ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಬಂಡಾಯದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ ನೀಡಿದರು. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದಿರುವ ಕುರಿತು ಅಸಮಾಧಾನದ ನಡುವೆಯೂ, ಮುಸ್ಲಿಮರು ನಮ್ಮೊಂದಿಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ, ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಡಿಕೆಶಿ ಬ್ಯಾಟಿಂಗ್ ಮಾಡಿ, ಪಕ್ಷದಲ್ಲಿ ಸಾಮರಸ್ಯ ಇದೆ ಎಂದರು.

ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ
ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ
Image Credit source: tv9

Updated on: Mar 23, 2026 | 2:15 PM

ದಾವಣಗೆರೆ, ಮಾರ್ಚ್ 23: ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಕಾರಣ ದಾವಣಗೆರೆ (Davanagere) ದಕ್ಷಿಣ ಉಪಚುನಾವಣೆಯಲ್ಲಿ ಬಂಡಾಯದ ಬಿಸಿ ಎದುರಿಸುತ್ತಿರುವ ಕಾಂಗ್ರೆಸ್ (Congress), ಇವುಗಳೆಲ್ಲದರ ನಡುವೆಯೂ ಸೋಮವಾರ ಒಗ್ಗಟ್ಟು ಪ್ರದರ್ಶನ ಮಾಡಿತು. ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು (Samarth Shamanur) ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವರು ಒಗ್ಗಟ್ಟು ಪ್ರದರ್ಶಿಸಿದರು. ಅಲ್ಪಸಂಖ್ಯಾತ ನಮ್ಮ ಜತೆಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ, ಮುಸ್ಲಿಮರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ಆದರೆ ನಾವು ಒಗ್ಗಟ್ಟಾಗಿದ್ದೇವೆ, ಚುನಾವಣೆ ಗೆಲ್ಲುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಸಿದ್ದರಾಮಯ್ಯ ಹೇಳಿದ್ದೇನು?

ಕಾಂಗ್ರೆಸ್ ಪಕ್ಷವು ಜಾತಿ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುವುದಿಲ್ಲ. ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಇದು ಎಲ್ಲರನ್ನೂ ಒಳಗೊಳ್ಳುವ, ಸಮಗ್ರ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಪಕ್ಷಕ್ಕೆ ದಾವಣಗೆರೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಮಾತಿನ ವಿಡಿಯೋ
Davangere By Election: ಆ ಜಾತಿ, ಆ ಧರ್ಮ ಅಂತ ನಾವು ನೋಡಲ್ಲ ಎಲ್ಲರೂ ಒಂದೇ ಎಂದ ಸಿಎಂ ಸಿದ್ದು | #TV9D

ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದೇ ಪಕ್ಷದ ಆದ್ಯತೆ. ಸುಳ್ಳು ಭರವಸೆಗಳನ್ನು ನೀಡುವ ಬದಲು, ಏನು ಹೇಳುತ್ತೇವೋ ಅದನ್ನೇ ಕಾರ್ಯರೂಪಕ್ಕೆ ತರುತ್ತೇವೆ. ಕಳೆದ ಅವಧಿಯಲ್ಲಿ ನೀಡಿದ ಭರವಸೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಈಡೇರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಮೂರು ವರ್ಷಗಳ ಅಧಿಕಾರಾವಧಿಯಲ್ಲಿ, ನಾಲ್ಕನೇ ಬಜೆಟ್ ಅನ್ನು ಮಂಡಿಸಲಾಗಿದೆ. ಬಜೆಟ್ ಅನ್ನು ಪರಿಶೀಲಿಸಿದರೆ, ಪಕ್ಷವು ತನ್ನ ಮಾತುಗಳನ್ನು ಉಳಿಸಿಕೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಡಿಕೆ ಶಿವಕುಮಾರ್ ಹೇಳಿದ್ದೇನು?

ತಾತ ಶಿವಶಂಕರಪ್ಪನವರಂತೆ ಈಗ ಅವರ ಮೊಮ್ಮಗನೂ ಜನಸೇವೆ ಮಾಡಲು ಮುಂದೆ ಬಂದಿದ್ದಾರೆ. ಅವರೂ ಗೆದ್ದೇ ಗೆಲ್ಲುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು. ದಾವಣಗೆರೆ ನಗರದ ಅಭಿವೃದ್ಧಿಯ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಇದು ಬೆಂಗಳೂರಿಗಿಂತಲೂ ಉತ್ತಮವಾಗಿ ಯೋಜಿತವಾಗಿರುವ ನಗರ. ನೂರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಪ್ಯಾಕೇಜ್‌ಗಳನ್ನು ಈಗಾಗಲೇ ಮಂಜೂರು ಮಾಡಲಾಗಿದೆ. ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಕಾಮಗಾರಿಗಳು ಉತ್ತಮವಾಗಿ ನಡೆಯುತ್ತಿವೆ. ದಾವಣಗೆರೆಯನ್ನು ರಾಜ್ಯದ ಒಂದು ಪ್ರಮುಖ ವೈದ್ಯಕೀಯ ಮತ್ತು ಶಿಕ್ಷಣ ಕೇಂದ್ರವನ್ನಾಗಿ ರೂಪಿಸುವಲ್ಲಿ ಶಿವಶಂಕರಪ್ಪನವರ ಕುಟುಂಬ ಮತ್ತು ಅವರ ಸಂಸ್ಥೆಗಳ ಕೊಡುಗೆ ಅಪಾರ ಎಂದು ಅವರು ಸ್ಮರಿಸಿದರು.

ದಾವಣಗೆರೆ ಈಗ ಶಿಕ್ಷಣ ಕೇಂದ್ರವಾಗಿಯೂ ಮಾರ್ಪಟ್ಟಿದೆ. ಹೊರ ರಾಜ್ಯ, ನಗರ ಮತ್ತು ಹಳ್ಳಿಗಳಿಂದ ಬಂದು ಇಲ್ಲಿ ವಿದ್ಯಾಭ್ಯಾಸ ಮಾಡುವವರಿಗೆ ಶಿವಶಂಕರಪ್ಪನವರ ಸಂಸ್ಥೆಗಳು ಹೊಸ ರೂಪ ನೀಡಿವೆ ಎಂದು ಡಿಕೆ ಶಿವಕುಮಾರ್ ಉಲ್ಲೇಖಿಸಿದರು.

ಡಿಕೆ ಶಿವಕುಮಾರ್ ಮಾತಿನ ವಿಡಿಯೋ
Davangere By Election: ಸರ್ವೆ ಮಾಡಿಸಿದಾಗ ಸಮರ್ಥ್ ಮೇಲೆ ಹೆಚ್ಚಿನ ಒಲವಿತ್ತು ಎಂದ DCM ಡಿಕೆಶಿ | #TV9D

ಪಕ್ಷದೊಳಗಿನ ಅಸಮಾಧಾನ ಮತ್ತು ಬಂಡಾಯದ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ರಾಜಕೀಯದಲ್ಲಿ ಆಕಾಂಕ್ಷಿಗಳು ತಮ್ಮ ಹಕ್ಕುಗಳನ್ನು ಕೇಳುವುದು ಸಹಜ. ಮುಸ್ಲಿಂ ಮುಖಂಡರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ಎಲ್ಲರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ನಮ್ಮ ಪಕ್ಷ ಒಂದು ಕುಟುಂಬದಂತೆ ಕಾರ್ಯನಿರ್ವಹಿಸುತ್ತದೆ. ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರು ಶಿವಶಂಕರಪ್ಪನವರ ಆಪ್ತರು ಮತ್ತು ಪಟ್ಟ ಶಿಷ್ಯರು. ಅವರನ್ನು ಮನವೊಲಿಸಲಾಗುವುದು. ಇನ್ನುಳಿದವರೊಂದಿಗೂ ಮಾತುಕತೆ ನಡೆಸಲಾಗುತ್ತಿದೆ. ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಚಿಂತನೆ ಮತ್ತು ಎಲ್ಲಾ ಸಮಾಜಕ್ಕೂ ನ್ಯಾಯ ಒದಗಿಸುವುದು ನಮ್ಮ ಪಕ್ಷದ ಮೂಲ ಸಿದ್ಧಾಂತ. ಇದೇ ನಮ್ಮ ಚುನಾವಣಾ ವಿಷಯ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಪೈಲ್ವಾನ್ ಸವಾಲಿನ ಬೆನ್ನಲ್ಲೇ ಹೈಡ್ರಾಮಾಕ್ಕೆ ಸಜ್ಜಾದ ದಾವಣಗೆರೆ ಅಖಾಡ

ದಾವಣಗೆರೆಯ ದುಗ್ಗಮ್ಮ ದೇಗುಲದಲ್ಲಿ ಸಮರ್ಥ್ ಪೂಜೆ ಸಲ್ಲಿಸಿದ ಸಮರ್ಥ್, ನಂತರ ಸಿಎಂ ಹಾಗೂ ಡಿಸಿಎಂ, ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us