ಮಕ್ಕಳಲ್ಲಿ ರಕ್ತಹೀನತೆ: ಶಾಕ್​ ಆಗುವಂತಿದೆ ಧಾರವಾಡ ಆರೋಗ್ಯ ಇಲಾಖೆ ಅಂಕಿ ಅಂಶ

ಧಾರವಾಡ ಜಿಲ್ಲೆಯಲ್ಲಿ ಮಕ್ಕಳ ರಕ್ತಹೀನತೆ ಕೇಸ್​​ಗಳ ಸಂಖ್ಯೆ ಆಘಾತಕಾರಿ ಪ್ರಮಾಣದಲ್ಲಿದೆ. 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ, ಜಂಕ್‌ ಫುಡ್‌ ಹಾಗೂ ಮೊಬೈಲ್‌ನ ಅತಿಯಾದ ಬಳಕೆಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ ಅಡಿಯಲ್ಲಿ ಮಕ್ಕಳ ತಪಾಸಣೆ ನಡೆಸುವ ವೇಳೆ ಈ ವಿಷಯ ಬೆಳಕಿಗೆ ಬಂದಿದೆ.

ಮಕ್ಕಳಲ್ಲಿ ರಕ್ತಹೀನತೆ: ಶಾಕ್​ ಆಗುವಂತಿದೆ ಧಾರವಾಡ ಆರೋಗ್ಯ ಇಲಾಖೆ ಅಂಕಿ ಅಂಶ
ರಕ್ತಹೀನತೆ (ಸಾಂದರ್ಭಿಕ ಚಿತ್ರ)
Edited By:

Updated on: Nov 14, 2025 | 5:03 PM

ಧಾರವಾಡ, ನವೆಂಬರ್​ 14: ಮಕ್ಕಳನ್ನು ಅಪೌಷ್ಟಿಕತೆ ಸಮಸ್ಯೆಯಿಂದ ಪಾರು ಮಾಡಲು ಸಾಕಷ್ಟು ಯೋಜನೆಗಳನ್ನು ಸರ್ಕಾರ ಜಾರಿಗೆ ತರುತ್ತೆ. ಆದರೂ ಅದರ ಪ್ರಯೋಜನ ದೊರೆಯದ ಪರಿಣಾಮ ಅನೇಕ ಮಕ್ಕಳು ನಾನಾ ಸಮಸ್ಯೆಯಿಂದ ಬಳಲುತ್ತಲೇ ಇದ್ದಾರೆ. ಇದಕ್ಕೆ ಧಾರವಾಡ ಜಿಲ್ಲೆಯೂ ಹೊರತಾಗಿಲ್ಲ. ಇತ್ತೀಚಿಗೆ ನಡೆಸಲಾದ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅರ್ಧ ಲಕ್ಷದಷ್ಟು ಮಕ್ಕಳು ರಕ್ತ ಹೀನತೆಯಿಂದ ಬಳಲುತ್ತಿರುವ ಅಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಜಿಲ್ಲಾ ಆರೋಗ್ಯ ಇಲಾಖೆಯ ವರದಿ ಪ್ರಕಾರ 1ರಿಂದ 14 ವರ್ಷದೊಳಗಿನ 58,159 ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬಂದಿದೆ. ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕ ಆಹಾರ, ಆರೋಗ್ಯ ನ್ಯೂನತೆಗಳ ಮೇಲೆ ನಿಗಾ ಇಡಲು ಸರಕಾರ ‘ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ’ ಜಾರಿಗೊಳಿಸಿದೆ. ಇದರಡಿ ಪ್ರತಿ ವರ್ಷ ಎರಡು ಬಾರಿ 1ರಿಂದ 14 ವರ್ಷದ ಮಕ್ಕಳ ಆರೋಗ್ಯ ತಪಾಸಣೆಯನ್ನು ಅಂಗನವಾಡಿ ಹಾಗೂ ಶಾಲೆಗಳಲ್ಲಿ ನಡೆಸಲಾಗುತ್ತೆ. ಈ ಹಿನ್ನಲೆ ಜಿಲ್ಲೆಯಲ್ಲಿ ಪ್ರಸ್ತುತ 1,80,882 ಮಕ್ಕಳ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 30,598 ಮಕ್ಕಳು ಅಲ್ಪ, 27,282 ಮಕ್ಕಳು ಮಧ್ಯಮ ಹಾಗೂ 279 ಮಕ್ಕಳು ತೀವ್ರತರದ ರಕ್ತಹೀನತೆಯಿಂದ ಬಳಲುತ್ತಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ರಕ್ತಹೀನತೆ ಸಮಸ್ಯೆ ದೂರಮಾಡಲು ಈ ಮನೆಮದ್ದುಗಳನ್ನು ಬಳಸಿ

ಆಹಾರದಲ್ಲಿ ಪೌಷ್ಟಿಕಾಂಶದ ಕೊರತೆ, ಜಂಕ್ ಆಹಾರ ಪದಾರ್ಥಗಳ ಸೇವನೆ ಸೇರಿದಂತೆ ಹತ್ತಾರು ಕಾರಣಗಳಿಂದ ಮಕ್ಕಳ ದೇಹದಲ್ಲಿ ರಕ್ತ ಉತ್ಪಾದನೆ ಕಡಿಮೆಯಾಗುತ್ತಿದೆ. ಕೆಲ ಮಕ್ಕಳಲ್ಲಿ ಜೆನೆಟಿಕ್ ಆಗಿಯೇ ರಕ್ತಹೀನತೆ ಕಾಡುತ್ತಿದೆ. ಇದರಿಂದ ಮಕ್ಕಳು ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಜೊತೆಗೆ ಏಕಾಗ್ರತೆ ಸಾಧಿಸಲು ಮತ್ತು ಆಟೋಟಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದೇ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಇದು ಮಕ್ಕಳ ಕಲಿಕೆ ಮೇಲೆ ನೇರ ಪರಿಣಾಮ ಉಂಟು ಮಾಡುತ್ತಿದೆ.

ಇನ್ನು ಸಹಜವಾಗಿ ಮಕ್ಕಳಿಂದ ಹಿಡಿದು ಪಾಲಕರ ವರೆಗೂ ಮೊಬೈಲ್ ಗೀಳು ಹೆಚ್ಚಾಗಿದೆ. ಅಳುವ ಮಕ್ಕಳ ಕೈಗೆ ಸುಲಭವಾಗಿ ಮೊಬೈಲ್ ಕೊಟ್ಟು ಸಮಾಧಾನ ಮಾಡುವವರ ಸಂಖ್ಯೆ ಹೆಚ್ಚಿದೆ. ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಮತ್ತು ಅಗತ್ಯ ಇರುವಷ್ಟು ಆಹಾರ ನೀಡುವುದನ್ನೂ ಬಹುತೇಕ ಪೋಷಕರು ಮಾಡದ ಕಾರಣ ಅವರ ದೈಹಿಕ ಬೆಳವಣಿಗೆ ಮೇಲೆ ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರದ ಜೊತೆ ಪಾಲಕರೂ ವಿಶೇಷ ಕಾಳಜಿ ವಹಿಸಿದಾಗ ಮಾತ್ರ ಇಮತಹ ಸಮಸ್ಯೆಯಿಂದ ಮಕ್ಕಳನ್ನು ಹೊರ ತರಲು ಸಾಧ್ಯ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:00 pm, Fri, 14 November 25

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us