ವಿದ್ಯಾಕಾಶಿ ಧಾರವಾಡ- ವಾಣಿಜ್ಯ ನಗರಿ ಹುಬ್ಬಳ್ಳಿ ಅವಳಿ ನಗರದಲ್ಲಿ ಮಹಿಳೆಯರದ್ದೇ ದರ್ಬಾರ್!

ವಿದ್ಯಾಕಾಶಿ ಖ್ಯಾತಿಯ ಧಾರವಾಡ, ವಾಣಿಜ್ಯ ನಗರಿ ಖ್ಯಾತಿಯ ಹುಬ್ಬಳ್ಳಿಯಂತಹ ಅವಳಿ ನಗರಗಳನ್ನು ಹೊಂದಿರುವ ವಿಶೇಷ ಜಿಲ್ಲೆ ಧಾರವಾಡ. ಸದ್ಯ ಈ ಧಾರವಾಡ ಜಿಲ್ಲೆಯ ಆಡಳಿತ ಚುಕ್ಕಾಣಿಯನ್ನು ಬಹುತೇಕ ಮಹಿಳೆಯರೇ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಪ್ರಥಮ ಪ್ರಜೆಯಿಂದ ಹಿಡಿದು, ಇಡೀ ಜಿಲ್ಲೆಯ ಆಡಳಿತ ನಡೆಸುವ ಜಿಲ್ಲಾಧಿಕಾರಿ ಸಹಿತ ಮಹಿಳೆಯೇ ಇದ್ದಾರೆ.

ವಿದ್ಯಾಕಾಶಿ ಧಾರವಾಡ- ವಾಣಿಜ್ಯ ನಗರಿ ಹುಬ್ಬಳ್ಳಿ ಅವಳಿ ನಗರದಲ್ಲಿ ಮಹಿಳೆಯರದ್ದೇ ದರ್ಬಾರ್!
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಮಹಿಳೆಯರದ್ದೇ ದರ್ಬಾರ್!
Edited By: ಸಾಧು ಶ್ರೀನಾಥ್​

Updated on: Feb 01, 2024 | 12:21 PM

ಈಗ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳಾ ಪ್ರಾಬಲ್ಯ, ಮಹಿಳಾ ಪ್ರಾಮುಖ್ಯತೆ ಹೆಚ್ಚಾಗುತ್ತಲೇ ಹೊರಟಿದೆ. ಅದರಲ್ಲಿಯೂ ಪ್ರಮುಖ ಹುದ್ದೆಗಳನ್ನು ನಿಭಾಯಿಸುವಷ್ಟರ ಮಟ್ಟಿಗೆ ಮಹಿಳೆಯರು ಈಗ ಸಬಲ ಮತ್ತು ಸಮರ್ಥ. ಇಷ್ಟೆಲ್ಲ ಪೀಠಿಕೆ ಯಾಕಪ್ಪ ಅಂದ್ರೆ, ಇಲ್ಲೊಂದು ಕಡೆ ಇಡೀ ಜಿಲ್ಲೆಯ ಆಡಳಿತದ ಚುಕ್ಕಾಣಿ ಈಗ ಮಹಿಳಾ ಅಧಿಕಾರಿಗಳ ಕೈಗೆ ಸಿಕ್ಕಿದೆ. ಹಾಗಾದ್ರೆ ಯಾವುದು ಆ ಜಿಲ್ಲೆ ಅನ್ನೋದರ ಡಿಟೈಲ್ಸ್ ಇಲ್ಲಿದೆ ನೋಡಿ.

ವಿದ್ಯಾಕಾಶಿ ಖ್ಯಾತಿಯ ಧಾರವಾಡ, ವಾಣಿಜ್ಯ ನಗರಿ ಖ್ಯಾತಿಯ ಹುಬ್ಬಳ್ಳಿಯಂತಹ ಅವಳಿ ನಗರಗಳನ್ನು ಹೊಂದಿರುವ ವಿಶೇಷ ಜಿಲ್ಲೆ ಧಾರವಾಡ. ಸದ್ಯ ಈ ಧಾರವಾಡ ಜಿಲ್ಲೆಯ ಆಡಳಿತ ಚುಕ್ಕಾಣಿಯನ್ನು ಬಹುತೇಕ ಮಹಿಳೆಯರೇ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಪ್ರಥಮ ಪ್ರಜೆಯಿಂದ ಹಿಡಿದು, ಇಡೀ ಜಿಲ್ಲೆಯ ಆಡಳಿತ ನಡೆಸುವ ಜಿಲ್ಲಾಧಿಕಾರಿ ಸಹಿತ ಮಹಿಳೆಯೇ ಇದ್ದಾರೆ.

ಹೌದು, ಈಗ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜೆ.ಆರ್‌.ಜಿ. ಅಧಿಕಾರ ವಹಿಸಿಕೊಂಡಿದ್ದು, ಇದರ ಜೊತೆಗೆ ಧಾರವಾಡ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಜಿಲ್ಲಾಮಟ್ಟದ ಅಧಿಕಾರಿ ಸ್ಥಾನಗಳು ಮಹಿಳೆಯರ ಕೈಯಲ್ಲಿವೆ. ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಡಿಸಿ ನಂತರದಲ್ಲಿ ಬರುವ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಡಿಸಿ, ಹು-ಧಾ ಮಹಾನಗರ ಪಾಲಿಕೆಯ ಮೇಯರ್‌ ವೀಣಾ ಭರದ್ವಾಡ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಶಾಲಾ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಆಯುಕ್ತರಾಗಿ ಜಯಶ್ರೀ ಶಿಂತ್ರಿ, ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಶಶಿ ಪಾಟೀಲ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪದ್ಮಾವತಿ, ಧಾರವಾಡ ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ಹೀಗೆ. ಬಹುತೇಕ ಪ್ರಮುಖ ಹುದ್ದೆಗಳಲ್ಲಿ ಇರೋದೆಲ್ಲವೂ ಮಹಿಳಾ ಅಧಿಕಾರಿಗಳೇ. ಇದು ಜಿಲ್ಲೆಯ ಮಹಿಳೆಯರು ಹೆಮ್ಮೆ ಪಡುವಂತಹ ಸಂಗತಿಯಾಗಿದೆ.

ಜಿಲ್ಲೆಯಲ್ಲಿ ಜಿಲ್ಲಾ ಆಡಳಿತ ಸಹಿತ, ಆರೋಗ್ಯ, ಶಿಕ್ಷಣ, ಗ್ರಾಮೀಣ ಅಭಿವೃದ್ಧಿ, ಮಹಿಳೆಯರ, ದುರ್ಬಲ ವರ್ಗದವರ ಏಳಿಗೆಯೊಂದಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ, ನೌಕರರ, ಸಾರ್ವಜನಿಕರ ಸಹಕಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುವ ಪ್ರಮುಖ ಎಲ್ಲ ಹುದ್ದೆಗಳಲ್ಲಿಯೂ ಮಹಿಳೆಯರೇ ಇದ್ದಾರೆ.

ಇನ್ನು ಈಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಗಿರೋ ದೀಪಾ ಚೋಳನ್, ಈ ಹಿಂದೆ ಇದೇ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದವರು. ಅಲ್ಲದೇ ಜಿಲ್ಲೆಯ ಈ ಹಿಂದಿನ ಇತಿಹಾಸವನ್ನು ನೋಡಿದಾಗ, ಬಹುತೇಕ ಮಹಿಳಾ ಅಧಿಕಾರಿಗಳು ಪ್ರಮುಖ ಸ್ಥಾನಗಳಲ್ಲಿ ಇದ್ದ ಸಮಯದಲ್ಲಿಯೇ ಧಾರವಾಡ ಮಹತ್ವದ ಕೆಲಸಗಳ ಮೂಲಕ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಹ ಈಗ ನಮ್ಮೊಂದಿಗೆ ಮಹಿಳಾ ಶಕ್ತಿ ಇರೋದು ನಮಗೆ ಮತ್ತಷ್ಟು ಬಲ ಬಂದಂತಾಗಿದೆ ಅಂತಾ ಹರ್ಷ ವ್ಯಕ್ತಪಡಿಸಿದ್ದಾರೆ.

ಮಹಿಳೆ ಇವತ್ತು ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಮುಖ ಸ್ಥಾನ ವಹಿಸ್ತಾ ಇದ್ದು, ಅದರಲ್ಲಿಯೂ ನಾರಿ ಶಕ್ತಿ ಒಂದಾದರೇ ಒಂದೀಡಿ ಜಿಲ್ಲೆಯನ್ನೇ ಆಳಬಹುದು ಅನ್ನೋದು ಈಗ ಧಾರವಾಡ ಜಿಲ್ಲೆಯಲ್ಲಿ ಸಾಬೀತಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us