ಆಸ್ಪತ್ರೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯ: ಆರೋಗ್ಯ ಇಲಾಖೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ

| Updated By: Ganapathi Sharma

Updated on: Dec 03, 2024 | 11:33 AM

ಐಟಿ ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಡುವ ವಿಚಾರ ಕೆಲವು ತಿಂಗಳ ಹಿಂದೆ ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ರಾಜ್ಯದ ಆಸ್ಪತ್ರೆಗಳಲ್ಲಿ ಕನ್ನಡ ಕಡ್ಡಾಯಗೊಳಿಸುವ ವಿಚಾರ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಪತ್ರವನ್ನೂ ಬರೆದಿದೆ. ವಿವರ ಇಲ್ಲಿದೆ.

ಆಸ್ಪತ್ರೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯ: ಆರೋಗ್ಯ ಇಲಾಖೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ
ಕನ್ನಡ ಅಭಿವೃದ್ಧಿ ಪ್ರಾಧಿಕಾರ & ಪುರುಷೋತ್ತಮ ಬಿಳಿಮಲೆ
Image Credit source: Facebook
Follow us on

ಬೆಂಗಳೂರು, ಡಿಸೆಂಬರ್ 3: ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಕನ್ನಡ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದ್ದು, ಈ ವಿಚಾರವಾಗಿ ಸರ್ಕಾರಕ್ಕೆ ಪತ್ರವನ್ನೂ ಬರೆದಿದೆ. ಇದರೊಂದಿಗೆ, ಐಟಿ ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂಬ ಕೂಗಿನ ಬಳಿಕ ಇದೀಗ ಆಸ್ಪತ್ರೆಗಳಲ್ಲಿಯೂ ಕನ್ನಡ ಕಡ್ಡಾಯಕ್ಕೆ ಕೂಗು ಆರಂಭವಾದಂತಾಗಿದೆ.

ಆಸ್ಪತ್ರೆಗಳಲ್ಲಿ ಭಾಗಶಃ ನರ್ಸ್ ಹಾಗೂ ವೈದ್ಯರುಗಳಿಗೆ ಕನ್ನಡ ಬರ್ತಿಲ್ಲ. ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನರ್ಸ್ ಹಾಗೂ ವೈದ್ಯರಿಗೆ ಕನ್ನಡ ಬಾರದ ಹಿನ್ನೆಲೆ ಸಾಹಿತಿಯೊಬ್ಬರಿಗೆ ಸಮಸ್ಯೆಯಾಗಿತ್ತು. ಸಮಸ್ಯೆ ಏನೆಂಬುದು ವೈದ್ಯರಿಗೆ ಅರ್ಥವಾಗದೆ ಸಮಸ್ಯೆ ಆಗಿತ್ತು. ಇದರ ಬೆನ್ನಲ್ಲೇ ಕನ್ನಡ ಗೊತ್ತಿರುವವರ ನೇಮಕಾತಿಗೆ ಪ್ರಾಧಿಕಾರ ಆಗ್ರಹಿಸಿದೆ.

ಆಸ್ಪತ್ರೆಗಳಲ್ಲಿ ನೇಮಕಾತಿ ಮಾಡುವಾಗ ಶೇ 60 ರಷ್ಟು ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿದೆ. ಈ ವಿಚಾರವಾಗಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪತ್ರದಲ್ಲೇನಿದೆ?

ಎಲ್ಲಾ ಆಸ್ಪತ್ರೆಗಳಲ್ಲಿ ಆರೋಗ್ಯದ ಸಮಸ್ಯೆ ಬಗ್ಗೆ ಎಲ್ಲರಿಗೂ ಇಂಗ್ಲಿಷ್​​ನಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಇದರಿಂದ ವೈದ್ಯರಿಗೆ ರೋಗಿಗಳ ಸಮಸ್ಯೆ ಏನೆಂಬುದು ಸರಿಯಾಗಿ ತಿಳಿಯದೇ ಯಡವಟ್ಟುಗಳಾಗುತ್ತಿವೆ. ಹೀಗಾಗಿ ಪ್ರಾದೇಶಿಕ ಭಾಷೆಯ ಜನರಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಇದರಿಂದ ರೋಗಿಗಳ ಆರೋಗ್ಯಕ್ಕೂ ಒಳಿತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಮೆಟ್ರೋ ರೈಲಿನಲ್ಲೂ ಸಿಗಲಿದೆ 5ಜಿ ನೆಟ್ವರ್ಕ್

ಆಸ್ಪತ್ರೆಗಳಲ್ಲಿ ಹೆಚ್ಚಿನ ನರ್ಸ್​ಗಳು, ವೈದ್ಯರಿಗೆ ​ಕನ್ನಡ ಬರುತ್ತಿಲ್ಲ. ಹೀಗಾಗಿ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ