AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ಮಾನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ

ಆರೋಗ್ಯ ಸಚಿವ ಯು.ಟಿ. ಖಾದರ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲಿಸಿ, ಖಾಸಗಿ ಆಸ್ಪತ್ರೆಗಳ ಅತಿಯಾದ ವಸೂಲಾತಿಗೆ ಕಡಿವಾಣ ಹಾಕಲು ಕಠಿಣ ನಿರ್ಧಾರ ಪ್ರಕಟಿಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಪರವಾನಗಿ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸರ್ಕಾರಿ ವೈದ್ಯರ ಕೊರತೆ ನೀಗಿಸಲು ವೇತನ ಹೆಚ್ಚಳ ಹಾಗೂ ಗುತ್ತಿಗೆ ವೈದ್ಯರ ಖಾಯಂ ಕುರಿತು ಕ್ರಮಕ್ಕೆ ಮುಂದಾಗಿದ್ದಾರೆ.

ಆಯುಷ್ಮಾನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ
ಯುಟಿ ಖಾದರ್ Image Credit source: Google
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jun 08, 2026 | 2:46 PM

Share

ಮಂಗಳೂರು, ಜೂ.8: ಯುಟಿ ಖಾದರ್​​ ಅವರು ಅಧಿಕಾರ ಸ್ವೀಕಾರ ಮಾಡಿದ ನಂತರ ತಮ್ಮ ಆಡಳಿತಕ್ಕೆ ಚುರುಕು ನೀಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಆಗಿರುವ ತಪ್ಪುಗಳನ್ನು ಹಾಗೂ ಕೆಲವೊಂದು ಬದಲಾವಣೆಗಳನ್ನು ಮಾಡಲು ಮುಂದಾಗಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಉನ್ನತ ಅಧಿಕಾರಿಗಳು ಹಾಗೂ ವೈದ್ಯಕೀಯ ತಂಡದ ಪ್ರಮುಖ ಸಭೆಯನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ನಡೆಸಿದ್ದಾರೆ. ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಬಲವರ್ಧನೆ ಮತ್ತು ಖಾಸಗಿ ಆಸ್ಪತ್ರೆಗಳ ಮನಸೋಇಚ್ಛೆ ವಸೂಲಾತಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಹಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

“ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯುವ ಬಿಪಿಎಲ್ (BPL) ಕಾರ್ಡ್‌ ಹೊಂದಿರುವ ಸಾರ್ವಜನಿಕರಿಂದ ಯಾವುದೇ ಖಾಸಗಿ ಆಸ್ಪತ್ರೆಗಳು ಹೆಚ್ಚುವರಿ ಹಣವನ್ನು ವಸೂಲಿ ಮಾಡುವಂತಿಲ್ಲ. ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಆಸ್ಪತ್ರೆಗಳಲ್ಲಿರುವ ಸರ್ಕಾರದ ‘ಆರೋಗ್ಯ ಮಿತ್ರ’ರ ಪಾತ್ರ ಅತ್ಯಂತ ಪ್ರಮುಖವಾಗಿದೆ. ರೋಗಿಗಳಿಗೆ ನೆರವಾಗುವಲ್ಲಿ ಆರೋಗ್ಯ ಮಿತ್ರರು ವಿಫಲರಾದರೆ ಅಥವಾ ಕರ್ತವ್ಯ ಲೋಪ ಎಸಗಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಷ್ಟೇ ಅಲ್ಲದೆ, ಸರ್ಕಾರದ ಉಚಿತ ಆರೋಗ್ಯ ಯೋಜನೆಗಳನ್ನು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನು (ಅನುಮತಿ) ಮುಲಾಜಿಲ್ಲದೆ ರದ್ದುಗೊಳಿಸಲಾಗುವುದು” ಎಂದು ಸಚಿವರು ಕಠಿಣ ಎಚ್ಚರಿಕೆ ನೀಡಿದರು. ಎಪಿಎಲ್ (APL) ಕಾರ್ಡ್‌ದಾರರಿಗೆ ಇದ್ದ 30-70 ಅನುಪಾತದ ಯೋಜನೆಯ ಬಗ್ಗೆಯೂ ಮರುಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ

ರಾಜ್ಯದಲ್ಲಿ ಕಾಡುತ್ತಿರುವ ಸರ್ಕಾರಿ ವೈದ್ಯರ ಕೊರತೆಯ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ವೈದ್ಯರನ್ನು ಸರ್ಕಾರಿ ಸೇವೆಯತ್ತ ಆಕರ್ಷಿಸಲು ಹೊಸ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. “ಹಳ್ಳಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಕಷ್ಟಪಟ್ಟು ಸೇವೆ ಸಲ್ಲಿಸುತ್ತಿರುವ ಸರ್ಕಾರಿ ವೈದ್ಯರ ವೇತನವನ್ನು ಹೆಚ್ಚಿಸಲು ಇಲಾಖೆ ನಿರ್ಧರಿಸಿದೆ. ಇದರೊಂದಿಗೆ ಗುತ್ತಿಗೆ ಆಧಾರದ ಮೇಲೆ (Contractual) ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂ ಮಾಡುವ ಕುರಿತು ಮಹತ್ವದ ಚರ್ಚೆಗಳು ನಡೆಯುತ್ತಿವೆ. ಹಿಂದೆ ಮೂರು ವರ್ಷ ಸೇವೆ ಸಲ್ಲಿಸಿದ ಗುತ್ತಿಗೆ ವೈದ್ಯರನ್ನು ಖಾಯಂ ಮಾಡುವ ಪದ್ಧತಿ ಇತ್ತು. ಅದನ್ನು ಮುಂಬರುವ ದಿನಗಳಲ್ಲಿ ಮತ್ತೆ ಜಾರಿಗೆ ತರುವ ನಿಟ್ಟಿನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಯು.ಟಿ. ಖಾದರ್ ಅವರು ಸ್ಪಷ್ಟಪಡಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More