ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ, ಖಂಡನೆ: ಡಿಸಿ ಕಚೇರಿ ಎದುರು ಹೋಮ ನಡೆಸಲು ಬಿಜೆಪಿ ಸಜ್ಜು

ಇತ್ತೀಚಿಗೆ ಹುಬ್ಬಳ್ಳಿಯ ವಿಶಾಲ ನಗರದಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಕುರಾನ್ ಪಠಣ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಆ ವಿಚಾರ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ. ಕುರಾನ್ ಪಠಿಸಿದ ಜಾಗದಲ್ಲಿ ಹೋಮ ಮಾಡಲು ಬಿಜೆಪಿ ಸಜ್ಜಾಗಿದ್ದು, ವಿವಾದ ತೀವ್ರಗೊಳ್ಳುವ ಲಕ್ಷಣ ಕಾಣಿಸಿದೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ, ಖಂಡನೆ: ಡಿಸಿ ಕಚೇರಿ ಎದುರು ಹೋಮ ನಡೆಸಲು ಬಿಜೆಪಿ ಸಜ್ಜು
ಅಕ್ಟೋಬರ್ 5 ರಂದು ಹುಬ್ಬಳ್ಳಿಯ ವಿಶಾಲ ನಗರದಲ್ಲಿ ನಡೆದಿದ್ದ ಕಾರ್ಯಕ್ರಮದ ಫೋಟೊ
Edited By:

Updated on: Oct 10, 2025 | 7:06 AM

ಧಾರವಾಡ, ಅಕ್ಟೋಬರ್ 10: ಅಕ್ಟೋಬರ್ 5 ರಂದು ಹುಬ್ಬಳ್ಳಿಯ ವಿಶಾಲ ನಗರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಮೌಲ್ವಿಯೊಬ್ಬರು ಕುರಾನ್ ಪಠಣ ಮಾಡಿದ್ದರು. ಇದು ಸರಕಾರಿ ಕಾರ್ಯಕ್ರಮವಾಗಿರುವುದರಿಂದ ಇಲ್ಲಿ ಕುರಾನ್ ಪಠಣ ಮಾಡುವುದು ಸರಿಯಾ ಎಂಬ ಪ್ರಶ್ನೆಯನ್ನು ಬಿಜೆಪಿ ಎತ್ತಿತ್ತು. ಆದರೆ ಅದು ಸರಕಾರಿ ಕಾರ್ಯಕ್ರಮ ಅಲ್ಲ ಎಂದು ಕಾಂಗ್ರೆಸ್ ಮುಖಂಡರು ಪದೇ ಪದೇ ಸ್ಪಷ್ಟನೆ ನೀಡಿದ್ದರು. ಆದರೆ ಬಿಜೆಪಿ ಮಾತ್ರ ತನ್ನ ವಾದದಿಂದ ಹಿಂದೆ ಸರಿದಿರಲಿಲ್ಲ. ಅದರ ಮುಂದುವರೆದ ಭಾಗ ಇದೀಗ ಶುರುವಾಗಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣದ ವಿರುದ್ಧ ಸಿಡಿದೆದ್ದಿರೋ ಬಿಜೆಪಿ ನಾಯಕರು ಧಾರವಾಡದ (Dharawad) ಡಿಸಿ ಕಚೇರಿ ಎದುರು ವಿಭಿನ್ನವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಸರಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಿಸಿದ್ದರಿಂದ ನಾವು ಕೂಡ ಡಿಸಿ ಕಚೇರಿ ಎದುರಲ್ಲಿಯೇ ಹೋಮ ಮಾಡಿ, ಎಲ್ಲವನ್ನು ಶುದ್ಧಗೊಳಿಸುವುದಾಗಿ ಹೇಳಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಹೋಮ ಮಾಡಲು ಬಿಜೆಪಿ ನಿರ್ಧರಿಸಿದ್ದು, ಕಾರ್ಯಕ್ರಮದ ನೇತೃತ್ವವನ್ನು ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ವಹಿಸಿದ್ದಾರೆ.

ಕುರಾನ್ ಪಠಣ ವಿಚಾರವಾಗಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವುದಾಗಿ ಹೇಳಿರುವ ಬೆಲ್ಲದ್​, ಹೆಸ್ಕಾಂ ಕಾಮಗಾರಿ ನಿರ್ಮಾಣ ಗುದ್ದಲಿ ಪೂಜೆ ಕಾರ್ಯಕ್ರಮ ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಕುರಾನ್ ಪಠಣ

ಮಾಡಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ, ವಾರ್ಡ್ ನಂಬರ್ 34 ರ ಪಾಲಿಕೆ ಸದಸ್ಯೆ ಮಂಗಳಾ ಗೌರಿ ಹಾಗೂ ಪುತ್ರ ನಾಗರಾಜ್ ಗೌರಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಇದಾಗಿದ್ದು, ಇದು ಸರ್ಕಾರಿ ಕಾರ್ಯಕ್ರಮ ಆಗಿರಲಿಲ್ಲ ಎಂದು ವಾದಿಸುತ್ತಿದ್ದಾರೆ. ಆರೋಪವನ್ನು ಅಲ್ಲಗಳೆಯುತ್ತಿರುವ ಕಾಂಗ್ರೆಸ್ ಮುಖಂಡರು, ಕುರಾನ್ ಪಠಣ ಮಾಡಿದ್ದು ಅಭಿನಂದನಾ ಸಮಾರಂಭದಲ್ಲಿ ಎಂದು ವಾದಿಸುತ್ತಿದ್ದಾರೆ. ಅದು ನಾವು ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮ. ಸರ್ಕಾರಿ ಕಾರ್ಯಕ್ರಮ ಕೇವಲ ಗುದ್ದಲಿ ಪೂಜೆಗೆ ಮಾತ್ರ ಸೀಮಿತವಾಗಿತ್ತು ಎಂಬುದು ಅವರ ವಾದವಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಗುತ್ತಿಗೆದಾರನ ಕಿಡ್ನ್ಯಾಪ್​: ಸಿಸಿ ಕ್ಯಾಮರಾದಲ್ಲಿ ಘಟನೆ ಸೆರೆ

ಒಟ್ಟಿನಲ್ಲಿ ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಇಂದು ನಡೆಯಲಿರುವ ಹೋರಾಟದಲ್ಲಿ ಏನೆಲ್ಲಾ ಆಗುತ್ತದೆ ಎಂಬ ಪ್ರಶ್ನೆ ಮೂಡಿಸಿದೆ. ಈ ಪ್ರಕರಣ ಮುಂದೇನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us