ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

ಬಿಜೆಪಿ ಮುಖಂಡನ ಪುತ್ರನೋರ್ವ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗರ್ಭಣಿಯಾಗಿದ್ದ ಸಂತ್ರಸ್ತೆ ಯುವತಿ ಇದೀಗ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇದೀಗ ಈ ಮಗು ಜನನಕ್ಕೆ ಕಾರಣ ಯಾರು ಎನ್ನುವುದನ್ನು ಭೇದಿಸಲು ಪೊಲೀಸರು ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ
Puttur Bjp Leader Son
Edited By:

Updated on: Jun 29, 2025 | 7:04 PM

ಮಂಗಳೂರು, (ಜೂನ್ 29): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ. ಕೃಷ್ಣ ಜೆ ರಾವ್ ಎನ್ನುವಾತ ಮದುವೆಯಾಗುವುದಾಗಿ ಯುವತಿಗೆ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಯುವತಿ ಗರ್ಭಿಣಿಯಾಗಿರುವುದು ಗೊತ್ತಾಗುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಈ ಸಂಬಂಧ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ಕೃಷ್ಣ ನಾಪತ್ತೆಯಾಗಿದ್ದು, ಇದೀಗ ಗರ್ಭಿಣಿ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಮಗು ಜನನವಾದ ಹಿನ್ನೆಲೆಯಲ್ಲಿ ತನಿಖೆ ಹೊಸ ದಾರಿ ಹಿಡಿದಿದ್ದು, ಮಗುವಿನ ಡಿಎನ್ ಎ ಪರೀಕ್ಷೆ ಮೂಲಕ ಪ್ರಕರಣ ಭೇದಿಸಲು ಪೊಲೀಸರು ಮುಂದಾಗಿದ್ದಾರೆ.

ನಾಪತ್ತೆಯಾದ ಆರೋಪಿ ಕೃಷ್ಣನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿರುವ ನಡುವೆ ಪ್ರಕರಣದ ರಹಸ್ಯ ಬಯಲಿಗೆಳೆಯಲು ಪೊಲೀಸರು, ಯುವತಿ ಜನ್ಮಕೊಟ್ಟ ಮಗುವಿನ ಡಿಎನ್​ ಎ ಪರೀಕ್ಷೆಯ ಮೊರೆ ಹೋಗಿದ್ದಾರೆ. ಈ ಪರೀಕ್ಷೆಯಿಂದ ಯುವತಿ ಗರ್ಭಿಣಿಯಾಗಲು ಕಾರಣ ಯಾರು? ನಿಜವಾಗಿಯೂ ಶ್ರೀಕೃಷ್ಣನೇ ಯುವತಿಗೆ ಮದ್ವೆ ಆಸೆ ತೋರಿಸಿ ಲೈಂಗಿಕವಾಗಿ ಬಳಿಸಿಕೊಂಡಿದ್ನಾ ಎನ್ನುವುದು ಸ್ಪಷ್ಟವಾಗಿ ತಿಳಿಯಲಿದೆ. ಇದರಿಂದ ಪೊಲೀಸರು ಮಗುವಿನ ಡಿಎನ್​ ಎ ಪರೀಕ್ಷೆ ಮಾಡಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆಯಲು ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ: ಯುವತಿಯನ್ನು ಗರ್ಭಿಣಿ ಮಾಡಿ ಕೈಕೊಟ್ಟ ಬಿಜೆಪಿ ಮುಖಂಡನ ಪುತ್ರ, ಪ್ರೀತಿ ಹೆಸರಲ್ಲಿ ಮೋಸ

ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ಈಗಾಗಲೇ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ. ಆದ್ರೆ, ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಶ್ರೀಕೃಷ್ಣ ತಲೆ ಮರೆಸಿಕೊಂಡಿದ್ದಾನೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಯುವತಿ ನೀಡಿರುವ ದೂರಿನ ಪ್ರಕಾರ, ಕೃಷ್ಣ ರಾವ್ ಮತ್ತು ದೂರುದಾರ ಯುವತಿ ಪ್ರೌಢಶಾಲೆಯಲ್ಲಿ ಸಹಪಾಠಿಗಳಾಗಿದ್ದರು. ಶಾಲಾ ದಿನಗಳ ನಂತರವೂ ಇಬ್ಬರ ನಡುವೆ ಸಂಬಂಧ ಮುಂದುವರಿದಿತ್ತು. ಪ್ರಸ್ತುತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ ವ್ಯಾಸಂಗ ಮಾಡುತ್ತಿರುವ ಯುವತಿ, 2024ರ ಅಕ್ಟೋಬರ್ 11 ರಂದು ಕೃಷ್ಣ ತನ್ನ ಮನೆಗೆ ಯಾರೂ ಇಲ್ಲದ ಸಮಯದಲ್ಲಿ ಕರೆದು ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದಾನೆ ಎಂದು ಉಲ್ಲೇಖಿಸಲಾಗಿದೆ.

ನಂತರ 2025ರ ಜನವರಿಯಲ್ಲಿ, ಆತ ಮತ್ತೆ ನನ್ನನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ನಾನು ಗರ್ಭಿಣಿ ಎಂದು ಅರಿತುಕೊಂಡು ಕೃಷ್ಣ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ.

ಪುತ್ತೂರಿನ ನಿವಾಸಿಯಾಗಿರುವ ವಿದ್ಯಾರ್ಥಿನಿ, ತಾನು ಮತ್ತು ಕೃಷ್ಣ ಹಲವಾರು ವರ್ಷಗಳಿಂದ ಸಂಬಂಧದಲ್ಲಿದ್ದೆವು. ಕೃಷ್ಣ ತನ್ನ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು, ಆತನ ಮನೆಯಲ್ಲಿ ಅನೇಕ ಬಾರಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾಳೆ. ಗರ್ಭಿಣಿಯಾದ ವಿಷಯ ತಿಳಿದ ನಂತರ, ಯುವತಿ ತನ್ನ ಹೆತ್ತವರಿಗೆ ತಿಳಿಸಿದಳು. ನಂತರ ಅವರು ಕೃಷ್ಣನ ಕುಟುಂಬವನ್ನು ಸಂಪರ್ಕಿಸಿದರು. ಆರಂಭದಲ್ಲಿ ಕುಟುಂಬದವರು ಮದುವೆಗೆ ಒಪ್ಪಿಕೊಂಡರೂ, ಕೃಷ್ಣ ಅಂತಿಮವಾಗಿ ನಿರಾಕರಿಸಿದ್ದಾನೆ.

ಜೂನ್ 24ರ ರಾತ್ರಿ ದೂರು ದಾಖಲಾದ ನಂತರ, ಪುತ್ತೂರು ಪೊಲೀಸರು ಕೃಷ್ಣ ರಾವ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 64(1) ಮತ್ತು 69 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆತ ಪ್ರಸ್ತುತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

Loading...
Unable to load recommendations.
Follow Us