AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪಿಲಿಚಾಮುಂಡಿ ದೈವಸ್ಥಾನದ ಭಂಡಾರ ಮನೆ ಧ್ವಂಸ, ಭಕ್ತರ ಬೃಹತ್​ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ, ಬಂಟ, ವೈದ್ಯನಾಥ ದೇವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರಮನೆಯನ್ನು ಮಾರ್ಚ 3ರ ರಾತ್ರಿ ಕಿಡಿಗೇಡಿಗಳು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದರು. ಇದನ್ನು ಖಂಡಿಸಿ ಭಕ್ತರು ಕೋಟೆಕಾರು ಪಟ್ಟಣ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಮಂಗಳೂರು: ಪಿಲಿಚಾಮುಂಡಿ ದೈವಸ್ಥಾನದ ಭಂಡಾರ ಮನೆ ಧ್ವಂಸ, ಭಕ್ತರ ಬೃಹತ್​ ಪ್ರತಿಭಟನೆ
ಧ್ವಂಸಗೊಂಡಿರುವ ಕಟ್ಟಡ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ|

Updated on: Mar 04, 2024 | 12:05 PM

Share

ಮಂಗಳೂರು, ಮಾರ್ಚ್​​ 04: ತುಳುನಾಡಿನ (Tulunadu) ಪುರಾಣ ಪ್ರಸಿದ್ಧ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದನ್ನು ಖಂಡಿಸಿ ಭಕ್ತರು ಕೋಟೆಕಾರು ಪಟ್ಟಣ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈವಗೊಳ್ಳಬೇಕು ಮತ್ತು ದೈವಸ್ಥಾನದ ಭಂಡಾರ ಮನೆ ಕಟ್ಟಡವನ್ನು ಮರು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದರು. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ (Ullal) ತಾಲೂಕಿನ ಕೊಂಡಾಣ (Kondan) ಕ್ಷೇತ್ರದ ಪಿಲಿಚಾಮುಂಡಿ, ಬಂಟ, ವೈದ್ಯನಾಥ ದೇವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರಮನೆಯನ್ನು ಮಾರ್ಚ 3ರ ರಾತ್ರಿ ಕಿಡಿಗೇಡಿಗಳು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದರು. ಪ್ರಕರಣ ಸಂಬಂಧ ಉಳ್ಳಾಲ ಪೊಲೀಸರು ಮುತ್ತಣ್ಣ ಶೆಟ್ಟಿ, ಧೀರಜ್ ಹಾಗೂ ಶಿವರಾಜ್ ಎಂಬವರನ್ನು ಬಂಧಿಸಿದ್ದಾರೆ.

ದೇವಸ್ಥಾನದ ಕಟ್ಟಡ ಧ್ವಂಸಗೊಳಿಸಲು ಕಾರಣ

ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸೇರುವ ಕೊಂಡಾಣ ದೇವಸ್ಥಾನದ ಭಂಡಾರ ಮನೆಯನ್ನು ಮುಜರಾಯಿ ಇಲಾಖೆಗೆ ಸೇರಿಸಲು ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಸೇರಿದಂತೆ ಹಲವರು ಯತ್ನಿಸಿದ್ದರು. ಆದರೆ ಇದಕ್ಕೆ ಖಾಸಗಿ ಭಂಡಾರ ಮನೆಯವರು ಸಮ್ಮತಿ ನೀಡಿರಲಿಲ್ಲ. ಅಲ್ಲದೆ, ಸಮಿತಿಯು ದೈವಗಳಿಗೆ ಬೇರೆ ಭಂಡಾರ ಮನೆ ನಿರ್ಮಾಣಕ್ಕೆ ಮುಂದಾಗಿತ್ತು.

ದೇಗುಲದ ಪಕ್ಕದ ಜಾಗದಲ್ಲಿ ಜನವರಿ 8 ರಂದು ಕೃಷ್ಣ ಶೆಟ್ಟಿ ನೇತ್ವತ್ವದಲ್ಲಿ ಭಂಡಾರ ಮನೆಯ ಶಿಲಾನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ ಕಾಮಗಾರಿ ಪೂರ್ಣಗೊಂಡಿತ್ತು. ಈ ಮಧ್ಯೆ ಸಮಿತಿಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ಅವರು ಎರಡು ದಿನದ ಹಿಂದಷ್ಟೇ ಅಧಿಕಾರ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಇಳಿಯುತ್ತಿದ್ದಂತೆ ಭಂಡಾರ ಮನೆ ಧ್ವಂಸಗೊಂಡಿದೆ.

ಇದನ್ನೂ ಓದಿ: ಮಂಗಳೂರು; ಕಾಲೇಜು ಆವರಣದಲ್ಲಿ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಜೆಸಿಬಿಯಿಂದ ಏಕಾಏಕಿ ನಿರ್ಮಾಣ ಹಂತದ ಭಂಡಾರ ಮನೆ ನೆಲಸಮಗೊಳಿಸಲಾಗಿದ್ದು, ಕಾರ್ಣಿಕ ದೈವದ ಕೋಟ್ಯಂತರ ರೂಪಾಯಿ ಒಡವೆಗಳ ಅಧಿಪತ್ಯಕ್ಕಾಗಿ ಸಂಘರ್ಷ ಇದಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ಮುತ್ತಣ್ಣ ಶೆಟ್ಟಿ ಕುಟುಂಬಸ್ಥರ ಸುಪರ್ದಿಯಲ್ಲೇ ಒಡವೆಗಳಿದ್ದು, ಘಟನೆ ಸಂಬಂಧ ಉಳ್ಳಾಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ ದೂರಿನ ಅನ್ವಯ ಐಪಿಸಿ 143, 147, 148, 295, 427 r/w 149 ipc and 2A kpdlp act ಅಡಿ ಎಫ್​ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ಉಳ್ಳಾಲ ಪೊಲೀಸರು ಮುತ್ತಣ್ಣ ಶೆಟ್ಟಿ, ಧೀರಜ್ ಹಾಗೂ ಶಿವರಾಜ್ ಎಂಬುವರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ತಪ್ಪೊಪ್ಪಿಗೆ

ಕೊಂಡಾಣ ಪಿಲಿಚಾಮುಂಡಿ ದೈವಸ್ಥಾನಕ್ಕೆ ಒಟ್ಟು 16 ಗುರಿಕಾರರು ಇದ್ದಾರೆ. ಇವರೆಲ್ಲರೂ ನೂತನ ಭಂಡಾರ ಮನೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಧಾರ್ಮಿಕ ದತ್ತಿ ಕಮಿಷನರ್ ಹಾಗೂ ತಹಶೀಲ್ದಾರ್​ಗೆ ದೂರು ನೀಡಲಾಗಿತ್ತು. ಹೀಗಿದ್ದರೂ ಕಾಮಗಾರಿ ನಡೆಯುತ್ತಿದ್ದ ಕಾರಣ ಧ್ವಂಸಗೈದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ