ಎಲೆಕ್ಷನ್ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್ವೈ ವಿರುದ್ಧ ಭುಗಿಲೆದ್ದ ಆಕ್ರೋಶ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಆದ್ರೆ, ಎರಡು ವರ್ಷ ಮೊದಲೇ ಬಿ.ಎಸ್. ಯಡಿಯೂರಪ್ಪ ಅವರು ದಾವಣಗೆರೆ ಜಿಲ್ಲೆಯ ಹಲವು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದಾರೆ. ಇದರಿಂದ ಪಕ್ಷದಲ್ಲಿ ಅಸಮಾಧಾನ ಭುಗಿಲೆದಿದ್ದು, ಬಿಎಸ್ವೈ ವಿರುದ್ಧ ಸ್ವಪಕ್ಷೀಯ ಮುಖಂಡರು ತಿರುಗಿಬಿದ್ದಿದ್ದಾರೆ.

ದಾವಣಗೆರೆ, (ಮಾರ್ಚ್ 03): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮತ್ತೆ ಅಸಮಾಧಾನ ಸ್ಫೋಟಕಗೊಂಡಿದೆ. ಈ ಬಾರಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ನಡೆಯಿಂದಲೇ ಅಸಮಾಧಾನ ಭುಗಿಲೆದ್ದಿದೆ. ಹೌದು.. ವಿಧಾನಸಭೆ ಚುನಾವಣೆ (Karnataka Assembly Election) ಇನ್ನೂ ಎರಡು ವರ್ಷ ಇರುವಾಗಲೇ ಬಿಎಸ್ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಹೊನ್ನಾಳಿಯಲ್ಲಿ ನಡೆದ ರೇಣುಕಾಚಾರ್ಯ ಜನ್ಮ ದಿನ ಕಾರ್ಯಕ್ರಮದಲ್ಲಿ ಪಕ್ಕದ ಹರಪನಹಳ್ಳಿ ಸೇರಿ ದಾವಣಗೆರೆ (Davanagere) ಜಿಲ್ಲೆಯ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಘೋಷಣೆ ಘೋಷಣೆ ಮಾಡಿದ್ದಾರೆ. ಇದರಿಂದ ಪಕ್ಷೀಯ ಮುಖಂಡರು ಯಡಿಯೂರಪ್ಪ ತಿರುಗಿಬಿದ್ದಿದ್ದು, ಹೊನ್ನಾಳಿಯಲ್ಲಿ ಮಾಡಿದ ಘೋಷಣೆಯನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಮೊದಲೇ ಬಿಜೆಪಿಯಲ್ಲಿ ಮುಸುಕಿನ ಗುದ್ದಾಟಗಳು ನಡೆಯುತ್ತಿದ್ದು, ಇವುಗಳನ್ನು ಬಗೆರಿಸಬೇಕಾದ ಹಿರಿಯ ನಾಯಕ ಯಡಿಯೂರಪ್ಪನವರೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಗಳು ಕೇಳಿಬಂದಿವೆ.
ಕಳೆದ ಲೋಕಸಭೆ ಚುನಾವಣೆಯಿಂದ ದಾವಣಗೆರೆ ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ. ಒಂದಾಗುವುದು ಕಷ್ಟದ ಕೆಲಸ ಎಂಬ ಮಾತುಗಳು ಕೇಳಿ ಬರುತ್ತಿದೆ. ಮಾಜಿ ಸಂಸದ ಜಿಎಂ ಸಿದ್ದೇಶ್ವರ ಹಾಗೂ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರ ಬಣಗಳನ್ನ ಒಂದು ಮಾಡುವ ಜವಾಬ್ದಾರಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ವಹಿಸಲಾಗಿತ್ತು. ಮೃದು ಸ್ವಭಾವದ ಶೆಟ್ಟರ್ ಹೇಳುವಷ್ಟು ಹೇಳಿ ಮೌನಕ್ಕೆ ಶರಣಾಗಿದ್ದಾರೆ. ಈಗ ಹೊಸ ವಿವಾದ ಅಂದ್ರೆ ಮೊನ್ನೆ ಹೊನ್ನಾಳಿಯಲ್ಲಿ ಮಾಜಿ ಸಿಎಂ ಬಿಎಸ್ ವೈ ಮಾಡಿದ ಮಾತುಗಳು. ಫೆಬ್ರುವರಿ 28 ರಂದು ಹೊನ್ನಾಳಿಯಲ್ಲಿ ನಡೆದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರ 64ನೇ ಜನ್ಮ ದಿನದ ಕಾರ್ಯಕ್ರಮದಲ್ಲಿ. ಇದು ಬಿಜೆಪಿಯ ಇನ್ನೊಂದು ಬಣದ ನಿದ್ದೆಗೆಡಿಸಿದೆ.
ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಫೋನ್ ಟ್ಯಾಪಿಂಗ್ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್
ಹಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಬಿಎಸ್ವೈ
ಹೊನ್ನಾಳಿಯಲ್ಲಿ ನಡೆದ ಮಾಜಿ ಶಾಸಕ ರೇಣುಕಾಚಾರ್ಯ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದಾವಣಗೆರೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ. ಹೊನ್ನಾಳಿಗೆ ಎಂಪಿ ರೇಣುಕಾಚಾರ್ಯ, ಚನ್ನಗಿರಿ- ಮಾಡಾಳ್ ವಿರೂಪಾಕ್ಷಪ್ಪ , ಹರಿಹರ-ಚಂದ್ರಶೇಖರ ಪೂಜಾರ, ದಾವಣಗೆರೆ ಉತ್ತರ ಲೋಕಕೆರೆ ನಾಗರಾಜ್, ಜಗಳೂರು ಎಸ್ ವಿ ರಾಮಚಂದ್ರ ಹಾಗೂ ಹರಪನಹಳ್ಳಿ-ಕರುಣಾಕರ ರೆಡ್ಡಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಇದು ಇತರೆ ನಾಯಕರ ಆಕ್ರೊಶಕ್ಕೆ ಕಾರಣವಾಗಿದೆ.
ಬಹಿರಂಗ ಅಸಮಾಧಾನ ಹೊರ ಹಾಕಿದ ಬಿಜೆಪಿ ನಾಯಕ
ಈ ಸಂಬಂಧ ದಾವಣಗೆರೆ ಬಿಜೆಪಿ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಶಾಂತರಾಜ್ ಪಾಟೀಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು. ಇತ್ತೀಚೆಗೆ ಹೊನ್ನಾಳಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, ಜಿಲ್ಲೆಯ ಹಲವು ಕ್ಷೇತ್ರಗಳ ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದಾರೆ. ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಸಚಿವರನ್ನಾಗಿ ಮಾಡುವಂತೆ ಕೋರಿದ್ದಾರೆ. ಪಕ್ಷದ ಶಿಷ್ಟಾಚಾರವನ್ನು ಉಲ್ಲಂಘಿಸುವಂತಹ ಹೇಳಿಕೆಯನ್ನು ಯಡಿಯೂರಪ್ಪ ಅವರಿಂದ ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಯಡಿಯೂರಪ್ಪ ಅವರು ಪಕ್ಷದ ಪ್ರಶ್ನಾತೀತ ನಾಯಕ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದಿರುವ ಅವರ ಬಗ್ಗೆ ಅಪಾರ ಗೌರವವಿದೆ. ಅವರು ಭಾಷಣದಲ್ಲಿ ಆಡಿರುವ ಮಾತುಗಳ ಬಗ್ಗೆ ಮಾತ್ರ ಆಕ್ಷೇಪವಿದೆ. ಇದು ಅವರಿಗೆ ಶೋಭೆ ತರುವುದಿಲ್ಲ. ಪಕ್ಷದ ಕಾರ್ಯಕರ್ತರ ಉತ್ಸಾಹ ಕುಗ್ಗಿಸುವ ಪ್ರಯತ್ನವನ್ನು ಯಡಿಯೂರಪ್ಪ ಅವರು ಮಾಡಬಾರದು’ ಎಂದು ಅಸಮಾಧಾನ ಹೊರಹಾಕಿದರು.
ಬಿಜೆಪಿ ಇತರ ಪಕ್ಷಕ್ಕಿಂತ ಭಿನ್ನ. ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಶಿಷ್ಟಾಚಾರವಿದೆ. ಕೇಂದ್ರ ಸಂಸದೀಯ ಮಂಡಳಿಯು ಅಭ್ಯರ್ಥಿ ಆಯ್ಕೆ ಮಾಡುತ್ತದೆ. ಏಕಾಏಕಿ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಇಂತಹವರನ್ನೇ ಗೆಲ್ಲಿಸುವಂತೆ ಅವರು ಮಾಡಿಕೊಂಡ ಮನವಿ ಸರಿಯಲ್ಲ. ಪಕ್ಷದಿಂದ ಹೊರನಡೆದು ಪ್ರಾದೇಶಿಕ ಪಕ್ಷವೊಂದನ್ನು ಸಂಘಟಿಸುವ ಹುನ್ನಾರ ಅವರಲ್ಲಿ ಇರುವಂತೆ ಕಾಣುತ್ತಿದೆ’ ಎಂದು ದೂರಿದರು.
ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಪ್ರತಿ ಜಿಲ್ಲೆಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ವಿಬಿ-ಜಿರಾಮ್ಜಿ ಕುರಿತು ಇತ್ತೀಚೆಗೆ ಹೊನ್ನಾಳಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಪಕ್ಷದ ಶಾಸಕ ಬಿ.ಪಿ. ಹರೀಶ್, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಅವರಿಗೆ ಆಹ್ವಾನ ನೀಡಿರಲಿಲ್ಲ. ಗುಂಪುಗಾರಿಕೆ ಮಾಡುವವರ ಜೊತೆ ಸೇರಿದ ವಿಜಯೇಂದ್ರ ಅವರು ಪಕ್ಷವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ವರಿಷ್ಠರ ಗಮನಕ್ಕೆ ತರಲು ತೀರ್ಮಾನ
ಬಿಎಸ್ ವೈ ಹೇಳಿಕೆಗೆ ದಾವಣಗೆರೆ ಬಿಜೆಪಿ ಬಿ ಟೀಮ್ ಆಕ್ರೋಶ ವ್ಯಕ್ತಪಡಿಸಿದ್ದು, ಇದನ್ನ ಖಂಡಿಸಿ ಇನ್ನೊಂದು ಬಿಜೆಪಿ ಬಣ ಇದೇ ಮಾರ್ಚ್ 5ರಂದು ಜಿಎಂ ಐಟಿ ಕಾಲೇಜ್ ಅತಿಥಿ ಗೃಹದಲ್ಲಿ ಪ್ರತಿಭಟನಾ ಸಭೆ ಮುಂದಾಗಿದೆ. ಮಾಜಿ ಸಂಸದ ಜಿಎಂ ಸಿದ್ದೇಶ್ವರ ಹಾಗೂ ಹಾಲಿ ಶಾಸಕ ಬಿಪಿ ಹರೀಶ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ತಮ್ಮ ವಿಚಾರವನ್ನ ಪಕ್ಷದ ವರಿಷ್ಠರ ಗಮನಕ್ಕೆ ತರಲುಪಿಸಲು ನಿರ್ಧರಿಸಿದೆ. ಇನ್ನು ಪ್ರತಿಭಟನಾ ಸಭೆ ಮಾಡುವ ದಿನವೇ ಜಿಲ್ಲಾ ಬಿಜೆಪಿ ಕಚೇರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಬರುತ್ತಿದ್ದಾರೆ. ಈ ವೇಳೆ ಈ ವಿಚಾರವನ್ನು ಅವರ ಗಮನಕ್ಕೆ ತರಲು ಸಹ ತೀರ್ಮಾನಿಸಿದ್ದಾರೆ.
ರಾಜ್ಯದಲ್ಲಿ ಹೇಗೆ ಬಿಜೆಪಿಯಲ್ಲಿ ಗೊಂದಲಗಳಿವೆ ಅದರಂತೆ ದಾವಣಗೆರೆ ಜಿಲ್ಲೆಯಲ್ಲಿ ಗೊಂದಲಗಳು ಹೆಚ್ಚಾಗಿದ್ದು, ಬಣ ಬಡಿದಾಟುಗಳು ನಡೆದಿವೆ. ಇನ್ನೊಂದೆಡೆ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಇದರ ನಡುವೆಯೇ ಬಿಜೆಪಿಯಲ್ಲಿ ಈಗ ಹೊಸ ಗೊಂದಲ ಸೃಷ್ಟಿಸಿದ್ದು, ಇದು ಮುಂದೆ ಯಾವ ಹಂತಕ್ಕೆ ಹೋಗಲಿದೆ ಎಂದು ಕಾದುನೋಡಬೇಕಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.