ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು ಫ್ರಿಜ್ಡ್ ಖರೀದಿಸಿದ ಮಹಿಳೆಗೆ ಡಿಸಿಎಂ ಡಿಕೆ ಶಿವಕುಮಾರ್ ಮೆಚ್ಚುಗೆ

ಗೃಹಿಣಿ ಫ್ರಿಡ್ಜ್ ಖರೀದಿಸಿರುವ ಬಗ್ಗೆ ‘ಟಿವಿ9’ ಮಾಡಿದ್ದ ವರದಿಯ ತುಣುಕನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಡಿಕೆ ಶಿವಕುಮಾರ್ ಬಡವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ ಎಂದು ಬರೆದುಕೊಂಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು ಫ್ರಿಜ್ಡ್ ಖರೀದಿಸಿದ ಮಹಿಳೆಗೆ ಡಿಸಿಎಂ ಡಿಕೆ ಶಿವಕುಮಾರ್ ಮೆಚ್ಚುಗೆ
ಶಿಗ್ಗಾಂವಿ ಮಹಿಳೆ & ಡಿಕೆ ಶಿವಕುಮಾರ್

Updated on: Apr 10, 2024 | 6:55 AM

ಬೆಂಗಳೂರು, ಏಪ್ರಿಲ್ 10: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ (Gruha Lakshmi Scheme) ಉಚಿತ ಗ್ಯಾರಂಟಿ ಯೋಜನೆಯಡಿ ಪ್ರತಿ ತಿಂಗಳು ಬರುವ 2000 ರೂ. ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯ ಶಿಗ್ಗಾಂವಿ ನಿವಾಸಿ ಲತಾ ಎಂಬವರು ಫ್ರಿಡ್ಜ್ (Fridge) ಖರೀದಿಸಿದ್ದಾರೆ ಎಂಬ ವರದಿಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹರ್ಷ ವ್ಯಕ್ತಪಡಿಸಿದ್ದಾರೆ. ಗೃಹಿಣಿ ಫ್ರಿಡ್ಜ್ ಖರೀದಿಸಿರುವ ಬಗ್ಗೆ ‘ಟಿವಿ9’ ಮಾಡಿದ್ದ ವರದಿಯ ತುಣುಕನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಡಿಕೆ ಶಿವಕುಮಾರ್ ಬಡವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ ಎಂದು ಬರೆದುಕೊಂಡಿದ್ದಾರೆ.

‘ಹಾವೇರಿಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗ್ಯಾರಂಟಿಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಸುದ್ದಿ ತಿಳಿದು ಮನಸ್ಸಿನಲ್ಲಿ ಒಂದು ಸಾರ್ಥಕತೆಯ ಭಾವ ಮೂಡಿದೆ. ರಾಜಕೀಯ ಮಾಡಲೆಂದೇ ಎಷ್ಟೋ‌ ಜನ ಕಾಂಗ್ರೆಸ್ ಗ್ಯಾರಂಟಿಗಳ‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರು. ನಾವು ಬಡವರ ಮೇಲೆ ರಾಜಕೀಯ ಮಾಡಲ್ಲ, ಬಡವರ ಬದುಕು ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಅವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ’ ಎಂದು ಡಿಕೆ ಶಿವಕುಮಾರ್ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಡಿಕೆ ಶಿವಕುಮಾರ್ ಎಕ್ಸ್​ ಸಂದೇಶ


ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಲತಾ ಎಂಬ ಗೃಹಿಣಿ ಪ್ರತಿ ತಿಂಗಳು ಬಂದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಯುಗಾದಿ ಹಬ್ಬಕ್ಕೆ ಹೊಸ ಫ್ರಿಡ್ಜ್ ಖರೀದಿ ಮಾಡಿದ್ದಾರೆ. 17,500 ರೂಪಾಯಿ ಕೊಟ್ಟು ಫ್ರಿಡ್ಜ್ ಖರೀದಿಸಿದ್ದಾರೆ. ಹಬ್ಬದಂದು ಮನೆಗೆ ಬಂದ ಫ್ರಿಡ್ಜ್​ಗೆ ಲತಾ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದರು. ಈ ಕುರಿತು ‘ಟಿವಿ9’ ವರದಿ ಮಾಡಿತ್ತು.

ಇದನ್ನೂ ಓದಿ: ಹಾವೇರಿ: ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರಿಜ್ ಖರೀದಿಸಿದ ಮಹಿಳೆ

ಗೃಹಲಕ್ಷ್ಮಿ ಯೋಜನೆ

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಸಹ ಒಂದಾಗಿದೆ.

2023 ಜುಲೈ 19ರಿಂದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಚಾಲನೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us