ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: 6 ಮಂದಿ ಅಯ್ಯಪ್ಪ ಮಾಲಾಧಾರಿಗಳ ಸಾವು

ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದು, ಆರು ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಸ್ಫೋಟದಿಂದಾಗಿ ಅವರ ದೇಹದ ಶೇಕಡಾ 70 ರಿಂದ 99 ರಷ್ಟು ಸುಟ್ಟುಹೋಗಿದೆ. ಬಾಲಕನೊಬ್ಬ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ.

ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: 6 ಮಂದಿ ಅಯ್ಯಪ್ಪ ಮಾಲಾಧಾರಿಗಳ ಸಾವು
ಮೃತ ಅಯ್ಯಪ್ಪ ಮಾಲಾಧಾರಿಗಳು
Edited By: ವಿವೇಕ ಬಿರಾದಾರ

Updated on: Dec 29, 2024 | 12:57 PM

ಹುಬ್ಬಳ್ಳಿ, ಡಿಸೆಂಬರ್​ 29: ಹುಬ್ಬಳ್ಳಿಯ (Hubballi) ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡರ್​ ಸ್ಫೋಟದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು (Ayyappa Maladhari) ಗಾಯಗೊಂಡು ಕಿಮ್ಸ್ (Kims)​ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 6 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29) ಮತ್ತು ಮಂಜು ವಾಗ್ಮೋಡೆ (22) ಮೃತ ದುರ್ದೈವಿಗಳು. ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.

ಮೃತರಾದ ನಿಜಲಿಂಗಪ್ಪ ಬೇಪುರಿಯ ದೇಹ ಶೇ.86 ರಷ್ಟು, ಸಂಜಯ್ ಸವದತ್ತಿಯ ದೇಹ ಶೇ.80 ರಷ್ಟು, ರಾಜು ಮೂಗೇರಿಯ ದೇಹ ಶೇ.74 ರಷ್ಟು, ಲಿಂಗಾರಾಜು ಬೀರನೂರ ದೇಹ ಶೇ.86 ರಷ್ಟು, ಶಂಕರ್ ಚವ್ಹಾಣ್ ದೇಹ ಶೇ.99 ರಷ್ಟು ಮತ್ತು ಮಂಜು ವಾಗ್ಮೋಡೆ ದೇಹ ಶೇ.70 ರಷ್ಟು ಸುಟ್ಟಿತ್ತು. ಇನ್ನೂ ಚಿಂತಾಜನಕ ಸ್ಥಿತಿಯಲ್ಲಿರುವ ಪ್ರಕಾಶ್ ಬಾರಕೇರ್​ ದೇಹ ಶೇ91 ರಷ್ಟು, ತೇಜಸ್ವರ್ ಸಾತರೆಯ ದೇಹ ಶೇ74 ರಷ್ಟು ಸುಟ್ಟಿದೆ. ವಿನಾಯಕ್ ಭಾರಕೇರ್ ದೇಹ ಶೇ25 ರಷ್ಟು ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್​ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ‌ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಇವರಲ್ಲಿ 6 ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಸಿಲಿಂಡರ್ ಸ್ಪೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

ಚಿಕಿತ್ಸೆ ಫಲಿಸದೆ ಗುರುವಾರ ರಂದು ನಿಜಲಿಂಗಪ್ಪ ಬೇಪುರಿ, ಸಂಜಯ್​​ ಸವದತ್ತಿ ಮೃತಪಟ್ಟಿದ್ದರು. ಶುಕ್ರವಾರ (ಡಿ.27) ರಂದು ರಾಜು ಮೂಗೇರಿ ಮತ್ತು ಲಿಂಗರಾಜ ಬೀರನೂರ ಸಾವಿಗೀಡಾಗಿದ್ದರು. ರವಿವಾರ (ಡಿ.29) ಶಂಕರ್ ಚವ್ಹಾಣ್ ಮತ್ತು ಮಂಜು ವಾಗ್ಮೋಡೆ ಮೃತಪಟ್ಟಿದ್ದಾರೆ. ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದಲ್ಲದೇ, ಕಿಮ್ಸ್ ವೈದ್ಯರು ರಾಜ್ಯ ಮತ್ತು ದೇಶದ ವಿವಿಧ ಭಾಗದ ತಜ್ಞ ವೈದ್ಯರಿಂದ ಮಾಹಿತಿ ಪಡೆದುಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಮಾಲಾಧಾರಿಗಳಿಗೆ ಶೇ70 ಕ್ಕಿಂತ ಹೆಚ್ಚು ಸುಟ್ಟ ಗಾಯವಾದ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ.

9 ಜನ ಮೂಲಾಧಾರಿಗಳ ಪೈಕಿ 12 ವರ್ಷದ ವಿನಾಯಕ್ ಬಾರಕೇರ ಮಾತ್ರ ಚಿಕಿತ್ಸೆಗೆ ಸ್ಪಂದಿಸಿದ್ದಾನೆ. ಹೀಗಾಗಿ, ಬಾಲಕನನ್ನು ಐಸೋಲೇಶನ್ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:55 pm, Sun, 29 December 24

ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us