ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಧಾರವಾಡಕ್ಕೆ ಎಂಟ್ರಿ: ಕಾರ್ಖಾನೆ ಆರಂಭಿಸಲಿರುವ ಮುತ್ತಯ್ಯ ಮುರಳಿಧರನ್

Dharwad News: ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆದ ನಂತರ ಮುತ್ತಯ್ಯ ಮುರಳೀಧರನ್ ಉದ್ದಿಮೆ ರಂಗಕ್ಕೆ ಕಾಲಿರಿಸಿದ್ದು, ಇದೀಗ ಕರ್ನಾಟಕದಲ್ಲಿಯೂ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ. ಅದರಲ್ಲೂ ಧಾರವಾಡದಲ್ಲಿ ಉದ್ಯಮ ಸ್ಥಾಪಿಸಲು ಯೋಜನೆ ರೂಪಿಸಿರುವ ಅವರು, ಈಗಾಗಲೇ ಭೂಮಿಯನ್ನು ಕೂಡ ನೋಡಿಟ್ಟಿದ್ದಾರೆ.

ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಧಾರವಾಡಕ್ಕೆ ಎಂಟ್ರಿ: ಕಾರ್ಖಾನೆ ಆರಂಭಿಸಲಿರುವ ಮುತ್ತಯ್ಯ ಮುರಳಿಧರನ್
ಧಾರವಾಡದಲ್ಲಿ ಕಾರ್ಖಾನೆ ಆರಂಭಿಸಲು ಜಾಗ ಪರಿಶೀಲಿಸುತ್ತಿರುವ ಮುತ್ತಯ್ಯ ಮುರಳಿಧರನ್
Edited By:

Updated on: Aug 09, 2023 | 8:44 PM

ಧಾರವಾಡ, ಆಗಸ್ಟ್​ 09: ವಿಶ್ವವಿಖ್ಯಾತಿ ಸ್ಪಿನ್ ಬೌಲಿಂಗ್ ಮಾಂತ್ರಿಕ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (muttiah muralitharan) ಅಂದರೆ ಕ್ರಿಕೆಟ್‌ ಪ್ರೇಮಿಗಳಿಗೆ ಅಚ್ಚುಮೆಚ್ಚು. ಆದರೆ ಈ ಬೌಲರ್ ಓರ್ವ ಉದ್ಯಮಿ ಅನ್ನುವುದು ಬಹಳ ಜನರಿಗೆ ಗೊತ್ತಿಲ್ಲ. ಶ್ರೀಲಂಕಾದಲ್ಲಿ ಈಗಾಗಲೇ ಉದ್ಯಮ ಸ್ಥಾಪಿಸಿ ಯಶಸ್ವಿಯಾಗಿರುವ ಮುತ್ತಯ್ಯ ಮುರಲೀಧರನ್, ಇದೀಗ ಕರ್ನಾಟಕದಲ್ಲಿಯೂ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ. ಅದರಲ್ಲೂ ಧಾರವಾಡದಲ್ಲಿ ಉದ್ಯಮ ಸ್ಥಾಪಿಸಲು ಯೋಜನೆ ರೂಪಿಸಿರುವ ಅವರು, ಈಗಾಗಲೇ ಭೂಮಿಯನ್ನು ಕೂಡ ನೋಡಿಟ್ಟಿದ್ದಾರೆ.

ಎಲ್ಲವೂ ಯೋಜನೆ ಪ್ರಕಾರ ನಡೆದರೆ, ಮೂರು ತಿಂಗಳಲ್ಲಿ ಉದ್ದೇಶಿತ ಕೈಗಾರಿಕೆ ಸ್ಥಾಪನೆಯ ಪ್ರಾಥಮಿಕ ಕಾರ್ಯಗಳು ಆರಂಭವಾಗುತ್ತವೆ. ಮೆ. ಸಿಲೋನ್ ಬಿವರೇಜ್ ಕ್ಯಾನ್ ಪ್ರೈವೆಟ್ ಲಿಮಿಟೆಡ್ ಶ್ರೀಲಂಕಾದ ಕಂಪನಿಯಾಗಿದ್ದು, ಮುತ್ತಯ್ಯ ಮುರಳೀಧರ್ ಇದರ ಪ್ರವರ್ತಕರು. ಈ ಸಂಸ್ಥೆ ಅಲ್ಯುಮಿನಿಯಂ ಕ್ಯಾನ್ ತಯಾರಿಕೆ ಮತ್ತು ಪಾನೀಯಗಳನ್ನು ತುಂಬುವ ಉದ್ದಿಮೆಯಾಗಿದ್ದು, ಧಾರವಾಡದ ಎಫ್ಎಂಸಿಜಿ ಕ್ಲಸ್ಟರ್ ನಲ್ಲಿ ತನ್ನ ಘಟಕ ಸ್ಥಾಪಿಸಲು ಅನುಮತಿ ಹಾಗೂ ಸ್ಥಳಾವಕಾಶ ಕೋರಿ ಕರ್ನಾಟಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

ಈ ಹಿಂದಿನ ಬಿಜೆಪಿ ಸರ್ಕಾರ ಧಾರವಾಡ ತಾಲೂಕಿನ ಮುಮ್ಮಿಗಟ್ಟಿಯಲ್ಲಿ 200 ಎಕರೆ ಪ್ರದೇಶವನ್ನು ಎಫ್ಎಂಸಿಜಿ (ಫಾಸ್ಟ್ ಮೂವಿಂಗ್ ಕಂಜುಮರ್ ಗೂಡ್ಸ್) ಕ್ಲಸ್ಟರ್ ಎಂದು ಘೋಷಿಸಿತ್ತು. ಈ ಪ್ರದೇಶದಲ್ಲಿ 26 ಎಕರೆ ಸ್ಥಳಾವಕಾಶ ನೀಡುವಂತೆ ಮುರುಳೀಧರನ್ ಕಂಪನಿ ರಾಜ್ಯ ಸರ್ಕಾರವನ್ನು ಕೋರಿತ್ತು. ಈ ಉದ್ದಿಮೆ ರೂ. 446 ಕೋಟಿ ಬಂಡವಾಳದ್ದಾಗಿದ್ದು, 500 ಜನರಿಗೆ ಉದ್ಯೋಗಾವಕಾಶ ನೀಡಲಿದೆ.

ಇದನ್ನೂ ಓದಿ: ಧಾರವಾಡ; ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ

ರಾಜ್ಯ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ರಾಜ್ಯ ಮಟ್ಟದ ಭೂ ಆಡಿಟ್ ಸಮಿತಿ 2023ರ ಮಾರ್ಚ್ 4ರಂದು ನಡೆದ ಸಭೆಯಲ್ಲಿ ಕಂಪನಿಯ ಪ್ರಸ್ತಾವನೆಯನ್ನು ಪರಿಶೀಲಿಸಿದ ನಂತರ ಮಾ. 7ರಂದು ರಾಜ್ಯ ಮಟ್ಟದ ಸಿಂಗಲ್ ವಿಂಡೋ ಕ್ಲಿಯರೆನ್ಸ್ ಸಮಿತಿ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ಈ ಅನುಮೋದನೆಯಂತೆ ಕೆಐಎಡಿಬಿ ಮೆ. ಸಿಲೋನ್ ಬಿವರೇಜ್ ಕ್ಯಾನ್ ಪ್ರೈವೆಟ್ ಲಿಮಿಟೆಡ್ ಕಂಪನಿಗೆ 16.70 ಎಕರೆ ಭೂಮಿಯನ್ನು ಮುಮ್ಮಿಗಟ್ಟಿಯ ಕೈಗಾರಿಕಾ ಪ್ರದೇಶದ ಪ್ಲಾಟ್ ನಂ. 157ರಲ್ಲಿ, 2.64 ಎಕರೆ ಭೂಮಿಯನ್ನು ಪ್ಲಾಟ್ ನಂ. 156ರಲ್ಲಿ ಹಾಗೂ 6.15 ಎಕರೆ ಪ್ರದೇಶವನ್ನು ಪ್ಲಾಟ್ ನಂ. 158ರಲ್ಲಿ ಮಂಜೂರು ಮಾಡಿದೆ. ಜೊತೆಗೆ ಹೆಸ್ಕಾಂ 3000 ಕೆವಿ ವಿದ್ಯುತ್ ನ್ನು ಹಾಗೂ ಪ್ರತಿ ದಿನ 20 ಲಕ್ಷ ಲೀಟರ್ ನೀರನ್ನು ಕಂಪನಿಗೆ ಮಂಜೂರು ಮಾಡಲಾಗಿದೆ.

ಇದನ್ನೂ ಓದಿ: ಧಾರವಾಡ ಬೆಳಗಾವಿ ನೂತನ ರೈಲು ಮಾರ್ಗ ಯೋಜನೆಗೆ ಭೂಸ್ವಾಧೀನದ್ದೇ ದೊಡ್ಡ ಸಮಸ್ಯೆ

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆದ ನಂತರ ಮುತ್ತಯ್ಯ ಮುರಳೀಧರನ್ ಉದ್ದಿಮೆ ರಂಗಕ್ಕೆ ಕಾಲಿರಿಸಿದ್ದು, ಅವರ ಸಂಸ್ಥೆಯು ಎಂಟು ವಿವಿಧ ಗಾತ್ರಗಳ ನೀಳವಾದ, ಉತ್ತಮ ಗುಣಮಟ್ಟದ ವಿವಿಧ ಲೇಬಲ್ ಗಳ ಕ್ಯಾನ್ ಗಳನ್ನು ಉತ್ಪಾದಿಸುತ್ತಿದ್ದು, ಇವುಗಳಿಗೆ ವಿವಿಧ ದೇಶಗಳಲ್ಲಿ ಅಪಾರ ಬೇಡಿಕೆ ಇದೆ.
ಮುರಳೀಧರನ್ ಈಗಾಗಲೇ ಎರಡು ಬಾರಿ ಧಾರವಾಡಕ್ಕೆ ಬಂದು ಉದ್ದಿಮೆ ಸ್ಥಾಪನೆಯ ಸ್ಥಳ ಪರಿಶೀಲನೆ ಮಾಡಿ ಹೋಗಿದ್ದಾರೆ. ಈ ಸಂಸ್ಥೆ ಮೂರು ಹಂತಗಳಲ್ಲಿ ತನ್ನ ಉದ್ದಿಮೆಯನ್ನು ವಿಸ್ತರಿಸಲಿದ್ದು, ಆರಂಭದ ಹಂತದಲ್ಲಿ 200 ಜನರಿಗೆ ಉದ್ಯೋಗ ದೊರೆಯಲಿದೆ.

ಧಾರವಾಡ ಜಿಲ್ಲೆ ಆಯಕಟ್ಟಿನ ಸ್ಥಾನದಲ್ಲಿದ್ದು, ಪ್ರಮುಖ ನಗರಗಳಾದ ಬೆಂಗಳೂರು, ಪುಣೆ, ಮುಂಬೈ, ಹೈದರಾಬಾದ್ ಹಾಗೂ ಚೆನೈಗೆ ಉತ್ತಮ ಸಂಪರ್ಕವನ್ನು ರಸ್ತೆ, ರೈಲು, ವಿಮಾನಗಳ ಮೂಲಕ ಹೊಂದಿದೆ. ಧಾರವಾಡದ ಎಫ್ ಎಂ ಸಿಜಿ ಕ್ಲಸ್ಟರ್ ನಲ್ಲಿ ಉದ್ದಿಮೆ ಆಕರ್ಷಿಸಲು ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಪ್ರಯತ್ನಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:44 pm, Wed, 9 August 23

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us