AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳಕ್ಕೆ ಮತ್ತೆ ಅಡ್ಡಿ, ಪಿಲಿಕುಳದಲ್ಲಿ ಕಂಬಳ ನಡೆಸುವುದಕ್ಕೆ ಪ್ರಾಣಿಪ್ರಿಯರ ವಿರೋಧ: ಕೋರ್ಟ್‌ಗೆ ದೂರು

ಕರಾವಳಿಯ ಜನಪದ ಕ್ರೀಡೆ ಕಂಬಳದ ಈ ಬಾರಿಯ ಸೀಸನ್ ಶುರುವಾಗಿದೆ. ಆದರೆ, ಈ ಹಿಂದೆ ನಿಷೇಧದ ತೂಗುಗತ್ತಿಯಿಂದ ಸ್ವಲ್ಪದರಲ್ಲೇ ಬಚವಾಗಿರುವ ಕಂಬಳಕ್ಕೆ ಇದೀಗ ಮತ್ತೆ ಅಡ್ಡಿ ಎದುರಾಗಿದೆ. ಅದರಲ್ಲೂ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಕಂಬಳಕ್ಕೆ ಮತ್ತೆ ಅಡ್ಡಿ, ಪಿಲಿಕುಳದಲ್ಲಿ ಕಂಬಳ ನಡೆಸುವುದಕ್ಕೆ ಪ್ರಾಣಿಪ್ರಿಯರ ವಿರೋಧ: ಕೋರ್ಟ್‌ಗೆ ದೂರು
ಕಂಬಳ (ಸಂಗ್ರಹ ಚಿತ್ರ)
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma

Updated on: Nov 23, 2024 | 8:00 AM

ಮಂಗಳೂರು, ನವೆಂಬರ್ 23: ಕರಾವಳಿಯಲ್ಲಿರುವಷ್ಟು ಕಂಬಳದ ಕ್ರೇಝ್ ಬೇರೆಲ್ಲೂ ಕಾಣಸಿಗದು. ತುಳುನಾಡ ಜನಪದ ಕ್ರೀಡೆಯಾಗಿ ಬೆಳೆದಿರುವ ಕಂಬಳ ಇಂದು ಸಾಕಷ್ಟು ಪ್ರಸಿದ್ದಿಯನ್ನು ಪಡೆದಿದೆ. ಇಲ್ಲಿನ ರೈತಾಪಿ ಜನ ತಮ್ಮ ಕೃಷಿ ಕಾರ್ಯಗಳಿಗೆ ಬಳಸುವ ಕೋಣಗಳನ್ನು ಪಳಗಿಸಿ ಅವುಗಳನ್ನು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದು ಪ್ರತಿಷ್ಠೆ ಮೆರೆಯುವ ತನಕ ಈ ಕ್ರೀಡೆ ಬೆಳೆದು ನಿಂತಿದೆ. ವರ್ಷದಿಂದ ವರ್ಷಕ್ಕೆ ಕಂಬಳ ಪ್ರಸಿದ್ಧವಾಗುತ್ತಿದ್ದಂತೆಯೇ ಇತ್ತ ಕಂಬಳಕ್ಕೆ ನಿಷೇಧದ ಭೀತಿಯೂ ಹೆಚ್ಚಾಗುತ್ತಿದೆ.

ಕಂಬಳದಲ್ಲಿ ಪ್ರಾಣಿ ಹಿಂಸೆಯನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಸುಮಾರು ಆರು ವರ್ಷಗಳ ಹಿಂದೆ ಪ್ರಾಣಿದಯಾ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಆ ಬಳಿಕ ಕಂಬಳಕ್ಕೆ ತಡೆ ನೀಡಲಾಗಿತ್ತು. ಪರ ವಿರೋಧದ ಚರ್ಚೆ ನಡೆದು ಕೊನೆಗೆ ಸರ್ಕಾರ ಹೈಕೋರ್ಟ್ ಆದೇಶಕ್ಕೆ ಸುಗ್ರೀವಾಜ್ಞೆ ತರುವಲ್ಲಿಯೂ ಯಶಸ್ವಿಯಾಗಿತ್ತು. ಇದೀಗ ಮತ್ತೆ ದಕ್ಷಿಣಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನಡೆಯುವ ಕಂಬಳದ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಮೃಗಾಲಯದ ಸಮೀಪ ಕಂಬಳ ನಡೆಯುವುದರಿಂದ ಮೃಗಾಲಯದ ಪ್ರಾಣಿಗಳಿಗೆ ತೊಂದರೆಯಾಗುತ್ತದೆ ಎಂದು ಪ್ರಾಣಿಪ್ರಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪಿಲಿಕುಳದಲ್ಲಿ 13 ವರ್ಷಗಳಿಂದ ಸ್ಥಗಿತವಾಗಿದ್ದ ಕಂಬಳ

ಪಿಲಿಕುಳ ಮೃಗಾಲಯದ ಬಳಿ ನಡೆಯುತ್ತಿದ್ದ ಕಂಬಳ ಹದಿಮೂರು ವರ್ಷಗಳಿಂದ ಸ್ಥಗಿತವಾಗಿತ್ತು. ಹೀಗಾಗಿ ಈ ಬಾರಿಯ ಕಂಬಳ ಸೀಸನ್‌ನಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲೇ ಪಿಲಿಕುಳದಲ್ಲಿ ಸರ್ಕಾರಿ ಪ್ರಾಯೋಜಿತ ಕಂಬಳ ನಡೆಸುವುದಕ್ಕೆ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. ಕೇವಲ ಕಂಬಳ ಮಾತ್ರವಲ್ಲದೇ ಕೃಷಿ ಮತ್ತು ಜಾನುವಾರು ಮೇಳ, ಜಿಲ್ಲಾ ಮಟ್ಟದ ಜಾನಪದ ಕ್ರೀಡಾ ಕಾರ್ಯಕ್ರಮ ಸೇರಿದಂತೆ ನಾಲ್ಕು ದಿನಗಳ ತುಳುನಾಡು ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು.

Pilikula Kambala: Opposition to animal lovers, Karnataka High Court notice to Organizers, Govt

ಪಿಲಿಕುಳ

ಆದ್ರೆ ಮೃಗಾಲಯದ ಬಳಿ ಕಂಬಳ ನಡೆಸಿದರೆ ಶಬ್ದಮಾಲಿನ್ಯದಿಂದ ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಇದರ ಜೊತೆ 200ಕ್ಕೂ ಹೆಚ್ಚು ಜೋಡಿ ಕೋಣ ಸ್ಪರ್ಧೆ ನಡೆಯುವ ಸ್ಥಳಕ್ಕೆ ಬರುವುದರಿಂದ ಮೃಗಾಲಯದ ಪ್ರಾಣಿಗಳಿಗೆ ವಿವಿಧ ರೀತಿಯ ರೋಗ ರುಜಿನಗಳು ಹರಡುವ ಸಾಧ್ಯತೆ ಇದೆ ಎಂಬುದು ಪ್ರಾಣಿಪ್ರಿಯರ ವಾದ. ಹೀಗಾಗಿ ಹೈಕೋರ್ಟ್‌ನಲ್ಲಿ ಹಾಕಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಹೈಕೋರ್ಟ್ ಜಿಲ್ಲಾಡಳಿತ ಹಾಗೂ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ಕಂಬಳಕ್ಕೂ ವಿರೋಧ

Pilikula Kambala: Opposition to animal lovers, Karnataka High Court notice to Organizers, Govt

ಪಿಲಿಕುಳ ಕಂಬಳ ಮಾತ್ರವಲ್ಲದೇ ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೂ ಪ್ರಾಣಿ ಪ್ರಿಯರು ವಿರೋಧ ವ್ಯಕ್ತಪಡಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸದ್ಯ ಕಂಬಳ ನಡೆಸುವುದಕ್ಕೆ ಇವರ ವಿರೋಧವಿಲ್ಲ. ಆದರೆ, ನಡೆಸುವ ಸ್ಥಳಗಳ ಬಗ್ಗೆ ಹಾಗೂ ಪ್ರಾಣಿಗಳಿಗೆ ಆಗುವ ಹಿಂಸೆಯ ಬಗ್ಗೆ ಮಾತ್ರ ಇವರಿಗೆ ಆಕ್ಷೇಪವಿದೆ.

ಇದನ್ನೂ ಓದಿ: ಮಂಗಳೂರು: ಫ್ಯಾಷನ್ ಪ್ಯಾಂಟ್​ ಧರಿಸಿದವನ ಹಿಡಿದಿಟ್ಟು ಹೊಲಿಗೆ ಹಾಕಿದ ಪುಂಡರು: ವಿಡಿಯೋ ವೈರಲ್ ಆದ ಬೆನ್ನಲ್ಲೇ ಯುವಕ ಆತ್ಮಹತ್ಯೆಗೆ ಯತ್ನ

ಸದ್ಯ ಈ ದೂರಿನ ಸಂಬಂಧದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ