
ಹುಬ್ಬಳ್ಳಿ, ಜುಲೈ 23: ಮಹದಾಯಿ ಯೋಜನೆ (Mahadayi Project) ಜಾರಿಯಾದರೆ ಅನೇಕ ನಗರ ಮತ್ತು ಗ್ರಾಮಗಳಿಗೆ ಕುಡಿಯುವ ನೀರು ಸಿಗುತ್ತದೆ. ಮಹದಾಯಿ ಯೋಜನೆ ಇಂದು ಜಾರಿಯಾಗುತ್ತೆ, ನಾಳೆ ಜಾರಿಯಾಗುತ್ತೆ ಅಂತ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಜನರು ದಶಕಗಳಿಂದ ಕಾಯುತ್ತಿದ್ದಾರೆ. ಆದರೆ ಯೋಜನೆಗೆ ಒಂದಾದ ಮೇಲೆ ಒಂದು ಅಡ್ಡಿಗಳು ಬರುತ್ತಲೆ ಇವೆ. ಆಳುವ ವರ್ಗದ ನಿರ್ಲಕ್ಷ್ಯದಿಂದ ಇನ್ನುವರೆಗೆ ಯೋಜನೆ ಜಾರಿಯಾಗದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಇತ್ಯರ್ಥವಾದ ಬಳಿಕವೇ ಯೋಜನೆಗೆ ಅನುಮತಿ ನೀಡೋದಾಗಿ ಕೇಂದ್ರ ಸರ್ಕಾರ ಹೇಳಿದ್ದು, ಯೋಜನೆಗೆ ಮತ್ತೆ ಹಿನ್ನಡೆ ತಂದಿದೆ.
ಹುಬ್ಬಳ್ಳಿ-ಧಾರವಾಡ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ 13 ಪಟ್ಟಣಗಳು ಮತ್ತು ನೂರಾರು ಗ್ರಾಮಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಉದ್ದೇಶಕ್ಕಾಗಿ ಮಹದಾಯಿ ಯೋಜನೆ ಜಾರಿಗೊಳಿಸಬೇಕು ಅಂತ ದಶಕಗಳಿಂದ ಜನರು ಆಗ್ರಹಿಸುತ್ತಲೇ ಇದ್ದಾರೆ. ಆದರೆ ಇದೇ ಯೋಜನೆ ವಿಚಾರವಾಗಿ ಕರ್ನಾಟಕ ಮತ್ತು ಗೋವಾ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ. 2010 ರಲ್ಲಿ ಕೇಂದ್ರ ಸರ್ಕಾರ ಮಹದಾಯಿ ಜಲವಿವಾದ ಮಂಡಳಿ ರಚನೆ ಮಾಡಿತ್ತು. ಈ ಮಂಡಳಿ 2018 ರಲ್ಲಿ ಅಂತಿಮ ತೀರ್ಪು ನೀಡಿತ್ತು.
ಇದನ್ನೂ ಓದಿ: ಗುಡ್ ನ್ಯೂಸ್: ಕೊನೆಗೂ ಮಹದಾಯಿ ಯೋಜನೆ ಜಾರಿಗೆಗೆ ದಿಟ್ಟ ಹೆಜ್ಜೆ ಇಟ್ಟ ಸರ್ಕಾರ
ಮಂಡಳಿ, ಕರ್ನಾಟಕಕ್ಕೆ 13.42 ಟಿಎಂಸಿ ನೀರು ಹಂಚಿಕೆ ಮಾಡಿ ಆದೇಶ ಮಾಡಿತ್ತು. ಮಹದಾಯಿ ಯೋಜನೆಯ ಡಿಪಿಆರ್ಗೆ ಅನುಮತಿ ಸಿಕ್ಕರು ಕೂಡ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ ಸಿಕ್ಕಿಲ್ಲ. ಮಹದಾಯಿ ಯೋಜನೆಗೆ ಅನುಮತಿ ನೀಡದಂತೆ ಗೋವಾ ಸರ್ಕಾರ ಮೇಲಿಂದ ಮೇಲೆ ಕೇಂದ್ರದ ಮೇಲೆ ಒತ್ತಡ ಹೇರುತ್ತಲೆ ಇದೆ. ಜೊತೆಗೆ ಕೋರ್ಟ್ನಲ್ಲಿ ಕೂಡ ಯೋಜನೆಗೆ ಅನುಮತಿ ನೀಡದಂತೆ ಅರ್ಜಿ ಹಾಕಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೂಡ ಮೇಲ್ಮನವಿ ಸಲ್ಲಿಸಿದೆ. ಇದೀಗ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ನಲ್ಲಿರುವ ಪ್ರಕರಣ ಇತ್ಯರ್ಥವಾಗುವವರಗೆ ಮಹದಾಯಿ ಯೋಜನೆಗೆ ಅನುಮತಿ ನೀಡೋದಿಲ್ಲ ಅಂತ ಹೇಳಿದ್ದು, ಯೋಜನೆಗೆ ಮತ್ತೊಮ್ಮೆ ಹಿನ್ನಡೆ ಉಂಟಾಗಿದೆ.
ಇನ್ನು ಈ ಬಗ್ಗೆ ಕರ್ನಾಟಕ ನೀರಾವರಿ ನಿಗಮಕ್ಕೆ ಉತ್ತರ ನೀಡಿರುವ ಕೇಂದ್ರ ಸರ್ಕಾರ, ‘ಕರ್ನಾಟಕ ಮತ್ತು ಗೋವಾ ನಡುವಿನ ಈ ಪ್ರಕರಣ ಕೋರ್ಟ್ನಲ್ಲಿದ್ದು, ವಿಚಾರಣಾ ಹಂತದಲ್ಲಿದೆ. ಈ ಸಮಯದಲ್ಲಿ ಮಧ್ಯಪ್ರವೇಶ ಮಾಡುವುದು ಸರಿಯಲ್ಲ. ಹೀಗಾಗಿ ಅರಣ್ಯ ತೀರುವಳಿಯ ಪ್ರಸ್ತಾಪವನ್ನು ವಾಪಸ್ ಕಳುಹಿಸಲಾಗಿದೆ. ಕೋರ್ಟ್ ನಿರ್ದೇಶನ ಆಧಾರದಲ್ಲಿ ಪ್ರಸ್ತಾವವನ್ನು ಮರುಪರಿಶೀಲನೆ ಮಾಡಲಾಗುವುದು’ ಅಂತ ಹೇಳಿದೆ. ಇದು ಹುಬ್ಬಳ್ಳಿ-ಧಾರವಾಡ ಸೇರಿದಂತೆ ಯೋಜನೆ ಲಾಭ ಪಡೆಯುವ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಮಹದಾಯಿ ಯೋಜನೆಗೆ ಈ ಹಿಂದೆ ಕೇಂದ್ರ ಸರ್ಕಾರ ಪರವಾನಗಿ ನೀಡಿದಾಗ ಬಿಜೆಪಿ ನಾಯಕರು ರಾಜ್ಯದಲ್ಲಿ ಅದ್ಧೂರಿ ವಿಜಯೋತ್ಸವ ಆಚರಿಸಿದ್ದರು. ಅಂದು ಸಿಎಂ ಆಗಿದ್ದ ಯಡಿಯೂರಪ್ಪ ಎರಡು ಸಾವಿರ ಕೋಟಿ ರೂ ವೆಚ್ಚದ ಕಾಮಗಾರಿ ಕೈಗೊಳ್ಳಲು ಡಿಪಿಆರ್ ಕೂಡ ಸಿದ್ದಮಾಡಿಸಿದ್ದರು. ಕಾಮಗಾರಿ ಕೂಡ ಆರಂಭವಾಗಿತ್ತು. ಆದರೆ ಗೋವಾ ಕೋರ್ಟ್ ಮೆಟ್ಟಿಲೇರಿದ್ದರಿಂದ ಯೋಜನೆ ನೆನೆಗುದಿಗೆ ಬಿದ್ದಿದೆ. ಇಂದಿಗೂ ಕೂಡಾ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಯೋಜನೆ ವ್ಯಾಪ್ತಿಯ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಹೀಗಾಗಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಇನ್ನು ಒತ್ತಡ ಹಾಕಬೇಕು ಅನ್ನೋದು ಈ ಭಾಗದ ಜನರ ಆಗ್ರಹವಾಗಿದೆ.
ಕೇಂದ್ರದಲ್ಲಿ ರಾಜ್ಯದ ನಾಲ್ವರು ಮಂತ್ರಿಗಳಿದ್ದಾರೆ. ಬಿಜೆಪಿ, ಜೆಡಿಎಸ್ನಿಂದ ಗೆದ್ದಿರುವ 20 ಸಂಸದರು ಇದ್ದಾರೆ. ಆದರೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಯೋಜನೆ ಜಾರಿಗೆ ಅಡ್ಡಿ ನಿವಾರಣೆ ಮಾಡ್ತಿಲ್ಲಾ. ಗೋವಾದವರ ಆಕ್ಷೇಪಣೆ ಹಿಂಪಡೆಯುವಂತೆ ಮಾಡುತ್ತಿಲ್ಲ. ಇದೇ ರೀತಿಯಾದ್ರೆ ಮತ್ತೆ ಹೋರಾಟ ಮಾಡಬೇಕಾಗುತ್ತದೆ ಎಂದು ಮಹದಾಯಿ ಹೋರಾಟಗಾರ ಬಾಬಾಜಾನ್ ಮುಧೋಳ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ; ಜಲನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ
ದಶಕಗಳಿಂದ ಕುಡಿಯಲು ಮತ್ತು ಕೃಷಿಗೆ ನೀರು ಇಲ್ಲದೇ ಪರದಾಡುತ್ತಿರುವ ಧಾರವಾಡ, ಬೆಳಗಾವಿ, ಗದಗ ಬಾಗದ ಜನರು ಯೋಜನೆ ಜಾರಿಗೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸಮನ್ವಯತೆಯನ್ನು ಸಾಧಿಸಿ, ಯೋಜನೆ ಜಾರಿಗೊಳಿಸಲು ಮುಂದಾಗಬೇಕಿದೆ. ಆರೋಪ ಪ್ರತ್ಯಾರೋಪ ಮಾಡದೆ ಜನಪ್ರತಿನಿಧಿಗಳು ಯೋಜನೆ ಜಾರಿಗೆ ತಮ್ಮ ಬದ್ದತೆಯನ್ನು ತೋರಿಸಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.