
ಬೆಂಗಳೂರು: ಕೊರೊನಾ ಭೀತಿ ನಡುವೆಯೇ ವೈದ್ಯರು ಮಾನವೀಯತೆ ಮರೆತ ಘಟನೆ ನಡೆದಿದೆ. ರೋಗಿ ತೀವ್ರ ಜ್ವರದಿಂದ ಬಳಲುತ್ತಿದ್ದರೂ ಚಿಕಿತ್ಸೆ ನೀಡದೆ ಸರ್ಕಾರಿ ಆಸ್ಪತ್ರೆಗಳ ವೈದ್ಯ ಸಿಬ್ಬಂದಿ ಮಾನವೀಯತೆ ಮರೆತು ವರ್ತಿಸಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿ ಬೆಳಗ್ಗೆ ಲಗ್ಗೆರೆಯಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ನಂತರ ಆ್ಯಂಬುಲೆನ್ಸ್ ಮೂಲಕ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲೂ ಕೂಡ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಹೋಗುವಂತೆ ಸಿಬ್ಬಂದಿ ತಿಳಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡದೆ ಬೌರಿಂಗ್ ಆಸ್ಪತ್ರೆಗೆ ಹೋಗಲು ತಿಳಿಸಿದ್ರು. ಬೌರಿಂಗ್ ಆಸ್ಪತ್ರೆಯಲ್ಲೂ ಇದೇ ಕಥೆ ಮುಂದುವರೆದಿದೆ.
ಆ್ಯಂಬುಲೆನ್ಸ್ ಸಿಬ್ಬಂದಿ ಮತ್ತೆ ಆ ವ್ಯಕ್ತಿಯನ್ನು ಲಗ್ಗೆರೆ ಆಸ್ಪತ್ರೆಗೆ ಕರೆತಂದಿದ್ದಾರೆ. ಆದ್ರೆ ಲಗ್ಗೆರೆ ಆಸ್ಪತ್ರೆ ಸಿಬ್ಬಂದಿ ರೋಗಿ 2ನೇ ಸಲ ಬಂದ್ರೂ ಚಿಕಿತ್ಸೆ ನೀಡದೆ ನಿರ್ಲಕ್ಷಿಸಿದ್ದಾರೆ. ಆಸ್ಪತ್ರೆಯ ಬಾಗಿಲಲ್ಲೇ ಒದ್ದಾಡುತ್ತಿದ್ದರೂ ಚಿಕಿತ್ಸೆ ನೀಡಲಿಲ್ಲ. ನಂತರ ಸ್ಥಳೀಯ ನಿವಾಸಿಗಳು ನಂದಿನಿ ಲೇಔಟ್ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ರೋಗಿಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆ್ಯಂಬುಲೆನ್ಸ್ ಜತೆಯೇ ಪೊಲೀಸರು ತೆರಳಿ ಅತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ರೋಗಿಗೆ ಕೊರೊನಾ ಲಕ್ಷಣವೂ ಕಂಡುಬಂದಿರುವ ಮಾಹಿತಿ ಸಿಕ್ಕಿದ್ದು, ಬೌರಿಂಗ್ ಆಸ್ಪತ್ರೆಯ ಸಿಬ್ಬಂದಿ ಹೆಚ್ಚಿನ ಚಿಕಿತ್ಸೆ ನೀಡುತ್ತಿದ್ದಾರೆ.