ನಾಳೆ ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದಲ್ಲಿ ತೀವ್ರಗೊಂಡ ಮುಂಗಾರು ಮಳೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜುಲೈ 8ರ ಬುಧವಾರ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್, ಕೊಡಗಿನಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ರಜೆ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ. ಮಳೆ ಪೀಡಿತ ಪ್ರದೇಶಗಳಲ್ಲಿ ಸುರಕ್ಷತಾ ನಿಯಮ ಪಾಲಿಸಲು ಜಿಲ್ಲಾಡಳಿತಗಳು ಮನವಿ ಮಾಡಿವೆ.

ಮುಖ್ಯಾಂಶಗಳು
- ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ
- ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಈ ಜಿಲ್ಲೆಗಳ ಶಾಲೆಗೆ ರಜೆ
- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ
ಮಂಗಳೂರು, ಜು.7: ರಾಜ್ಯದಾದ್ಯಂತ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಮುಖ ತಾಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಜುಲೈ 8, ಬುಧವಾರ) ರಜೆ ಘೋಷಿಸಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪದವಿ ಪೂರ್ವ (ಪಿಯುಸಿ) ಕಾಲೇಜುಗಳಿಗೆ ಜುಲೈ 8ರ ಬುಧವಾರ ಕಡ್ಡಾಯ ರಜೆ ಇರಲಿದೆ. ಈ ರಜೆ ಆದೇಶವನ್ನು ಉಲ್ಲಂಘಿಸಿ ಯಾವುದೇ ಶಿಕ್ಷಣ ಸಂಸ್ಥೆಗಳನ್ನು ನಡೆಸಿದರೆ, ಅಂತಹ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51(b) ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂರು ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ ಜಿಲ್ಲೆಯ ನಿಪ್ಪಾಣಿ, ಖಾನಾಪುರ ಮತ್ತು ಬೆಳಗಾವಿ ತಾಲೂಕುಗಳ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ನಾಳೆ (ಬುಧವಾರ) ರಜೆ ನೀಡಲಾಗಿದೆ.
ಇದನ್ನೂ ಓದಿ: ರಾಜ್ಯದ ಒಂದೆಡೆ ವರುಣನ ಆರ್ಭಟ: ರಾಯಚೂರು, ಕೊಪ್ಪಳದಲ್ಲಿ ಮಳೆ ಇಲ್ಲದೆ ಕಂಗಾಲಾದ ರೈತರು
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಬುಧವಾರ ಸಾಗರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಸಾಗರ ತಹಶೀಲ್ದಾರ್ ಪ್ರತಿಭಾ ಅವರು ಆದೇಶ ಹೊರಡಿಸಿದ್ದಾರೆ.ಮಳೆ ಪೀಡಿತ ಪ್ರದೇಶಗಳಲ್ಲಿ ನದಿ, ಹಳ್ಳ-ಕೊಳ್ಳ ಹಾಗೂ ಜಲಪಾತಗಳ ಬಳಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೆರಳದಂತೆ ಹಾಗೂ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಆಯಾ ಜಿಲ್ಲಾಡಳಿತಗಳು ಮನವಿ ಮಾಡಿವೆ.
ಚಿಕ್ಕಮಗಳೂರಿನ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಮತ್ತು ಎನ್.ಆರ್.ಪುರ ಈ ಐದೂ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ನಾಳೆ ಕಡ್ಡಾಯ ರಜೆ ಇರಲಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:27 pm, Tue, 7 July 26




