
ಮಂಗಳೂರು, ಸೆಪ್ಟೆಂಬರ್ 11: 16 ಬೋಗಿಗಳ ವಂದೇ ಭಾರತ್ ರೈಲಿನ ಯಶವಂತಪುರ–ಮಂಗಳೂರು ಜಂಕ್ಷನ್ ಮಾರ್ಗದ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ನಡೆದಿದೆ. ಈ ವೇಳೆ ವಿದ್ಯುತ್ (TRD ಮತ್ತು TRO), ಮೆಕ್ಯಾನಿಕಲ್ ಹಾಗೂ ಎಂಜಿನಿಯರಿಂಗ್ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ರೈಲಿನಲ್ಲಿ ಪ್ರಯಾಣಿಸಿ ಸಂಚಾರ ಸಮಯ, ಕಾರ್ಯಾಚರಣಾ ಅಂಶಗಳು ಹಾಗೂ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಿದ್ದಾರೆ.
ದಕ್ಷಿಣ ಪಶ್ಚಿಮ ರೈಲ್ವೆ ಅಧಿಕಾರಿಯೊಬ್ಬರ ಪ್ರಕಾರ, ಎರಡನೇ ಪ್ರಯೋಗಾತ್ಮಕ ಸಂಚಾರವನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ಪೂರ್ಣಗೊಳಿಸಲಾಗಿದೆ. ಮೊದಲ ಪ್ರಯೋಗಾತ್ಮಕ ಸಂಚಾರವು ಘಾಟ್ ಪ್ರದೇಶದಲ್ಲಿ ಬೀಸಿದ ಬಲವಾದ ಗಾಳಿ ಹಾಗೂ ಓವರ್ಹೆಡ್ ಉಪಕರಣ ಮತ್ತು ಪ್ಯಾಂಟೋಗ್ರಾಫ್ ನಡುವಿನ ಹೊಂದಾಣಿಕೆಯ ಸಮಸ್ಯೆಯಿಂದ ವಿಳಂಬವಾಗಿತ್ತು. ಕೆಲವು ತಾಂತ್ರಿಕ ಸಮಸ್ಯೆಗಳು ಇನ್ನೂ ಬಗೆಹರಿಯದಿದ್ದರೆ ಮತ್ತೊಂದು ಪ್ರಯೋಗಾತ್ಮಕ ಸಂಚಾರ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಯಶವಂತಪುರ-ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಟ್ರಯಲ್ ರನ್: ಘಾಟ್ ರಸ್ತೆಯಲ್ಲಿ ಬಿರುಸಿನ ಪರಿಶೀಲನೆ
ಏತನ್ಮಧ್ಯೆ, ಮಂಗಳೂರು–ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಕಬಕ–ಪುತ್ತೂರು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆಗೆ (ಪ್ರಾಯೋಗಿಕ ಸಂಚಾರ) ಅವಕಾಶ ನೀಡಿರುವುದನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸ್ವಾಗತಿಸಿದ್ದಾರೆ. ಸೆಪ್ಟೆಂಬರ್ 5ರಂದು ನಡೆದ ಮೊದಲ ಪೂರ್ಣ ಪ್ರಮಾಣದ ಸಂಚಾರದಲ್ಲಿ ಕಬಕ–ಪುತ್ತೂರು ನಿಲ್ದಾಣದಲ್ಲಿ ರೈಲು ನಿಲುಗಡೆ ನೀಡಿರಲಿಲ್ಲ. ಮುಂದಿನ ದಿನಗಳಲ್ಲಿ ಈ ನಿಲುಗಡೆಯನ್ನು ಶಾಶ್ವತಗೊಳಿಸುವುದರ ಜೊತೆಗೆ ರೈಲಿನ ವೇಳಾಪಟ್ಟಿಯಲ್ಲೂ ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ಕಿಶೋರ್ ತಿಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:32 am, Fri, 11 September 26