ಮಂಗಳೂರು: ಮನೆ ಧ್ವಂಸ, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ವೃದ್ಧ ದಂಪತಿ

ಮಂಗಳೂರಿನ ಬಳಿ ಕಡಬ ತಾಲೂಕಿನಲ್ಲಿ ವಾಸಿಸುತ್ತಿದ್ದ ವೃದ್ಧ ದಂಪತಿಯ ಮನೆಯನ್ನು ಅಧಿಕಾರಿಗಳು ಧ್ವಂಸ ಮಾಡಿದ್ದಾರೆ. ಈ ಘಟನೆಯಿಂದಾಗಿ ದಂಪತಿಗಳು ತೀವ್ರ ಆಘಾತಕ್ಕೀಡಾಗಿದ್ದಾರೆ. ಭೂಮಿ ವಿವಾದದಿಂದಾಗಿ ಮನೆ ಕಳೆದುಕೊಂಡಿರುವ ದಂಪತಿಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮತಿ ಕೋರಿದ್ದಾರೆ.

ಮಂಗಳೂರು, ನವೆಂಬರ್​ 13: ದಯಾಮರಣ (Euthaniz) ಕೋರಿ ವೃದ್ಧ ದಂಪತಿ (Couple) ರಾಷ್ಟ್ರಪತಿಗಳಿಗೆ (Presedent) ಪತ್ರ ಬರೆದಿದ್ದಾರೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಇಂದು (ನ.13) ಏಕಾಏಕಿ ಧ್ವಂಸಗೊಳಿಸಲಾಗಿದೆ. ಇದರಿಂದ ಕಂಗಾಲು ಆಗಿರುವ ದಂಪತಿ ದಯಾಮರಣಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಮನೆ ಧ್ವಂಸಕ್ಕೆ ಕಾರಣ

ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯವರು. ದಂಪತಿ ಕೂಲಿ ಕೆಲಸ ನಿಮಿತ್ಯ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಆಗಮಿಸಿ, ಇಲ್ಲೇ ವಾಸಗಿದ್ದಾರೆ. ಕೌಕ್ರಾಡಿ ಗ್ರಾಮದ ಕಾವಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1 ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.

ದಂಪತಿಗೆ ಯಾವುದೆ ಪಿತ್ರಾರ್ಜಿತ ಆಸ್ತಿ ಇಲ್ಲ. ಆದ್ದರಿಂದ ಸರ್ಕಾರಿ ಜಾಗ 123/1 ರಲ್ಲಿನ ಕಾಪಿನಬಾಗಿಲು ಎಂಬಲ್ಲಿ ವಾಸವಾಗಿದ್ದಾರೆ. ದಂಪತಿ ನಿತ್ಯ ಕೂಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ.

ವೃದ್ಧ ದಂಪತಿ ಸರ್ಕಾರಿ ಜಾಗದಲ್ಲಿ ಇದ್ದಾರೆ ಎಂಬ ಕಾರಣಕ್ಕಾಗಿ ಬೆಳ್ತಂಗಡಿ ತಾಲೂಕಿನ ಅಶೋಕ್‌ ಆಚಾರ್ಯ ಎಂಬವರು ಇವರನ್ನು ಒಕ್ಕಲೆಬ್ಬಿಸುವ ಸಲುವಾಗಿ ಹೈಕೋರ್ಟ್​ನಲ್ಲಿ ದಾವೆ ಹೂಡಿದ್ದಾರೆ. ಸರ್ಕಾರಿ ಜಾಗ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣ ತಣ್ಣಗಾಗಿತ್ತು.

ಇದನ್ನೂ ಓದಿ: ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದಕ್ಕೆ ಕೇಸ್​ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ಆದರೆ, ಇದೀಗ ಅಧಿಕಾರಿಗಳು ಮನೆಯ ವಸ್ತುಗಳನ್ನು ಹೊರಗೆ ಎಸೆದು ಏಕಾಏಕಿ ಮನೆ ದ್ವಂಸ ಮಾಡಿದ್ದಾರೆ. ವೃದ್ಧ ದಂಪತಿ ಕಣ್ಣೀರು ಹಾಕಿದರೂ, ಕರಗದ ಅಧಿಕಾರಿಗಳು ಮನೆ ತೆರವುಗೊಳಿಸಿದ್ದಾರೆ. ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಆರ್ ಐ ಪೃಥ್ವಿರಾಜ್, ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ.

ಹೀಗಾಗಿ, ವೃದ್ಧ ದಂಪತಿ “ಒಂದು ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ. ಅಥವಾ ಅದಕ್ಕೆ ಸಾಧ್ಯವಿಲ್ಲ ಎಂಬುವುದಾದರೆ ದಯಮಾಡಿ ವೃದ್ಧರಾದ ನಮಗೆ ದಯಾಮರಣ ಅಥವಾ ಇನ್ನಾವುದೇ ರೀತಿಯಲ್ಲಿ ಒಳ್ಳೆಯ ಮರಣಕ್ಕೆ ಅವಕಾಶವನ್ನು ನೀಡಿ” ಎಂದು ರಾಷ್ಟ್ರಪತಿಯವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:55 am, Wed, 13 November 24

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us