ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

|

Updated on: Jul 05, 2024 | 3:04 PM

ಧರ್ಮಸ್ಥಳ ಮೇಳವೊಂದರಲ್ಲೇ ನಿರಂತರ 50 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಶುಕ್ರವಾರ ನಿಧನರಾದರು. ಸುಮಾರು 6 ದಶಕಗಳಿಗೂ ಹೆಚ್ಚು ಕಾಲ ಯಕ್ಷ ರಂಗದಲ್ಲಿ ಸೇವೆ ಸಲ್ಲಿಸಿದ ಕುಂಬ್ಳೆ ಶ್ರೀಧರ ರಾವ್ ಕಳೆದ ಕೆಲವು ವರ್ಷಗಳ ಹಿಂದೆ ಮೇಳದಿಂದ ನಿವೃತ್ತರಾಗಿದ್ದರು.

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ
ಕುಂಬ್ಳೆ ಶ್ರೀಧರ ರಾವ್
Follow us on

ಬೆಂಗಳೂರು, ಜುಲೈ 5: ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 50 ವರ್ಷಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆಯವರಾದ ಶ್ರೀಧರ ರಾವ್ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಿದ್ದರು. ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರನಾಗಿ 1948ರಲ್ಲಿ ಜನಿಸಿದ ಶ್ರೀಧರ ರಾವ್, ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಒಟ್ಟು 60 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ಸ್ತ್ರೀವೇಷಗಳಿಂದಲೇ ಪ್ರಸಿದ್ಧಿ, ರಾಜ ವೇಷಗಳಲ್ಲೂ ಎತ್ತಿದ ಕೈ

ಇರಾ ಸೋಮನಾಥೇಶ್ವರ ಮೇಳದ ಮೂಲಕ ಯಕ್ಷಗಾನ ವೃತ್ತಿಜೀವನ ಆರಂಭಿಸಿದ್ದ ಶ್ರೀಧರ ರಾವ್‌ ಯಕ್ಷಗಾನ ಕ್ಷೇತ್ರದ ದಿಗ್ಗಜ ಕಲಾವಿದರಾದ ಶೇಣಿ ಗೋಪಾಲಕೃಷ್ಣ ಭಟ್ಟರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು. ವೃತ್ತಿಜೀವನದ ಆರಂಭದಲ್ಲಿ ಸ್ತ್ರೀ ವೇಷಗಳಿಂದಲೇ ಪ್ರಸಿದ್ಧರಾದರು. ಶ್ರೀಧರ ರಾವ್​ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅಮ್ಮುದೇವಿ, ನಳ ದಮಯಂತಿಯ ದಮಯಂತಿ, ಭೀಷ್ಮ ವಿಜಯದ ಅಂಬೆ ಇತ್ಯಾದಿ ಪಾತ್ರಗಳಲ್ಲಿ ಜನಮನ ಗೆದ್ದಿದ್ದರು.

ಅಂಬಾ ರೂಪ ರೇಖಾ ಪ್ರಸಂಗದ ರಂಭೆಯಾಗಿ ಶ್ರೀಧರ ರಾವ್ ಅವರ ಅಭಿನಯವನ್ನು ಈಗಲೂ ಯಕ್ಷಗಾನ ಪ್ರೇಮಿಗಳು ಕೊಂಡಾಡುತ್ತಾರೆ. ಪುರುಷ ವೇಷಗಳಲ್ಲಿ ಈಶ್ವರ, ಲಕ್ಷ್ಮಣ, ಸುದರ್ಶನ ವಿಜಯದ ವಿಷ್ಣು ಇತ್ಯಾದಿ ಪಾತ್ರಗಳೂ ಅವರಿಗೆ ಖ್ಯಾತಿ ತಂದುಕೊಟ್ಟಿವೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ: ಓರ್ವ ಸಾವು, ಮತ್ತೋರ್ವ ಪವಾಡಸದೃಶ್ಯ ರೀತಿ ಪಾರು

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಬೆಂಗಳೂರಿನ ಆತ್ಮಾಲಯ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಟ್ರಸ್ಟ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

ಕೋವಿಡ್ ಲಾಕ್​​ಡೌನ್ ಸಂದರ್ಭದಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಆಯೋಜಿಸಿದ್ದ ಸರಣಿ ಆನ್​​ಲೈನ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಯಕ್ಷ ಪಯಣದ ಅನುಭವ ಹಂಚಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:03 pm, Fri, 5 July 24