ತೆಂಕುತಿಟ್ಟು ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

ತೆಂಕುತಿಟ್ಟು ಯಕ್ಷರಂಗದ ಭೀಷ್ಮ ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು ಸಂಜೆ ನಿಧನ ಹೊಂದಿದ್ದು, ಯಕ್ಷ ಲೋಕ ಮತ್ತು ಅಭಿಮಾನಿಗಳು, ಕುಟುಂಬಸ್ಥರು ಕಂಬನಿ ಮಿಡಿಯುತ್ತಿದ್ದಾರೆ.

ತೆಂಕುತಿಟ್ಟು ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತರು ಇನ್ನಿಲ್ಲ
ಬಲಿಪ ನಾರಾಯಣ ಭಾಗವತರು
Edited By: Rakesh Nayak Manchi

Updated on: Feb 16, 2023 | 8:44 PM

ಬೆಂಗಳೂರು: ತೆಂಕುತಿಟ್ಟು ಯಕ್ಷರಂಗದ (Tenkuthittu Yakshagana) ಭೀಷ್ಮ ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು (Balipa Narayana Bhagavatha) ಇಂದು ಸಂಜೆ 6.30 ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ  ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದು, ಯಕ್ಷ ಲೋಕ ಮತ್ತು ಅಭಿಮಾನಿಗಳು, ಕುಟುಂಬಸ್ಥರು ಕಂಬನಿ ಮಿಡಿಯುತ್ತಿದ್ದಾರೆ. ಅಂತಿಮ ವಿಧಿ ವಿಧಾನಗಳು ಇಂದು ರಾತ್ರಿ 1.30 ಗಂಟೆಯ ಸುಮಾರಿಗೆ ಅವರ ಸ್ವಗ್ರಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ 1938ರ ಮಾರ್ಚ್ 13ರಂದು ಜನಿಸಿದ ಬಲಿಪರು, 7ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು 13ನೇ ವರ್ಷದಲ್ಲಿ ರಂಗ ಪ್ರವೇಶ ಮಾಡಿದ್ದರು. ಹೀಗೆ ಆರಂಭವಾದ ಯಕ್ಷ ಪ್ರಯಾಣ ಸುಮಾರು 60 ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಪಡ್ರೆ ಜಠಾಧಾರಿ ಮೇಳವನ್ನು ಇವರು ಮೊದಲಿಗೆ ಆರಂಭಿಸಿದರು. ಯಕ್ಷಗಾನದ 50ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ ಇವರಿಗಿದೆ. 30 ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ. ಕಪ್ಪು ಮೂರು, ಬಿಳಿ ಐದರ ಸ್ವರದಲ್ಲಿ ಬಲಿಪರು ಹಾಡುತ್ತಾರೆ. ಇವರ ಯಕ್ಷಗಾನದ ಸುದೀರ್ಘ ಸೇವೆಗಾಗಿ ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನವನ್ನು ಕಟ್ಟಿಸಿಕೊಟ್ಟಿದ್ದಾರೆ. ಬಲಿಪ ನಾರಾಯಣ ಭಾಗವತರು ಐದು ದಿನದ ದೇವೀ ಮಹಾತ್ಮೆ ಎಂಬ ಮಹಾಪ್ರಸಂಗವನ್ನು ರಚಿಸಿದ್ದು ವೇಣೂರಿನ ಕಜೆ ಸುಬ್ರಹ್ಮಣ್ಯ ಭಟ್ ಮತ್ತು ಅವರ ಸ್ನೇಹಿತರು ಇದನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: Javed Khan Amrohi: ‘ಲಗಾನ್​’ ಚಿತ್ರದಲ್ಲಿ ನಟಿಸಿದ್ದ ಹಿರಿಯ ಕಲಾವಿದ ಜಾವೇದ್​ ಖಾನ್​ ಅಮ್ರೋಹಿ ನಿಧನ

ಯಕ್ಷ ರಂಗದ ಇವರ ಸುದೀರ್ಘ ಸಾಧನೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2010, ಸಾಮಗ ಪ್ರಶಸ್ತಿ 2012, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ `ಜ್ಞಾನ ಪ್ರಶಸ್ತಿ’ 2003, ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ 2002, 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ `ಕರ್ನಾಟಕ ಶ್ರೀ ‘ಪ್ರಶಸ್ತಿ, 2003, ಪದವೀಧರ ಯಕ್ಷಗಾನ ಮಂಡಳಿ ಮುಂಬಯಿ `ಅಗರಿ ಪ್ರಶಸ್ತಿ’ 2002, ಕವಿ ಮುದ್ದಣ ಪುರಸ್ಕಾರ 2003 ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Thu, 16 February 23

Web contact

TV9 Kannada

Read More
Follow Us