ಬಹುದಿನಗಳ ಕನಸು ನನಸು: ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ಸಚಿವ ಸಂಪುಟ ತೀರ್ಮಾನ
ಕರಾವಳಿಯ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆದಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯಾಗಿ ಘೋಷಣೆ ಮಾಡಬೇಕೆನ್ನುವ ಕರಾವಳಿಗರ ಬೇಡಿಕೆಯನ್ನು ಡಿಕೆ ಶಿವಕುಮಾರ್ ಸರ್ಕಾರ ಈಡೇರಿಸಿದೆ.

ಮಂಗಳೂರು, (ಸೆಪ್ಟೆಂಬರ್ 18): ಮಂಗಳೂರು, (ಸೆಪ್ಟೆಂಬರ್ 18): ಡಿಕೆ ಶಿವಕುಮಾರ್ ನೇತೃತ್ವದಲ್ಲಿಂದು ಮಂಗಳೂರಿನಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ, ತುಳು 2ನೇ ಆಡಳಿತ ಭಾಷೆಯಾಗಿ ಘೋಷಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಂದಿಗೆ ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಂತಾಗಿದ್ದು. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು (ಸೆಪ್ಟೆಂಬರ್ 18) ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಘೋಷಣೆ ಮಾಡಿದರು.
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಪ್ರಬಲ ವೇದಿಕೆಯಾಗಲಿದೆ.
ತುಳು ಭಾಷೆಗೆ ಐತಿಹಾಸಿಕ ಗೌರವ – ಕರ್ನಾಟಕದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ
ತುಳು ಕೇವಲ ಒಂದು ಭಾಷೆಯಲ್ಲ, ಕರಾವಳಿಯ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಅಸ್ಮಿತೆಯ ಜೀವನಾಡಿ. ತುಳು ಭಾಷೆಯ ಐತಿಹಾಸಿಕ ಮಹತ್ವವನ್ನು ಗೌರವಿಸಿ, ಕರ್ನಾಟಕ ಸರ್ಕಾರ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳುವನ್ನು ಘೋಷಿಸಿದೆ. ಉಡುಪಿ ಮತ್ತು… pic.twitter.com/q5slyXAZOZ
— DK Shivakumar (@DKShivakumar) September 18, 2026
ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರು. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:40 pm, Fri, 18 September 26




