ಧಾರವಾಡ, ಏಪ್ರಿಲ್ 22: ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ (Hubli-Dharwad Lok Sabha Constituency) ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ (Dingaleshwar Swamiji) ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ದಿಂಗಾಲೇಶ್ವರ ಶ್ರೀಗಳು ನಾಪಮಪತ್ರವನ್ನು ಹಿಂಪಡೆದಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್ ಪಾಟೀಲ್ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ತರೆಸಿದ್ದಾರೆ.
ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸಮರ ಸಾರಿದ್ದು, ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದರು. ಇದಕ್ಕೆ ಬಿಜೆಪಿ ಸೊಪ್ಪು ಹಾಕಲಿಲ್ಲ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದರು. ಇವರ ಸ್ಪರ್ಧೆಗೆ ವೀರಶೈವ ಮಹಾಸಭಾ ಬೆಂಬಲ ವ್ಯಕ್ತಪಡಿಸಿತ್ತು. ಆದರೆ ಉತ್ತರ ಕರ್ನಾಟಕ ಪ್ರಮುಖ ಮಠಗಳಲ್ಲಿ ಒಂದಾದ ಧಾರವಾಡದ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತ್ರ ದಿಂಗಾಲೇಶ್ವರ ಸ್ವಾಮೀಜಿ ಅವರ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದರು.
ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿದ್ದರು. ನಾನು ಸ್ವಂತವಾಗಿ ಮಾತನಾಡುತ್ತಿಲ್ಲ, ಪ್ರಲ್ಹಾದ್ ಜೋಶಿಯವರ ಕೈಯಲ್ಲಿ ನೋವು ಅನುಭವಿಸಿದ ಜನರ ಧ್ವನಿಗಾಗಿ ನಾನು ಹೋರಾಟ ನಡೆಸುತ್ತಿದ್ದೆನೆ. ಅವರ ಆಡಳಿತ ವಿನಾಶಕಾರಿಯಾಗಿದೆ. ಮತ್ತು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯಕ್ಕೆ ಮತ್ತು ಲಿಂಗಾಯತ ಸಮುದಾಯದ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಅನ್ಯಾಯುತವಾಗಿ ನಡೆಸಿಕೊಳ್ಳಲಾಗಿದೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸಿದ್ದರು.
ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದೆ. ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಿಸಲಾಗಿದೆ. ಬಿಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಅರ್ಧಕ್ಕೆ ಕೆಳಗೆ ಇಳಿಸಲಾಗಿದೆ. ಇದು ಲಿಂಗಾಯತ ಸಮುದಾಯದವರಿಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದ್ದರು. ಈ ಎಲ್ಲ ಕಾರಣಗಳಿಂದ ಶಿರಹಟ್ಟಿಯ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇದನ್ನೂ ಓದಿ: ಧಾರವಾಡದಲ್ಲಿ ಸ್ಪರ್ಧಿಸಲು ಸ್ವಾಮೀಜಿಗೆ ಪೇಮೆಂಟ್ ಆಗಿದೆ: ಶಾಸಕ ಯತ್ನಾಳ್ ಆರೋಪ
ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸಲ್ಲಿಸಿರುವ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರಿಗೆ ಬೆಂಬಲಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಂಗಾಲೇಶ್ವರ ಸ್ವಾಮೀಜಿಗೆ ಮನವಿ ಮಾಡಿದ್ದಾರೆ. ಡಿಕೆ ಶಿವಕುಮಾರ್ ಅವರು ದಿಂಗಾಲೇಶ್ವರ ಶ್ರೀಗೆ ಕರೆ ಮಾಡಿ ಮಾತನಾಡಿದ್ದು, ನಿಮ್ಮ ನಿರ್ಧಾರ ನಮಗೆ ಮೊದಲೇ ಗೊತ್ತಿದ್ದರೆ ನಮ್ಮ ಪಕ್ಷದಿಂದಲೇ ಅವಕಾಶ ಮಾಡಲು ಸುಲಭವಾಗುತ್ತಿತ್ತು. ಇದೀಗ ಪಕ್ಷ ದಿಂದ ವಿನೋದ್ ಅಸೂಟಿ ಅವರಿಗೆ ಟಿಕೆಟ್ ನೀಡಿದ್ದೇವೆ. ಕಾಂಗ್ರೆಸ್ ಹಾಗೂ ನಿಮ್ಮ ನಡುವೆ ಮತ ವಿಭಜನೆಯಾದರೆ ಜೋಶಿ ಗೆಲುವು ಸುಲಭವಾಗಲಿದೆ. ಹೀಗಾಗಿ ನಾವು ಇಬ್ಬರೂ ಸೇರಿ ಅವರ ವಿರುದ್ದ ಹೋರಾಡಬೇಕು ಎಂದಿದ್ದಾರೆ.
ಡಿಕೆ ಶಿವಕುಮಾರ್ ಮಾತ್ರವಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕರೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರ ವಾಪಸ್ ಪಡೆಯುವ ಮೂಲಕ ಕಾಂಗ್ರೆಸ್ನ ತಂತ್ರ ಸಫಲಾವಾಗಿದ್ದು, ಚದುರುತ್ತಿದ್ದ ಮತಗಳು ಒಂದಡೆಯಾಗಲಿವೆ ಎಂಬುವುದು ಕಾಂಗ್ರೆಸ್ನ ಚಿಂತನೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:55 pm, Mon, 22 April 24