ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ಆದಿತ್ಯ ನೇಣಿಗೆ ಶರಣಾಗಿದ್ದ ಪ್ರಕರಣ ಸಂಬಂಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಇನ್ನು ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಪಕ್ಷ ನಾಯಕರು ಸರ್ಕಾರ ವಿರುದ್ಧ ಮುಗಿಬಿದ್ದಿದ್ದಾರೆ. ಇದೀಗ ವಿದ್ಯಾಗಿರಿ ಠಾಣೆಯ ಇನ್ಸ್​​ಪೆಕ್ಟರ್​​ ನನ್ನು ಅಮಾನತು ಮಾಡಲಾಗಿದೆ.

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ
ಆದಿತ್ಯಾ, ರಫೀಕ್ (ಇನ್ಸ್​​ಪೆಕ್ಟರ್)
Edited By:

Updated on: Apr 30, 2026 | 6:40 PM

ಧಾರವಾಡ, (ಏಪ್ರಿಲ್ 30): ವಿದ್ಯಾರ್ಥಿ  ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ (Dharwad Aditya Suicide Case) ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​​ನನ್ಜು ಅಮಾನತು ಮಾಡಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್‌ ನನ್ನು ಅಮಾನತು ಮಾಡಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯ್ಯದ್ ನನ್ನು ನಿನ್ನೆ (ಏಪ್ರಿಲ್ 29) ಅಮಾನತು ಮಾಡಲಾಗಿತ್ತು. ಆದ್ರೆ, ಪ್ರಕರಣ ಗಂಭೀರ ಪಡೆದುಕೊಳ್ಳುತ್ತಿದ್ದಂತೆಯೇ ಇಂದು (ಏಪ್ರಿಲ್ 30) ಇನ್ಸ್​ಪೆಕ್ಟರ್​​ನನ್ನು ಸಹ ಸಸ್ಪೆಂಡ್​ ಮಾಡಲಾಗಿದೆ.

ಗಾಂಜಾ ಸೇವನೆ ಆರೋಪದಡಿ ವಿದ್ಯಾರ್ಥಿ ಆದಿತ್ಯನನ್ನು ವಶಕ್ಕೆ ಪಡೆಯಲಾಗಿತ್ತು. ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ಆದಿತ್ಯನಿಂದ 2,000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ತಾಯಿಯಿಂದ ಹಣ ಕೊಡಿಸಲು ಆದಿತ್ಯ ಯತ್ನಿಸಿದ್ದು, ಆದ್ರೆ, ತಾಯಿ ನಿರಾಕರಿಸಿದ ಕಾರಣ ಧಾರವಾಡದ ಕಿಟಲ್ ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದ ಆದಿತ್ಯ ಮಗ್ಯಾಗೇರಿ ಮಂಗಳವಾರ (ಏ.28) ನೇಣಿಗೆ ಶರಣಾಗಿದ್ದ.

ಇದನ್ನೂ ನೋಡಿ: ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಪೊಲೀಸ್​ ಸಿಬ್ಬಂದಿಗೆ ಬಿಗ್​​ ಶಾಕ್​​

ಸೋಮವಾರ ರಾತ್ರಿ ಆದಿತ್ಯ ತನ್ನ ಬಾಡಿಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಪೊಲೀಸರ ಕಿರುಕುಳ ಮತ್ತು ಹಣದ ಬೇಡಿಕೆಯ ಒತ್ತಡವೇ ಈ ಭೀಕರ ಘಟನೆಗೆ ಕಾರಣ ಎಂದು ಅವರ ಕುಟುಂಬ ಆರೋಪಿಸಿದ್ದರು.

ಇನ್ನು, ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪೊಲೀಸರ ಮೇಲೆ ದೂರು ದಾಖಲಿಸಿಕೊಂಡು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಆ ವೇಳೆ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡಲ್ಲ ಎಂದಿದ್ದರು. ಇದರ ಬೆನ್ನಲ್ಲೇ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಪೇದೆಗಳನ್ನು ಸಸ್ಪೆಂಡ್​​ ಮಾಡಲಾಗಿತ್ತು. ಆದರೂ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಪ್ರಕರಣದ ಬಗ್ಗೆ ಧ್ವನಿ ಎತ್ತಿದ್ದು,ಗೃಹ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು, ಇದರ ಬೆನ್ನಲ್ಲೇ ಇದೀಗ ಇನ್ಸ್​​ಪೆಕ್ಟರ್​​ ರಫೀಕ್ ನನ್ನು ಸಹ ಅಮಾನತು ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Thu, 30 April 26

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us