ಗಣೇಶ ಚತುರ್ಥಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 312 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 312 ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ವಿವಿಧ ಮಾರ್ಗಗಳಿಗೆ ಬಸ್ಗಳು ಸಂಚರಿಸಲಿದ್ದು, ಹಬ್ಬದ ಬಳಿಕವೂ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆ ಬಸ್ಗಳ ಸೇವೆ ಇರಲಿದೆ.

ಮುಖ್ಯಾಂಶಗಳು
- ಗಣೇಶ ಹಬ್ಬಕ್ಕೆ 312 ವಿಶೇಷ ಬಸ್ಗಳ ವ್ಯವಸ್ಥೆ
- ಎಂಟು ವಿಭಾಗಗಳಿಂದ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ
- ಸೆಪ್ಟೆಂಬರ್ 11ರಿಂದ ವಿಶೇಷ ಬಸ್ ಸೇವೆ
ಹುಬ್ಬಳ್ಳಿ, ಸೆಪ್ಟೆಂಬರ್ 5: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) 312 ಹೆಚ್ಚುವರಿ ವಿಶೇಷ ಬಸ್ಗಳ ಕಾರ್ಯಾಚರಣೆ ನಡೆಸಲು ವ್ಯವಸ್ಥೆ ಮಾಡಿದೆ. ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಈ ಹೆಚ್ಚುವರಿ ಸಾರಿಗೆ ಬಸ್ಗಳ ಸಂಚಾರ ಇರಲಿದೆ.
ಬೆಂಗಳೂರಿನಿಂದ ವಿವಿಧ ಊರುಗಳಿಗೆ ವಿಶೇಷ ಬಸ್ಗಳು
ಸೆಪ್ಟೆಂಬರ್ 12ರಂದು ಶನಿವಾರ, ಸೆಪ್ಟೆಂಬರ್ 13ರಂದು ಭಾನುವಾರ ಹಾಗೂ ಸೆಪ್ಟೆಂಬರ್ 14ರಂದು ಗಣೇಶ ಚತುರ್ಥಿ ಇರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಪ್ರಮುಖ ಸ್ಥಳಗಳಿಂದ ಪ್ರಯಾಣಿಕರು ಸ್ವಂತ ಊರುಗಳಿಗೆ ತೆರಳಲಿದ್ದಾರೆ. ಇದಕ್ಕಾಗಿ ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳು ಹಾಗೂ ಅಂತರರಾಜ್ಯ ಮಾರ್ಗಗಳಿಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಹಬ್ಬದ ಬಳಿಕ ಸೆಪ್ಟೆಂಬರ್ 14ರಿಂದ ಪ್ರಯಾಣಿಕರ ಜನದಟ್ಟಣೆಗೆ ಅನುಗುಣವಾಗಿ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ಗಳ ಕಾರ್ಯಾಚರಣೆ ನಡೆಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ: 10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
ಪ್ರಯಾಣಿಕರು ಹೆಚ್ಚುವರಿ ವಿಶೇಷ ಸಾರಿಗೆಗಳ ಸದುಪಯೋಗ ಪಡೆದುಕೊಂಡು ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಗಳಲ್ಲಿ ಸಂಚರಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




