ಹೊಸ ವರ್ಷ ಆಚರಣೆ: ಧಾರವಾಡ ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ
ಪ್ರಾಂಗಣಗಳಲ್ಲಿ, ಉಪಹಾರ ಸ್ಥಳಗಳಲ್ಲಿ, ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚುವಂತೆ ಸೂಚಿಸಲಾಗಿದೆ.

ಧಾರವಾಡ: ಹೊಸ ವರ್ಷಾಚರಣೆ ಸಂಬಂಧವಾಗಿ ಕರ್ನಾಟಕ ಸರ್ಕಾರ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಆದೇಶದಂತೆ ಕೋವಿಡ್-19 ನಿಗಾವಣೆ, ನಿಯಂತ್ರಣ ಮತ್ತು ಜಾಗೃತಿಗಾಗಿ ಧಾರವಾಡ ಜಿಲ್ಲಾಡಳಿತ ಮಾರ್ಗ ಸೂಚಿಗಳನ್ನು ಹೊರಡಿಸಿದೆ.
ಜಿಲ್ಲೆಯ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ, ಪ್ರದೇಶಗಳಲ್ಲಿ ಜನರ ವಿಶೇಷ ಯೋಜಿತ ಒಟ್ಟುಗೂಡುವಿಕೆಯನ್ನು ನಿರ್ಬಂಧಿಸಲಾಗಿದೆ. ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಮಾರ್ಗಸೂಚಿಯಲ್ಲಿ ಏನೇನಿದೆ? ಈ ಕುರಿತು ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರಿಗೆ ತಿಳಿಯಪಡಿಸುವುದಕ್ಕಾಗಿ, ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸೂಚಿಸಿದ್ದಾರೆ. ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.
ಎಲ್ಲಿಂದ ಎಲ್ಲಿಯವರೆಗೆ ನಿರ್ಬಂಧನೆ? ಡಿಸೆಂಬರ್ 30, 2020 ರಿಂದ ಜನವರಿ 2, 2021ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ, ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ಡಿ.ಜೆ ಡಾನ್ಸ್ ಕಾರ್ಯಕ್ರಮಗಳನ್ನು, ಪಾರ್ಟಿಗಳನ್ನು ನಿಷೇಧಿಸಲಾಗಿದೆ. ಆದರೆ ಕ್ಲಬ್, ಪಬ್, ರೆಸ್ಟೋರೆಂಟ್ಗಳನ್ನು ಪ್ರತಿನಿತ್ಯದಂತೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.

ಜಿಲ್ಲಾಧಿಕಾರಿ ನಿತೇಶ ಪಾಟೀಲ್
ಜನರ ಸಂಭ್ರಮಾಚರಣೆಗೆ ನಿಷೇಧ: ಹೊಸ ವರ್ಷಾಚರಣೆ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಸೇರುವಿಕೆಯನ್ನು ಹಾಗೂ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ. ಆಯ್ದ ರಸ್ತೆ, ಸ್ಥಳಗಳಲ್ಲಿ ರಾಜ್ಯ ಸರ್ಕಾರ ಸ್ಥಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಜಿಲ್ಲಾಡಳಿತ ನಡೆಸಿದ ಸಭೆ
ನವೆಂಬರ್ 27, 2020ರಲ್ಲಿನ ಸರ್ಕಾರದ ಆದೇಶದಂತೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅದರಂತೆ ಬಹು ಮುಖ್ಯವಾಗಿ 65 ವರ್ಷದ ಮೇಲ್ಮಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್ಗಳು, ಮಾಲ್ಗಳು, ಪಬ್, ರೆಸ್ಟೋರೆಂಟ್ಗಳು ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಮಾನಿಟೈಸರ್ ವ್ಯವಸ್ಥೆಯನ್ನು ಕಾಡ್ಡಾಯವಾಗಿ ಪಾಲಿಸಬೇಕು.

ಸಭೆಯ ಚಿತ್ರಣ
ಹೋಟೆಲ್ಗಳು, ಮಾಲ್ಗಳು, ಪಬ್, ರೆಸ್ಟೋರೆಂಟ್ಗಳು ಹಾಗೂ ಅಂತಹ ಸ್ಥಳ, ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಆದೇಶದಂತೆ ಕೊವಿಡ್-19 ರ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದಿಂದ ಜನರು ಸೇರಲು ಜಾಗ್ರತೆ ವಹಿಸುವುದು. ಅಗತ್ಯವಿದ್ದಲ್ಲಿ, ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್ಲೈನ್ ಮುಖಾಂತರ, ಟೋಕನ್ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆಯನ್ನು ಕಲ್ಪಿಸುವುದು.
ಸಾಮಾಜಿಕ ಅಂತರ ಕಾಪಾಡಲೇಬೇಕು: ಪ್ರಾಂಗಣಗಳಲ್ಲಿ, ಉಪಹಾರ ಸ್ಥಳಗಳಲ್ಲಿ, ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚುವಂತೆ ಸೂಚಿಸಲಾಗಿದೆ.

ಜಿಲ್ಲಾ ಕಚೇರಿಯ ಚಿತ್ರಣ
ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ: ಕೊವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ತಪ್ಪದೇ ಪಾಲಿಸಬೇಕು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ, ಕಾರ್ಪೋರೇಶನ್, ಪ್ರಾಧಿಕಾರಗಳಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.
ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತು, ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೇ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.ಈ ನಿಟ್ಟಿನಲ್ಲಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಿಮಯಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ.
ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಈ ಬಾರಿ ಕಂಪ್ಲೀಟ್ ಬ್ರೇಕ್..



