ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಹೈಡ್ರಾಮ: ಬಿಜೆಪಿ ಬೆಂಬಲಿತ ಸದಸ್ಯರಿಂದ ಅಹೋರಾತ್ರಿ ಧರಣಿ

Vijayanagara News: ಸೋಮವಾರ ನಡೆಯಬೇಕಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಭಾರೀ ಹೈಡ್ರಾಮದಿಂದ ಎರಡನೇ ಬಾರಿಗೆ ಮುಂದೂಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೊಗರಿಕಟ್ಟೆ ಗ್ರಾಮದಲ್ಲಿ ನಡೆದಿದೆ. ಇದು ರಾಜಕೀಯ ಪ್ರೇರಿತ ಎಂದು ಬಿಜೆಪಿ ಬೆಂಬಲಿತ ಸದಸ್ಯರು ಸ್ಥಳದಲ್ಲಿ ಪ್ರತಿಭಟನಾ ಧರಣಿಗೆ ಮುಂದಾದ ಘಟನೆ ಜರುಗಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಹೈಡ್ರಾಮ: ಬಿಜೆಪಿ ಬೆಂಬಲಿತ ಸದಸ್ಯರಿಂದ ಅಹೋರಾತ್ರಿ ಧರಣಿ
ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾದ್ಯಕ್ಷ ಚುನಾವಣೆ
Edited By:

Updated on: Aug 07, 2023 | 8:01 PM

ವಿಜಯನಗರ, ಆಗಸ್ಟ್​ 07: ಹರಪನಹಳ್ಳಿ ತಾಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯಿತಿಗೆ (gram panchayat) ಸೋಮವಾರ ನಡೆಯಬೇಕಿದ್ದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಭಾರೀ ಹೈಡ್ರಾಮದಿಂದ ಎರಡನೇ ಬಾರಿಗೆ ಮುಂದೂಡಿದ ಘಟನೆ ನಡೆದಿದ್ದು, ಇದು ರಾಜಕೀಯ ಪ್ರೇರಿತ ಎಂದು ಬಿಜೆಪಿ ಬೆಂಬಲಿತ ಸದಸ್ಯರು ಸ್ಥಳದಲ್ಲಿ ಪ್ರತಿಭಟನಾ ಧರಣಿಗೆ ಮುಂದಾದ ಘಟನೆ ಜರುಗಿತು.

ಆ. 2ರಂದು ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು, ಅಂದು ಅಧ್ಯಕ್ಷ ಸ್ಥಾನಕ್ಕೆ ಸರಿತಾಬಾಯಿ ಹಾಗೂ ಕೆಂಚವ್ವ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಣಕಾರ ಹನುಮಕ್ಕ, ತಾವರಗುಂದಿ ಶ್ರೀಕಾಂತ ನಾಮಪತ್ರ ಸಲ್ಲಿಸಿದ್ದರು, ಚುನಾವಣೆ ಪ್ರಕ್ರಿಯೆ ನಡೆದು, ಮತ ಎಣಿಕೆ ಸಂದರ್ಭದಲ್ಲಿ ಫಲಿತಾಂಶದಲ್ಲಿ ಗೊಂದಲ ಉಂಟಾದ ಪರಿಣಾಮ ಚುನಾವಣಾಧಿಕಾರಿ ಪ್ರಸನ್ನರವರು ಫಲಿತಾಂಶ ಘೋಷಣೆ ಮಾಡದೆ ಆ. 7ಕ್ಕೆ ಮರು ಚುನಾವಣೆ ನಡೆಸಲು ತೀರ್ಮಾನ ತೆಗೆದುಕೊಂಡಿದ್ದರು.

ಆ ಪ್ರಕಾರ ಆ.7ರಂದು ಚುನಾವಣೆಗೆ ಎಲ್ಲಾ ಸದಸ್ಯರಿಗೂ ನೋಟಿಸ್ ಜಾರಿ ಮಾಡಲಾಗಿತ್ತು. ಸೋಮವಾರ ಮರು ಚುನಾವಣೆ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಚುನಾವಣಾಧಿಕಾರಿ ಆಗಮಿಸಿದ್ದರು ಆದರೆ ಚುನಾವಣಾಧಿಕಾರಿಗೆ ಇದ್ದಕ್ಕಿದಂತೆ ಅನಾರೋಗ್ಯ ಉಂಟಾಗಿದೆ ಎಂದು ಹೇಳಿ ಅಲ್ಲಿಂದ ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದರು.

ಇದನ್ನೂ ಓದಿ: ಐತಿಹಾಸಿಕ ದೇವಸ್ಥಾನದ ಬಳಿಯೇ ಬ್ಲಾಸ್ಟಿಂಗ್: ಬಿರುಕು ಬಿಟ್ಟ ಬಳ್ಳಾರಿಯ ವರವಿನ ಮಲ್ಲಯ್ಯ ದೇವಸ್ಥಾನ!

ಇದರಿಂದ ಕೆರಳಿದ ಬಿಜೆಪಿ ಬೆಂಬಲಿತ ಸದಸ್ಯರು ಚುನಾವಣೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಘೋಷಣೆ ಮಾಡುವಂತೆ ಬಿಗಿಪಟ್ಟು ಹಿಡಿದರು. ನಂತರ ತಹಶೀಲ್ದಾರ ಗಿರೀಶಬಾಬು ಪಂಚಾಯಿತಿಗೆ ಆಗಮಿಸಿ ಸದಸ್ಯರೊಂದಿಗೆ ಚರ್ಚೆ ನಡೆಸಿ ಚುನಾವಣಾಧಿಕಾರಿಗೆ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ತೆರಳಿರುವುದರಿಂದ ಚುನಾವಣೆ ನಡೆಸಲು ಆಗುವುದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅವರ ನಿರ್ದೇಶನದಂತೆ ಮುಂದಿನ ಕ್ರಮವಹಿಸಲಾಗುವುದು ಎಂದು ಮನವೊಲಿಸಲು ಪ್ರಯತ್ನಿಸಿದರು ಸಹ ಸದಸ್ಯರು ಇದಕ್ಕೆ ಒಪ್ಪದೆ ಸ್ಥಳದಲ್ಲೆ ಪ್ರತಿಭಟನಾ ಧರಣಿಗೆ ಮುಂದಾದರು.

ಬಳಿಕ ತಹಶೀಲ್ದಾರರು ಸಿಪಿಐ, ಪಿಎಸ್‌ಐ ಪೋಲಿಸ್ ಭದ್ರತೆಯಲ್ಲಿ ಹೊರಗೆ ಬಂದು ವಾಪಸ್ಸು ಹರಪನಹಳ್ಳಿಗೆ ತೆರಳುವ ಸಂದರ್ಭದಲ್ಲಿ ಸದಸ್ಯರು ಹಾಗೂ ಮುಖಂಡರು ನೋಟಿಸ್ ನೀಡಿದಂತೆ ಕಾನೂನು ಪ್ರಕಾರ ಚುನಾವಣೆ ಪ್ರಕ್ರಿಯೆ ಇಂದೆ ನಡೆಸುವಂತೆ ಪಟ್ಟು ಹಿಡಿದು ಅಧಿಕಾರಿಗಳ ನಡುವೆ ವಾಗ್ವಾದ ನಡೆಸಿದರು. ಇತ್ತ ಕಾಂಗ್ರೆಸ್ ಬೆಂಬಲಿತ ಸದಸ್ಯರು ಚುನಾವಣಾ ಸಭಾಂಗಣದಿಂದ ಹೊರ ನಡೆದರು. ಬಳಿಕ ಬಿಜೆಪಿ ಬೆಂಬಲಿತ 11 ಸದಸ್ಯರು ಹಾಗೂ ಗ್ರಾಮಸ್ಥರು ಗ್ರಾಪಂ ಎದುರು ಪ್ರತಿಭಟನಾ ಧರಣಿ ನಡೆಸಿ, ಅಧಿಕಾರಿಗಳ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಆಪ್ತೆ, ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ವಿರುದ್ಧ ಎಫ್‌ಐಆರ್‌ ದಾಖಲು, ಏನಿದು ಪ್ರಕರಣ?

ಈ ವೇಳೆ ಬಿಜೆಪಿ ಬೆಂಬಲಿತ ಸದಸ್ಯರು ಮಾತನಾಡಿ ಆ. 2ರಂದು ಚುನಾವಣೆ ನಿಗದಿಯಾಗಿತ್ತು, ಆ ಪ್ರಕಾರ ಚುನಾವಣೆಯಲ್ಲಿ ಭಾಗವಹಿಸಿ ಮತದಾನ ಮಾಡಿದ್ದೇವು. ಆದರೆ ಫಲಿತಾಂಶ ಗೊಂದಲದಿಂದಾಗಿ ಚುನಾವಣಾಧಿಕಾರಿ ಚುನಾವಣೆ ಮತ್ತೆ ಮುಂದೂಡಿದ್ದರು. ಇಂದು ಸಹ ಅನಾರೋಗ್ಯ ನೆಪ ಹೇಳಿ ಚುನಾವಣೆ ನಡೆಸದೆ, ರಾಜಕೀಯ ಒತ್ತಡಕ್ಕೆ ಮಣಿದು ಚುನಾವಣೆ ಮುಂದೂಡಲು ಯತ್ನಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳು ಆಗಮಿಸುವವರೆಗೂ ಅಹೋರಾತ್ರಿ ಧರಣಿ ನಡೆಸಲು ಮುಂದಾದರು.

ಈ ಸಂದರ್ಭದಲ್ಲಿ ಸಿಪಿಐ ನಾಗರಾಜ ಎಂ ಕಮ್ಮಾರ, ಪಿಎಸ್‌ಐ ಎಸ್.ಸಿ.ಹಿರೇಮಠ್, ಹಾಗೂ ಪೋಲಿಸ್ ಸಿಬ್ಬಂಧಿಗಳು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಜ್ಯೋತಿನಾಯ್ಕ, ಕೆ.ಆನಂದ, ವೈ.ಮಂಜುನಾಥ, ಭೋವಿ ಮಂಜುನಾಥ, ಸರಿತಾ, ಹನುಮಕ್ಕ, ರುಕ್ಮಣಿ, ಗೋಣೆಪ್ಪ, ರತ್ನಮ್ಮ, ಮಾಲಾಶ್ರೀ, ನೇತ್ರಾವತಿ, ಲಕ್ಷö್ಮಮ್ಮ, ಮುಖಂಡರಾದ ಲಿಂಬ್ಯನಾಯ್ಕ, ಮಂಜ್ಯನಾಯ್ಕ, ಸೇರಿದಂತೆ ಇತರರು ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:56 pm, Mon, 7 August 23

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us