
ದಾವಣಗೆರೆ, ಏಪ್ರಿಲ್ 07: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Byelection) ಏಪ್ರಿಲ್ 9ರಂದು ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು ವಿವಿಧ ರೀತಿಯ ಪ್ರಚಾರ ಕೈಗೊಂಡಿರುವ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶಗಳ ಹಾವಳಿ ಕೂಡ ಹೆಚ್ಚಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಓಟ್ ಹಾಕಿ ಎಂದು ಸಿರಿಗೆರೆ ಸ್ವಾಮೀಜಿ ಹೆಸರಲ್ಲಿನ ಸಂದೇಶ ವೈರಲ್ ಆಗಿದ್ದು, ಸಾಕಷ್ಟು ಚರ್ಚೆ ಹುಟ್ಟಿಹಾಕಿತ್ತು. ಇದಕ್ಕೀಗ ಸ್ಪಷ್ಟನೆ ಸಿಕ್ಕಿದೆ.
ಸಿರಿಗೆರೆ ತರಳುಬಾಳು ಗುರುಪೀಠದ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಅವರ ಹೆಸರಿನಲ್ಲಿ ನಕಲಿ ಸಂದೇಶವೊಂದು ವೈರಲ್ ಆಗಿದ್ದು, ನಿರ್ದಿಷ್ಟ ಅಭ್ಯರ್ಥಿಗೆ ಮತ ನೀಡುವಂತೆ ಕರೆ ನೀಡಲಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸ್ವಾಮೀಜಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಪ್ರಚಾರ ನಡೆಯುತ್ತಿದೆಯೇನೋ ಎಂದು ಹಲವರು ಭಾವಿಸಿದ್ದರು. ಆದರೆ ಇದಕ್ಕೆ ಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಶ್ರೀಗಳ ಹೆಸರಿನಲ್ಲಿ ನಕಲಿ ಸಂದೇಶ ರವಾನಿಸಲಾಗುತ್ತಿದೆ ಎಂದಿದೆ. ಈ ಸಂದೇಶವು ಸ್ವಾಮೀಜಿಯವರ ನಿಲುವನ್ನು ತಪ್ಪಾಗಿ ಪ್ರತಿಬಿಂಬಿಸುವುದಾಗಿ ಮಠದ ಆಡಳಿತ ಮಂಡಳಿ ಹೇಳಿದೆ.
ಇದನ್ನೂ ಓದಿ ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ! ದಾವಣಗೆರೆ, ಬಾಗಲಕೋಟೆಯಲ್ಲಿ ಪ್ರಚಾರ
ಈ ಕುರಿತು ಮಠದ ಕಾರ್ಯದರ್ಶಿ ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯನ್ನು ಹರಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇಂತಹ ನಕಲಿ ಸಂದೇಶಗಳು ಮತದಾರರನ್ನು ತಪ್ಪು ದಾರಿಗೆಳೆಯುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ