ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

ಧಾರವಾಡದ ಹಾಶ್ಮಿ ನಗರದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ. ಆರು ಜನರ ತಂಡವೊಂದು ಈ ಕೃತ್ಯ ಎಸಗಿದ್ದು, ಕೊಲೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!
ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​
Edited By:

Updated on: Apr 11, 2026 | 11:49 AM

ಧಾರವಾಡ, ಏಪ್ರಿಲ್ 11: ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದುದ್ದು, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು (Fairoz Pathan Murder) ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಶುಕ್ರವಾರ ರಾತ್ರಿ ಆತನ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರು ಮಂದಿ ಸೇರಿ ಈ ಕೃತ್ಯವನ್ನೆಸಗಿದ್ದಾರೆ ಎನ್ನಲಾಗಿದೆ.

ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ಮೊಹಮ್ಮದ್ ಶಾ ಸೇರಿದಂತೆ ಸದ್ದಾಂ, ಗೌಸ್, ಪರ್ವೇಜ್ ಹತ್ಯೆಗೈದ ಆರೋಪಿಗಳು ಎಂದು ತಿಳಿದುಬಂದಿದೆ. ಕೊಲೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಮತ್ತು ಗುಲಾಬ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೈದ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು, ಉಪನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸಂಭ್ರಮದಲ್ಲಿದ್ದ ಮನೆಗೆ ಸೂತಕ

ಸಿಸಿಟಿವಿ ಕ್ಯಾಮರಾದಲ್ಲಿ ಮೊಹಮ್ಮದ್ ಶಾ ಎಂಬಾತ ಕಾಣಿಸಿಕೊಂಡಿದ್ದು, ಆತನೊಂದಿಗೆ ಇನ್ನೂ ನಾಲ್ವರು ಇದ್ದರು ಎಂದು ಫೈರೋಜ್​ನ ಆಪ್ತರು ತಿಳಿಸಿದ್ದಾರೆ. ಫೈರೋಜ್ ಮತ್ತು ಮೊಹಮ್ಮದ್ ಶಾ ನಡುವೆ ಮೊದಲಿನಿಂದಲೂ ಜಗಳವಿತ್ತು. ಅಲ್ಲದೆ, ಹೊಲದ ಸಂಬಂಧದ ವೈಷಮ್ಯದಿಂದಲೂ ಈ ಘಟನೆ ನಡೆದಿದೆ. ರಾತ್ರಿ ಮನೆಗೆ ಬಂದಿದ್ದ ಆರೋಪಿಗಳು, ಫೈರೋಜ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕುಟುಂಬದ ಸದಸ್ಯರಾದ ತಂಗಿ ಮತ್ತು ತಾಯಿಗೂ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಅಷ್ಟೇ ಅಲ್ಲದೆ ಇನ್ನು 15 ದಿನಗಳಲ್ಲಿ ವಿವಾಹ ನಡೆಯಬೇಕಿತ್ತು. ಇದರ ಹಿನ್ನೆಲೆಯಲ್ಲಿ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಹಂಚುವ ಕಾರ್ಯದಲ್ಲಿ ಕುಟುಂಬಸ್ಥರು ತೊಡಗಿದ್ದರು. ಮದುವೆಯಾಗಿ ಹೊಸ ಜೀವನ ನಡೆಸಬೇಕಿದ್ದ ಜೀವ ದುರಂತ ಅಂತ್ಯ ಕಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:35 am, Sat, 11 April 26

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us