ಸುಹಾಸ್​ ಶೆಟ್ಟಿ ಹತ್ಯೆ ಆರೋಪಿಗಳಿಗೆ PFI ನಂಟು: ಕೊಲೆಗೆ ವಿದೇಶದಿಂದ ಹಣದ ನೆರವು..!

ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ನಡೆಸುತ್ತಿದೆ. 12 ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ಎನ್​ಐಎ ಅಧಿಕಾರಿಗಳ ಎದುರು ಸ್ಫೋಟಕ ಮಾಹಿತಿಯನ್ನು ಬಾಯಿ ಬಿಟ್ಟಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆಗಳ ವಿವರವನ್ನು ಎನ್​ಐಎ ಅಧಿಕಾರಿಗಳು ಪಡೆಯುತ್ತಿದ್ದಾರೆ. ಎನ್ಐಎ ತಂಡ ಹೆಚ್ಚಿನ ತನಿಖೆ ನಡೆಸುತ್ತಿದೆ.

ಸುಹಾಸ್​ ಶೆಟ್ಟಿ ಹತ್ಯೆ ಆರೋಪಿಗಳಿಗೆ PFI ನಂಟು: ಕೊಲೆಗೆ ವಿದೇಶದಿಂದ ಹಣದ ನೆರವು..!
ಪಿಎಫ್​ಐ, ಸುಹಾಸ್​ ಶೆಟ್ಟಿ
Edited By: ವಿವೇಕ ಬಿರಾದಾರ

Updated on: Jun 28, 2025 | 4:45 PM

ಮಂಗಳೂರು, ಜೂನ್​ 28: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ನಡೆಸುತ್ತಿದ್ದು, 12 ಮಂದಿ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಸ್ಫೋಟಕ ಮಾಹಿತಿ ಬಾಯಿ ಬಿಟ್ಟಿದ್ದಾರೆ. ಸುಹಾಸ್​ ಶೆಟ್ಟಿ ಹತ್ಯೆಗೆ ನೆರವು ನೀಡಿದವರ ಬಗ್ಗೆ ಆರೋಪಿಗಳಿಂದ ಎನ್ಐಎ ತಂಡ ಮಾಹಿತಿ ಕಲೆ ಹಾಕಿತ್ತಿದೆ.

ಬಂಧಿತ ಬಹುತೇಕ ಆರೋಪಿಗಳಿಗೆ ನಿಷೇಧಿತ ಪಿಎಫ್ಐ ಸಂಘಟನೆ ಜೊತೆ ನಂಟಿದೆ. ಅಲ್ಲದೆ, ಪಿಎಫ್​ಐ ಜೊತೆ ಗುರುತಿಸಿಕೊಂಡು ವಿದೇಶದಲ್ಲಿರುವ ಕೆಲವರು ಇವರಿಗೆ ಹಣದ ನೆರವು ನೀಡಿದ್ದಾರೆ. ಜೊತೆಗೆ ಸುಹಾಸ್​ ಶೇಟ್ಟಿ ಹತ್ಯೆಗೆ ನೆರವು ನೀಡಿದವರು ಮಂಗಳೂರು ಮತ್ತು ವಿದೇಶದಲ್ಲಿದ್ದು, ಅವರ ಹೆಸರುಗಳನ್ನು ಆರೋಪಿಗಳು ಎನ್​ಐಎ ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸದ್ಯ ಎನ್​ಐಎ ಅಧಿಕಾರಿಗಳು ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಪಿಎಫ್ಐ ನಂಟಿನ ಬಗ್ಗೆ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ.

ಸುಹಾಸ್​ ಹತ್ಯೆಗೆ ವಿದೇಶದಿಂದ ಫಂಡಿಂಗ್

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳ ಬ್ಯಾಂಕ್ ಖಾತೆಗಳಿಗೆ ವಿದೇಶದಿಂದ ಹಣ ಸಂದಾಯವಾಗಿದೆ. ಸದ್ಯ ಎನ್​ಐಎ ಅಧಿಕಾರಿಗಳು 12 ಆರೋಪಿಗಳ ಬ್ಯಾಂಕ್ ಖಾತೆ ವಿವರ ಸಂಗ್ರಹಿಸುತ್ತಿದ್ದಾರೆ. ಕೆಲ ಸ್ಥಳೀಯ ವ್ಯಕ್ತಿಗಳಿಂದಲೂ ಆರೋಪಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂದು ಎನ್​ಐಎ ತನಿಖೆ ವೇಳೆ ತಿಳಿದುಬಂದಿದೆ. ಪ್ರಕರಣದ ತನಿಖೆಯನ್ನು ಎನ್​ಐಎ DySP ಪವನ್ ಕುಮಾರ್ ನೇತೃತ್ವದ ತಂಡ ನಡೆಸುತ್ತಿದೆ.

ಇದನ್ನೂ ಓದಿ
ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ
ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌
ಸುಹಾಸ್​ ಕೊಲೆಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ: ಭಜರಂಗದಳ ಮುಖಂಡ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

ಎನ್​ಐಎ ತನಿಖೆಗೆ ಆಗ್ರಹಿಸಿದ್ದ ಕುಟುಂಬಸ್ಥರು

ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣವನ್ನು ಪೊಲೀಸರು ತನಿಖೆ ನಡೆಸಲು‌ ಆರಂಭಿಸಿದಾಗ ಎನ್​ಐಎಗೆ ಕೊಡುವ  ಅಗತ್ಯವಿಲ್ಲ ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಸುಹಾಸ್ ಶೆಟ್ಟಿ ಹೆತ್ತವರು ಎನ್​ಐಎ ತನಿಖೆ ಮೂಲಕ ಮಾತ್ರ ತಮ್ಮ ಮಗನ‌ ಸಾವಿಗೆ ನ್ಯಾಯ ಸಿಗುತ್ತೆ ಎಂದು ಹೇಳಿದ್ದರು. ಈ‌ ನಡುವೆ ಸುಹಾಸ್ ಶೆಟ್ಟಿ ಹೆತ್ತವರು ರಾಜ್ಯಪಾಲರ ಮೂಲಕ ಪ್ರಕರಣವನ್ನು ಎನ್​ಐಎಗೆ ನೀಡಲು ಒತ್ತಾಯಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸಂಸದ, ಶಾಸಕರು ಈ ಹತ್ಯೆಯ ಹಿಂದಿರುವ ಶಕ್ತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಗಮನಕ್ಕೂ ತಂದಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಯೇ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್​ಐಎಗೆ ವಹಿಸಿತ್ತು. ಇದೀಗ ಆರೋಪಿಗಳನ್ನು ವಶಕ್ಕೆ ಪಡೆದ ಎನ್ಐಎ ಎಲ್ಲ 12 ಆರೋಪಿಗಳ ವಿಚಾರಣೆ ನಡೆಸುತ್ತಿದೆ.

ಸುಹಾಸ್ ಶೆಟ್ಟಿ ಕೊಲೆ

ಕಳೆದ ಗುರುವಾರ (ಮೇ.01) ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ 12 ಮಂದಿ ಆರೋಪಿಗಳನ್ನು ಬಂಧಿಸಿಲಾಗಿದೆ. ಕೋರ್ಟ್​ ಆರೋಪಿಗಳನ್ನು ಎನ್​ಐಎ ವಶಕ್ಕೆ ನೀಡಿದೆ.

3 ತಿಂಗಳ ಹಿಂದೆಯೇ ಸುಹಾಸ್ ಕೊಲೆಗೆ ಸಿದ್ಧವಾಗಿತ್ತು ಸ್ಕೆಚ್

ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದ. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ಸುಹಾಸ್ ಹತ್ಯೆಗೆ 50 ಲಕ್ಷಕ್ಕೂ ಹೆಚ್ಚು ಫಂಡ್, ಬಜ್ಪೆ ಹೆಡ್ ಕಾನ್ಸ್‌ಟೇಬಲ್ ಕುತಂತ್ರ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಸುಹಾಸ್ ಕೊಲೆಗೆ ಹೇಗಿತ್ತು ಸಫ್ವಾನ್ ಪ್ಲಾನ್?

ಸುಹಾಸ್ ಶೆಟ್ಟಿ ಚಲನ ವಲನಗಳ ಮೇಲೆ ಪ್ರಮುಖ ಆರೋಪಿ ಸಫ್ವಾನ್ 15 ದಿನಗಳಿಂದ ಗಮನ ಇರಿಸಿದ್ದ. ಹುಡುಗರನ್ನು ಬಿಟ್ಟು ರೇಖಿ ಮಾಡಿಸಿದ್ದನು. ಚಿಕ್ಕಮಗಳೂರಿನ ಕಳಸಾದ ರಂಜಿತ್ ಹಾಗೂ ನಾಗರಾಜ್ 15 ದಿನಗಳಿಂದ ಸಫ್ವಾನ್ ಮನೆಯಲ್ಲೇ ಇದ್ದರು. ಸುಹಾಸ್ ಶೆಟ್ಟಿ ಬಜ್ಪೆಗೆ ಬರುವ ಬಗ್ಗೆ ಅಝರುದ್ಧಿನ್ ಮಾಹಿತಿ ನೀಡಿದ್ದನು. ಎಷ್ಟು ಗಂಟೆಗೆ ಸುಹಾಸ್ ಹೊರಡುತ್ತಾನೆ, ಅವನೊಂದಿಗೆ ಯಾರಿದ್ದಾರೆ ಎಂಬುದನ್ನು ಸಫ್ವಾನ್​​ಗೆ ಮಾಹಿತಿ ನೀಡಿದ್ದನು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Sat, 28 June 25

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us