
ಮಂಗಳೂರು, ಮೇ 01: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangaluru) ಹೊರವಲಯದ ಕುಡುಪು ಬಳಿ ಗುಂಪಿನಿಂದ ಕೇರಳ ಮೂಲದ ಮುಸ್ಲಿಂ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿ “ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ನಿರ್ದಿಷ್ಟ ಸಾಕ್ಷಿ ಸಿಕ್ಕಿಲ್ಲ” ಎಂದು ಪೊಲೀಸ್ ಆಯುಕ್ತ ಅನುಪಮ್ ಅರ್ಗವಾಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ 20 ಜನರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವವರಿಗಾಗಿ ಹುಡುಕಾಡುತ್ತಿದ್ದೇವೆ. ಘಟನಾ ಸ್ಥಳದಲ್ಲಿದ್ದ 15 ಜನರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಘಟನಾ ಸ್ಥಳದಲ್ಲಿ ಸಿಸಿಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದರು.
ಇನ್ನು, ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ ತೋರಿದ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್, ಹೆಡ್ಕಾನ್ಸ್ಟೇಬಲ್ ಪಿ.ಚಂದ್ರ, ಪಿಸಿ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ ಎಂದರು.
ಪ್ರಕರಣ ಸಂಬಂಧ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ ಮಾತನಾಡಿ, ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಕ್ಕೆ ಈ ಘಟನೆ ನಡೆದಿದೆ. ಇದೊಂದು ಕ್ರೈಂ, ಇದರಲ್ಲಿ ಬೇರೆ ರಾಜಕೀಯ ಮಾಡಬೇಡಿ. ಪಾಕಿಸ್ತಾನದ ಧ್ವಜ ರಸ್ತೆಗೆ ಹಾಕಿದ್ದಕ್ಕೆ ಅವನನ್ನು ಹೊಡೆದಿದ್ದಾರೆ ಎಂದು ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್ನವರು ಆರೋಪಿಸಿದ್ದಾರೆ. ಬಿಜೆಪಿ ನಾಯಕರ ಮೇಲೆ ಕೊಲೆ ಆರೋಪವನ್ನ ಮಾಡಿದ್ದಾರೆ. ಪಾಕ್ ಪರ ಘೋಷಣೆ ಕೂಗಿದವನಿಗೆ ಧರ್ಮ, ಜಾತಿ ಪಟ್ಟ ಕಟ್ಟಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಇದನ್ನೂ ಓದಿ: ಮಂಗಳೂರು ಗುಂಪು ಹಲ್ಲೆ ಪ್ರಕರಣ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣ, ಎಫ್ಐಆರ್ನಲ್ಲಿ ಉಲ್ಲೇಖ
ಮಂಗಳೂರಿನ ಹೊರವಲಯದ ಕುಡುಪು ಎಂಬಲ್ಲಿ ಏಪ್ರಿಲ್ 27ರ ಸಂಜೆ ಒಂದು ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕೇರಳದ ವಯನಾಡ್ ಮೂಲದ ಮೊಹಮ್ಮದ್ ಆಶ್ರಫ್ ಬಂದಿದ್ದಾನೆ.
ಕ್ರಿಕೆಟ್ ಆಡುತ್ತಿದ್ದವರಿಗೂ ಹಾಗೂ ಆತನ ಮಧ್ಯೆ ಗಲಾಟೆ ಉಂಟಾಗಿದೆ. ಈ ವೇಳೆ ಅಲ್ಲಿದ್ದ ಗುಂಪೊಂದು ಆತನನ್ನು ಹಿಗ್ಗಾಮುಗ್ಗಾ ಥಳಿಸಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಹಲ್ಲೆಗೆ ಕಾರಣವೆಂದು ಹೇಳಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಆಶ್ರಫ್ ಮರುದಿನ ಮೃತಪಟ್ಟಿದ್ದನು. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಅದು ಕೊಲೆ ಎನ್ನುವುದು ಬೆಳಕಿಗೆ ಬಂದಿತ್ತು.