ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು, ಗರ್ಭಿಣಿ ಸಾವು: ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 8 ತಿಂಗಳ ಗರ್ಭಿಣಿ ರಾಧಿಕಾ (19) ಸಾವನ್ನಪ್ಪಿದ್ದಾರೆ. ಸಕಾಲಿಕ ಚಿಕಿತ್ಸೆ ದೊರೆಯದಿರುವುದು ಸಾವಿಗೆ ಕಾರಣ ಎನ್ನಲಾಗಿದೆ. ಈ ದುರ್ಘಟನೆಯಿಂದ ತೀವ್ರ ಮನನೊಂದ ಪತಿ ಮಲ್ಲೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು, ಗರ್ಭಿಣಿ ಸಾವು: ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಯತ್ನ
ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು, ಗರ್ಭಿಣಿ ಸಾವು: ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಯತ್ನ
Edited By:

Updated on: Dec 31, 2024 | 3:56 PM

ಹುಬ್ಬಳ್ಳಿ, ಡಿಸೆಂಬರ್​ 31: ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಚಿಕಿತ್ಸೆ ಫಲಿಸದೆ ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವು (death) ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಪತ್ನಿ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ. ಮಲ್ಲೇಶ್​(25) ಆತ್ಮಹತ್ಯೆಗೆ ಯತ್ನಿಸಿದ ರಾಧಿಕಾ ಪತಿ. ಸದ್ಯ ಮಲ್ಲೇಶ್​ಗೆ ಕಿಮ್ಸ್​ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ 2 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬೆಳಗಾವಿ ಮೂಲದ ರಾಧಿಕಾ ಗಡ್ಡಿಹೊಳಿ ಸಾವಿನ ಮನೆ ಸೇರಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ರಾಧಿಕಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ ಮಗು ಸಾವು: ಸಾವು ಬದುಕಿನ ನಡುವೆ ಗರ್ಭಿಣಿ ಹೋರಾಟ

ಇಷ್ಟಕ್ಕೂ ರಾಧಿಕಾ ವಯಸ್ಸು ಕೇವಲ 19 ವರ್ಷ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲಮಟ್ಟಿ ಗ್ರಾಮದವರು. ಎಂಟೂವರೆ ತಿಂಗಳ ಗರ್ಭಿಣಿ ಆಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಮೊನ್ನೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಫಿಟ್ಸ್ ಬಂದು ಸೀರಿಯಸ್ ಆಗಿದ್ದರು. 2 ಆಸ್ಪತ್ರೆಗೆ ಅಲೆದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿರಲಿಲ್ಲ. ಕೊನೆಗೆ ಬೆಳಗಾವಿಯ ಬಿಮ್ಸ್​ಗೆ ಕರೆದುಕೊಂಡು ಬರುವಷ್ಟರಲ್ಲಿ ಶಿಶು ಗರ್ಭಿಣಿಯ ಹೊಟ್ಟೆಯಲ್ಲೇ ಮೃತಪಟ್ಟಿತ್ತು. ರಾಧಿಕಾ ಸ್ಥಿತಿಯೂ ಗಂಭೀರವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಬಿಮ್ಸ್ ಆಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ರಾಧಿಕಾ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಿಮ್ಸ್​ ಆಸ್ಪತ್ರೆ ನಿರ್ದೇಶಕ ಎಸ್​​ಎಫ್​ ಕಮ್ಮಾರ ಹೇಳಿದ್ದಿಷ್ಟು 

ಹುಬ್ಬಳ್ಳಿಯಲ್ಲಿ ಕಿಮ್ಸ್​ ಆಸ್ಪತ್ರೆ ನಿರ್ದೇಶಕ ಎಸ್​​ಎಫ್​ ಕಮ್ಮಾರ ಪ್ರತಿಕ್ರಿಯಿಸಿದ್ದು, ಬೆಳಗಾವಿಯಿಂದ ಕಿಮ್ಸ್ ಆಸ್ಪತ್ರೆ ಬಂದಾಗ ಗರ್ಭಿಣಿ ರಾಧಿಕಾ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಿಪಿ, ನಾಡಿಮಿಡಿತ ಇರಲಿಲ್ಲ, ರಾಧಿಕಾ ಅವರಿಗೆ ಪ್ರಜ್ಞೆಯೇ ಇರಲಿಲ್ಲ. ಹೊಟ್ಟೆಯಲ್ಲಿ ಮಗುಯಿತ್ತು. ಗರ್ಭಪಾತ ಆಗಿರಲಿಲ್ಲ. ಆದರೆ ನಮ್ಮ ವೈದ್ಯರು ಸಕಾಲದಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಬಾಣಂತಿ ಪೂಜಾ ಸಾವಿಗೆ ಕಾರಣ ಕೊಟ್ಟ ರಾಜ್ಯ ಆರೋಗ್ಯ ಇಲಾಖೆ

ಸತ್ತ ಮಗು ರಾಧಿಕಾ ಹೊಟ್ಟೆಯಲ್ಲೇ ಇತ್ತು. ಅವರಿಗೆ ಪ್ರಜ್ಞೆ ಬಂದಾಗ ಗರ್ಭದಿಂದ ಮಗು ಹೊರ ತೆಗೆಯುವ ಆಲೋಚನೆ ಇತ್ತು. ಆದರೆ ಅವರ ಆರೋಗ್ಯ ಚೇತರಿಕೆ ಆಗಲೇ ಇಲ್ಲ. ಇಂದು ಬೆಳಗ್ಗೆ 11 ಗಂಟೆ ರಾಧಿಕಾ ಸಾವನ್ನಪ್ಪಿದ್ದಾರೆ. ಇದರಿಂದ ಮನನೊಂದು ಆಕೆ ಪತಿ ಮಲ್ಲೇಶಿ ಆತ್ಮಹತ್ಯೆ ಪ್ರಯತ್ನ ಮಾಡಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us