ಪ್ರತ್ಯಕ ಪಾಲಿಕೆ ಹೋರಾಟಕ್ಕೆ ತೆರೆ: ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದು
ಹುಬ್ಬಳ್ಳಿ-ಧಾರವಾಡ ಪ್ರತ್ಯಕ ಪಾಲಿಕೆ ಕಡಿತಕ್ಕೆ ರಾಜ್ಯಪಾಲರು ಸಹಿ ಬೆನ್ನಲ್ಲೇ ಇದೀಗ ಈ ಹಿಂದಿನ ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದಾಗಿದೆ. ಆ ಮೂಲಕ ಕೆಲ ದಿನಗಳಿಂದ ನಡೆದಿದ್ದ ಹೋರಾಟ, ಪ್ರತಿಭಟನೆಗಳಿಗೆ ತೆರೆ ಬಿದ್ದಿದೆ. ಈ ಬಗ್ಗೆ ಪಾಲಿಕೆ ಮೇಯರ್ ಜೋತಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಹುಬ್ಬಳ್ಳಿ, ಮೇ 29: ರಾಜ್ಯದಲ್ಲೇ ಎರಡನೇ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಡೆದಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ವಿಭಜನೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಇತ್ತೀಚೆಗೆ ಪಾಲಿಕೆ ವಿಭಜನೆಗೆ ಷರತ್ತುಬದ್ಧ ಅನುಮೋದನೆ ಕೂಡ ದೊರೆತಿತ್ತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪ್ರತ್ಯಕ ಪಾಲಿಕೆ ಕಡಿತಕ್ಕೆ ಸಹಿ ಬೆನ್ನಲ್ಲೇ ಬೃಹತ್ ಮಹಾನಗರ ಪಾಲಿಕೆಯ ಠರಾವು ಅಸಿಂಧುಗೊಂಡಿದೆ. ಹೀಗಾಗಿ ಈ ಹಿಂದೆ ಕೈಗೊಳ್ಳಲಾಗಿದ್ದ ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆಯ ಠರಾವು ರದ್ದಾಗಿದೆ.
ಮುಖ್ಯಾಂಶಗಳು
- ಬೃಹತ್ ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವು ರದ್ದು
- ಪ್ರತ್ಯಕ ಪಾಲಿಕೆ ಹೋರಾಟಕ್ಕೆ ತೆರೆ
- ಪ್ರತ್ಯಕ ಧಾರವಾಡ ಪಾಲಿಕೆಗೆ ಎಲ್ಲರಿಗೂ ಸಮ್ಮತಿ ಎಂದ ಮೇಯರ್
ಪಾಲಿಕೆ ಮೇಯರ್ ಜೋತಿ ಪಾಟೀಲ್ ಹೇಳಿದ್ದಿಷ್ಟು
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪಾಲಿಕೆ ಮೇಯರ್ ಜೋತಿ ಪಾಟೀಲ್, ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮಾಡಲು ಕೈಗೊಳ್ಳಲಾಗಿದ್ದ ಠರಾವು ಅಧಿಕೃತವಾಗಿ ರದ್ದಾಗಲಿದ್ದು, ಅವಳಿ ನಗರಗಳ ಪಾಲಿಕೆ ವಿಭಜನೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ತಿಳಿಸಿದರು.
ಬೃಹತ್ ಪಾಲಿಕೆ ನಿರ್ಧಾರಕ್ಕೆ ಕಾರಣವೇನು?
ನಾವು ಈ ಹಿಂದೆ ಪಾಲಿಕೆ ಅಭಿವೃದ್ಧಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಕೋರಿದ್ದೆವು. ಆದರೆ ಸರ್ಕಾರದಿಂದ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಬಿಡುಗಡೆಯಾಗಿರಲಿಲ್ಲ. 16ನೇ ಹಣಕಾಸು ಆಯೋಗದ ನಿಯಮಾವಳಿಗಳ ಪ್ರಕಾರ, 10 ಲಕ್ಷಕ್ಕಿಂತ ಅಧಿಕ ಜನಸಂಖ್ಯೆ ಹೊಂದಿರುವ ನಗರಗಳಿಗೆ ಹೆಚ್ಚಿನ ಅನುದಾನ ದೊರೆಯುತ್ತದೆ. ಈ ತಾಂತ್ರಿಕ ಕಾರಣದಿಂದಾಗಿ ಹುಬ್ಬಳ್ಳಿ-ಧಾರವಾಡವನ್ನು ಒಳಗೊಂಡ ಬೃಹತ್ ಮಹಾನಗರ ಪಾಲಿಕೆ ಮಾಡಲು ಈ ಹಿಂದೆ ನಿರ್ಧಾರ ಕೈಗೊಳ್ಳಲಾಗಿತ್ತು ಎಂದರು.
ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಷರತ್ತುಬದ್ಧ ಅನುಮೋದನೆ
ಇನ್ನು ಈ ವೇಳೆ ಧಾರವಾಡವನ್ನು ಪ್ರತ್ಯೇಕ ಪಾಲಿಕೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ವ್ಯಾಪಕ ಹೋರಾಟಗಳು ನಡೆದಿದ್ದವು. ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದ್ದು, ಪ್ರತ್ಯೇಕ ಪಾಲಿಕೆ ರಚನೆಯ ಕಡತಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ರಾಜ್ಯಪಾಲರ ಈ ನಿರ್ಧಾರದಿಂದಾಗಿ, ಈ ಹಿಂದೆ ಕೈಗೊಳ್ಳಲಾಗಿದ್ದ ಬೃಹತ್ ಮಹಾನಗರ ಪಾಲಿಕೆ ರಚನೆಯ ಠರಾವು ಇದೀಗ ತಾನಾಗಿಯೇ ಅಸಿಂಧುವಾಗುತ್ತದೆ. ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ನಿರ್ಧಾರಕ್ಕೆ ಎಲ್ಲರೂ ಸಮ್ಮತಿ ನೀಡಿದ್ದಾರೆ ಎಂದು ತಿಳಿಸಿದರು.
ಸರ್ಕಾರಕ್ಕೆ ಅನುದಾನದ ಬೇಡಿಕೆ
ಹುಬ್ಬಳ್ಳಿ ಮತ್ತು ಧಾರವಾಡ ಪಾಲಿಕೆಗಳ ವಿಭಜನೆಯ ಪ್ರಕ್ರಿಯೆ ಪೂರ್ಣಗೊಂಡ ನಂತರ, ಸರ್ಕಾರವು ಎರಡೂ ಪಾಲಿಕೆಗಳಿಗೆ ಪ್ರತ್ಯೇಕವಾಗಿ ಹೆಚ್ಚಿನ ಅಭಿವೃದ್ಧಿ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮೇಯರ್ ಜ್ಯೋತಿ ಪಾಟೀಲ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




