈಲಿಗಟ್ಟಿದ್ದರು.

ಇನ್ನು ಚಿನ್ನಯ್ಯನ ಹೇಳಿಕೆಗಳ ಆಧಾರದಲ್ಲಿ ಗಿರೀಶ್ ಮಟ್ಟೆಣ್ಣವರ್, ಜಯಂತ್ ಬಿ., ಯೂಟ್ಯೂಬರ್ ಗಳಾದ ಸಮೀರ್ ಎಂ.ಡಿ. ಅಭಿಷೇಕ್ ವಿಚಾರಣೆ ನಡೆಸಲಾಗಿದೆ. ಸೌಜನ್ಯಾ ನಾಪತ್ತೆ ಮತ್ತು ಶಂಕಾಸ್ಪದ ಸಾವು ವಿಚಾರದಲ್ಲಿ ಚಿನ್ನಯ್ಯನ ತನಿಖೆ ನಡೆಸುವಂತೆ ಸೌಜನ್ಯಾ ತಾಯಿ ಕುಸುಮಾವತಿ ದೂರು ನೀಡಿದ್ದರು.

ಎಸ್‌ಐಟಿ ರಚನೆ ಆಗುವ ಮೊದಲೇ ದೂರುದಾರ ಚಿನ್ನಯ್ಯ ಮತ್ತು ತಂಡ ಕೇರಳದ ಸಂಸದರೊಬ್ಬರನ್ನು ಭೇಟಿ ಮಾಡಿ, ಸಮಾಲೋಚನೆ ಮಾಡಿತ್ತು ಎಂದು ಹೇಳಲಾಗುತ್ತಿದೆ. ಈ ವಿಷಯದ ಸತ್ಯಾಸತ್ಯತೆ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:00 pm, Tue, 16 September 25