ಧಾರವಾಡ ಹೊರವಲಯದಲ್ಲಿ ಹೊಸ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ 

ಧಾರವಾಡದ ಜಿಲ್ಲಾ ಆಸ್ಪತ್ರೆ ಕೇವಲ ಸ್ವಂತ ಜಿಲ್ಲೆಯ ಜನತೆಗೆ ಮಾತ್ರವಲ್ಲದೇ ಅಕ್ಕಪಕ್ಕದ ಎರಡು ಜಿಲ್ಲೆಗಳ ಜನರಿಗೂ ಆರೋಗ್ಯ ಸೇವೆ ನೀಡುತ್ತಿದೆ. ಇತ್ತೀಚೆಗೆ ಈ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಆಸ್ಪತ್ರೆಯನ್ನು ವಿಸ್ತರಿಸಬೇಕು ಎನ್ನುವ ಕೂಗು ಎದ್ದಿದೆ. ಆದರೆ ಈಗ ಆಸ್ಪತ್ರೆ ಇರುವ ಸ್ಥಳ ಪುರಾತತ್ವ ಇಲಾಖೆ ಅಧೀನದ ಕಟ್ಟಡಗಳ ಪಕ್ಕದಲ್ಲಿದೆ. ಹೀಗಾಗಿ ಇಡೀ ಆಸ್ಪತ್ರೆಯನ್ನೇ ನಗರದಿಂದ ಹೊರಗೆ ಸ್ಥಳಾಂತರಿಸಬೇಕು ಎಂಬ ಪ್ರಸ್ತಾಪವಿದೆ.

ಧಾರವಾಡ ಹೊರವಲಯದಲ್ಲಿ ಹೊಸ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ 
ಧಾರವಾಡ ಜಿಲ್ಲಾಸ್ಪತ್ರೆ
Edited By: ವಿವೇಕ ಬಿರಾದಾರ

Updated on: Apr 29, 2025 | 6:27 PM

ಧಾರವಾಡ, ಏಪ್ರಿಲ್​ 29: ಧಾರವಾಡ ಜಿಲ್ಲಾ ಆಸ್ಪತ್ರೆ (Dharwad District Hospital) ಸುಮಾರು 50 ವರ್ಷಗಳಷ್ಟು ಹಳೆಯ ಕಟ್ಟಡದ ಜೊತೆಗೆ ಇತ್ತೀಚೆಗೆ ನಿರ್ಮಾಣವಾಗಿರುವ ಕೆಲವೇ ಕಟ್ಟಡಗಳೊಂದಿಗೆ ನಡೆಯುತ್ತಿರುವ ಆಸ್ಪತ್ರೆಯಾಗಿದೆ. ಈ ಆಸ್ಪತ್ರೆಗೆ ಧಾರವಾಡ (Dharwad) ಜಿಲ್ಲೆಯ ಜನತೆ ಮಾತ್ರವಲ್ಲದೇ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ದಾಂಡೇಲಿ ಮತ್ತು ಬೆಳಗಾವಿ ಜಿಲ್ಲೆಯ ಸವದತ್ತಿ, ಕಿತ್ತೂರು, ಬೈಲಹೊಂಗಲ ತಾಲೂಕಿಜನ ಜನರೂ ಬರುತ್ತಾರೆ.

ದಿನವೊಂದಕ್ಕೆ ಇಲ್ಲಿನ ಹೊರರೋಗಿ ವಿಭಾಗಕ್ಕೆ ಕನಿಷ್ಠ 1500 ಜನ ಬರುತ್ತಾರೆ. ಆದರೆ, ಆಸ್ಪತ್ರೆಯಲ್ಲಿ ಕೇವಲ 350 ಬೆಡ್​ಗಳಿವೆ. ಹೀಗಾಗಿ ಜಿಲ್ಲಾಸ್ಪತ್ರೆ ವಿಸ್ತರಿಸಬೇಕು ಎಂಬ ವಿಚಾರ ಇದೆ. ಆದರೆ ಈಗ ಆಸ್ಪತ್ರೆ ಇರುವ ಅಕ್ಕಪಕ್ಕದಲ್ಲಿಯೇ ಪುರಾತತ್ವ ಇಲಾಖೆಯ ಕಟ್ಟಡವಿದೆ. ಹೀಗಾಗಿ, ಆಸ್ಪತ್ರೆಯನ್ನು ಧಾರವಾಡದ ಹೊರವಲಯದಲ್ಲಿ ವಿಶಾಲವಾದ ಜಾಗದಲ್ಲಿ ಹೊಸದಾಗಿ ಕಟ್ಟಬೇಕಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.

ಈಗ ಇರುವ ಆಸ್ಪತ್ರೆ ಹಳೆ ಬಸ್ ನಿಲ್ದಾಣ ಹಾಗೂ ಸಿಬಿಟಿಗೆ ತೀರ ಸಮೀಪವಿದೆ. ಹೀಗಾಗಿ ಇಲ್ಲಿಯೇ ವಿಸ್ತರಣೆ ಮಾಡಬೇಕು ಎನ್ನುವ ಆಗ್ರಹ ಇದೆಯಾದರೂ, ಈಗ ಇರುವ 10 ಎಕರೆ ಜಾಗದಲ್ಲಿ ಎಲ್ಲ ಕಡೆಯೂ ಕಟ್ಟಡಗಳು ಭರ್ತಿಯಾಗಿವೆ. ಹೊಸದಾಗಿ ವಿಸ್ತರಣೆ ಅವಕಾಶವೇ ಇಲ್ಲ. ಹೀಗಾಗಿ, ಬೇಲೂರು ಕೈಗಾರಿಕಾ ಪ್ರದೇಶದಲ್ಲಿನ 30 ಎಕರೆ ಜಾಗ ಇಲ್ಲವೇ, ಕೃಷಿ ವಿಶ್ವವಿದ್ಯಾಲಯಕ್ಕೆ ಸೇರಿದ ಧಾರವಾಡ-ಬೆಳಗಾವಿ ಹೆದ್ದಾರಿ ಪಕ್ಕದ 20 ಎಕರೆ ಜಾಗವನ್ನು ನೀಡುವಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು, ಇದಕ್ಕಾಗಗಿ 400 ಕೋಟಿ ರೂಪಾಯಿ ಅನುದಾನ ಬೇಕು ಎಂಬ ಬೇಡಿಕೆಯನ್ನೂ ಸಲ್ಲಿಸಲಾಗಿದೆ. ಈ ಪ್ರಸ್ತಾವ ಫೈನಾನ್ಸ್ ಇಲಾಖೆ ಮುಂದಿದ್ದು, ಶೀಘ್ರ ಅನುಮೋದನೆ ಸಿಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಹೇಳಿದ್ದಾರೆ.

ಇದನ್ನೂ ಓದಿ
ಹುಬ್ಬಳ್ಳಿ ಕಿಮನ್ಸ್​​ನಲ್ಲಿ ಸಕಾಲಕ್ಕೆ ವೇತನ ಸಿಗದೆ ಸಿಬ್ಬಂದಿ ಪರದಾಟ
ಧಾರವಾಡ: ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ
ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ ಆಸ್ತಿ ತೆರಿಗೆ ಹೊರೆ: ಎಷ್ಟು ಏರಿಕೆ?
ಮಹಿಳೆಯರು ವ್ಯಾನಿಟಿ ಬ್ಯಾಗ್​ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ: ಮುತಾಲಿಕ್

ಇದನ್ನೂ ಓದಿ: ಈ ಜಿಲ್ಲೆಗಳಿಗೆ ವಿಶೇಷ ರೈಲುಗಳು, ಎಲ್ಲಿಂದ ಎಲ್ಲಿಗೆ? ಇಲ್ಲಿದೆ ಸಂಪೂರ್ಣ ವಿವರ

ಒಟ್ಟಾರೆಯಾಗಿ ಜನಸಂಖ್ಯೆ ಬೆಳೆದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಅದಕ್ಕೆ ತಕ್ಕಂತೆ ಆಸ್ಪತ್ರೆಗಳ ವಿಸ್ತರಣೆಯಾಗಲೇಬೇಕು. ಆದರೆ, ಪುರಾತತ್ವ ಇಲಾಖೆ ಕಟ್ಟಡಗಳಿರುವ ಕಾರಣ ಧಾರವಾಡ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣವಾಗಿ ಬೇರೆ ಕಡೆಯೇ ಶಿಫ್ಟ್ ಮಾಡುವುದು ಅನಿವಾರ್ಯವಾಗಿದ್ದು, ಇದಕ್ಕೆ ಸರ್ಕಾರ ಸ್ಪಂದಿಸುತ್ತಾ? ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us