DK Shivakumar Oath Taking Date: ಡಿಕೆ ಶಿವಕುಮಾರ್ ಪ್ರಮಾಣವಚನ ಯಾವಾಗ, ಎಲ್ಲಿ? ಇಂದೇ ಫೈನಲ್ ಆಗಲಿದೆ ದಿನಾಂಕ

ಡಿಕೆ ಶಿವಕುಮಾರ್​ ಮುಖ್ಯಮಂತ್ರಿಯಾಗಿ ಪದಗ್ರಹಣ ಯಾವಾಗ: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಪ್ರಹಸನಕ್ಕೆ ಕೊನೆಗೂ ತೆರೆ ಬೀಳುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಇದರೊಂದಿಗೆ ಹೊಸ ಮುಖ್ಯಮಂತ್ರಿಯ ಹಾಗೂ ಸಂಪುಟದ ಪ್ರಮಾಣವಚನಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಸಂಬಂಧಿತ ವಿವರ ಇಲ್ಲಿದೆ.

DK Shivakumar Oath Taking Date: ಡಿಕೆ ಶಿವಕುಮಾರ್ ಪ್ರಮಾಣವಚನ ಯಾವಾಗ, ಎಲ್ಲಿ? ಇಂದೇ ಫೈನಲ್ ಆಗಲಿದೆ ದಿನಾಂಕ
ಡಿಕೆ ಶಿವಕುಮಾರ್
Image Credit source: tv9

Updated on: May 29, 2026 | 9:59 AM

ಬೆಂಗಳೂರು, ಮೇ 29: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ಬೆಳಗ್ಗೆ ಅಂಗೀಕರಿಸಿದ್ದಾರೆ. ಇದರೊಂದಿಗೆ ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಹುತೇಕ ಕೊನೆಯ ಹಂತಕ್ಕೆ ಬಂದಂತಾಗಿದೆ. ನೂತನ ಮುಖ್ಯಮಂತ್ರಿ ಯಾರು ಎಂಬುದನ್ನು ಪಕ್ಷವು ಅಧಿಕೃತವಾಗಿ ಘೋಷಣೆ ಮಾಡದಿದ್ದರೂ ಗುರುವಾರದ ಉಪಹಾರ ಸಭೆಯಲ್ಲಿ, ಡಿಕೆ ಶಿವಕುಮಾರ್ (DK Shivakumar) ಮುಂದಿನ ಸಿಎಂ ಆಗಲಿದ್ದಾರೆ ಎಂಬುದಾಗಿ ಸಿದ್ದರಾಮಯ್ಯ ಸಚಿವರಿಗೆ ತಿಳಿಸಿದ್ದಾರೆ ಎಂಬ ಮಾಹಿತಿ ಇದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಸದ್ಯ ದೆಹಲಿಯಲ್ಲಿದ್ದು, ನೂತನ ಮುಖ್ಯಮಂತ್ರಿಯ ಪ್ರಮಾಣವಚನ, ಸಂಪುಟ ರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಿದ್ದಾರೆ.

ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಯಾವಾಗ?

ಹೊಸ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಮತ್ತು ನೂತನ ಸಚಿವ ಸಂಪುಟದ ಪ್ರಮಾಣವಚನ ಯಾವಾಗ ಎಂಬುದು ಅಧಿಕೃತವಾಗಿ ಇನ್ನೂ ಘೋಷಣೆಯಾಗಿಲ್ಲ. ಆದಾಗ್ಯೂ, ಪ್ರತಿಜ್ಞಾವಿಧಿ ಸ್ವೀಕಾರಕ್ಕೆ ಡಿಕೆ ಶಿವಕುಮಾರ್ ಉತ್ತಮ ಮೂರ್ತದ ಹುಡುಕಾಟದಲ್ಲಿದ್ದಾರೆ ಎಂಬುದು ತಿಳಿದು ಬಂದಿದೆ. ಅವರು ಈಗಾಗಲೇ ಜ್ಯೋತಿಷಿ ದ್ವಾರಕಾನಾಥ್ ಜೊತೆ ಮಾತನಾಡಿ ಮಹೂರ್ತದ ಬಗ್ಗೆ ಚರ್ಚಿಸಿದ್ದಾರೆ. ಮೂರು ಮೂಹೂರ್ತಗಳನ್ನು ಸೂಚಿಸುವಂತೆ ಮನವಿ ಮಾಡಿದ್ದಾರೆ. ಎಐಸಿಸಿಯ ಪ್ರಮುಖ ನಾಯಕರು, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಲಭ್ಯತೆ ನೋಡಿಕೊಂಡು ಪ್ರಮಾಣವಚನಕ್ಕೆ ದಿನಾಂಕ ನಿಗದಿಯಾಗಲಿದೆ.

ಜ್ಯೋತಿಷಿ ದ್ವಾರಕಾನಾಥ್ ಜತೆ ಡಿಕೆಶಿ ಮಾತುಕತೆ
DK Shivakumar Speaks With Astrologer To Suggest Date For Oath Taking Ceremony

ಮತ್ತೊಂದೆಡೆ, ಸೋಮವಾರವೇ ಸಂಜೆ ಗೋಧೂಳಿ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ಪ್ರತಿಜ್ಞಾವಿಧಿ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಡಿಕೆ ಶಿವಕುಮಾರ್ ಪ್ರಮಾಣ ವಚನ ಎಲ್ಲಿ?

ದೆಹಲಿಯಲ್ಲಿ ಹೈಕಮಾಂಡ್ ಜೊತೆ ನಡೆಯುವ ಸಭೆಯಲ್ಲಿ ನೂತನ ಸಂಪುಟ ಹಾಗೂ ಸಚಿವರ ವಿವರ ಅಂತಿಮಗೊಂಡ ಬಳಿಕ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆ ಇದೆ. ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ ಎಲ್ಲಿ ನಡೆಯಲಿದೆ ಎಂಬುದನ್ನು ಪಕ್ಷ ಇನ್ನಷ್ಟೇ ಘೋಷಿಸಬೇಕಿದೆ.

ಪ್ರಮಾಣವಚನ ಸ್ವೀಕಾರಕ್ಕೆ ಅತಿಥಿಗಳು ಯಾರೆಲ್ಲ?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಹಾಗೂ ಕಾಂಗ್ರೆಸ್ನ ಪ್ರಮುಖ ರಾಜ್ಯ ನಾಯಕರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ: ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್

ಒಟ್ಟಿನಲ್ಲಿ, ದೆಹಲಿಯಲ್ಲಿ ಇಂದು ನಡೆಯಲಿರುವ ಉನ್ನತ ಮಟ್ಟದ ಸಭೆಯ ಬಳಿಕ ಈ ಎಲ್ಲ ವಿಚಾರಗಳು ಅಂತಿಮಗೊಳ್ಳಲಿವೆ ಎಂದು ನಿರೀಕ್ಷಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Fri, 29 May 26

Follow Us