ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ: ಬಿಕೆ ಹರಿಪ್ರಾಸದ್​​​ ಒಂದೇ ದಿನ ಡಬಲ್ ಧಮಾಕ

ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಈ ಬಾರಿ ಡಿಕೆ ಶಿವಕುಮಾರ್ ಸಂಪುಟದಲ್ಲಾದರೂ ಸ್ಥಾನ ಸಿಗಬಹುದು ಎಂದು ನಿರೀಕ್ಷೆ ಮಾಡಿದ್ದರು. ಆದ್ರೆ, ಅದೂ ಸಹ ಆಗಿಲ್ಲ. ಆದರೂ ಬಿಕೆ ಹರಿಪ್ರಸಾದ್ ಅವರಿಗೆ ಇಂದು ಒಂದೇ ದಿನ ಡಬಲ್ ಡಬಲ್‌ ಧಮಾಕ ತಂದುಕೊಟ್ಟಿವೆ.

ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ: ಬಿಕೆ ಹರಿಪ್ರಾಸದ್​​​ ಒಂದೇ ದಿನ ಡಬಲ್ ಧಮಾಕ
Bk Hariprasad

Updated on: Jun 03, 2026 | 9:49 PM

ಬೆಂಗಳೂರು, (ಜೂನ್ 03): ಸಚಿವ ಸ್ಥಾನ ಆಸೆ ಈಡೇರದಿದ್ದರೂ ಸಹ ಬಿಕೆ ಹರಿಪ್ರಸಾದ್​​​ಗೆ (BK Hariprasad) ಎರಡೆರಡು ಹುದ್ದೆಗು ಒದಗಿ ಬಂದಿವೆ. ವಿಧಾನ ಪರಿಷತ್​​​ಗೆ ಮತ್ತೊಮ್ಮೆ ಹರಿಪ್ರಸಾದ್​​ ಅವರಿಗೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಇದರ ಜೊತೆ ಕೆಪಿಸಿಸಿ (KPCC President)  ಪಟ್ಟವನ್ನು ಕಟ್ಟಿದೆ. ಹೌದು….ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ಬಿಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಷ್ಟ್ರೀಯ ಅಧ್ಯಕ್ಷರು ಈ ಆದೇಶ ಹೊರಡಿಸಿದ್ದು, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ.ಹರಿಪ್ರಸಾದ್ ಹೆಸರು ಘೋಷಣೆ
  • ಡಿಕೆ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ
  • ಕೆಪಿಸಿಸಿ ಅಧ್ಯಕ್ಷರಾಗಿ ಬಿ‌.ಕೆ‌.ಹರಿಪ್ರಸಾದ್ ನೇಮಿಸಿದ ಎಐಸಿಸಿ
  • ಒಬಿಸಿ ಸಮುದಾಯದ ನಾಯಕನಿಗೆ ಮಣೆ ಹಾಕಿದ ಎಐಸಿಸಿ

ಸಚಿವ ಸ್ಥಾನ ಹಾಗೂ ಪಕ್ಷದ ಅಧ್ಯಕ್ಷ ಹುದ್ದೆ ಎರಡರ ಮೇಲೂ ಕಣ್ಣಿಟ್ಟಿದ್ದ ಸತೀಶ್‌ ಜಾರಕಿಹೊಳಿಯವರಿಗೆ ಹೈಕಮಾಂಡ್‌ ಶಾಕ್‌ ನೀಡಿದ್ದು, ಸಚಿವ ಸ್ಥಾನಕ್ಕೆ ಸಿಮಿತಗೊಳಿಸಿದೆ. ಕೆಪಿಸಿಸಿ ಸಾರಥ್ಯವನ್ನು ಬಿ.ಕೆ. ಹರಿಪ್ರಸಾದ್‌ ಅವರ ಹೆಗಲಿಗೆ ಹೊರಿಸಿದೆ. ಇನ್ನು ಬಿಕೆ ಹರಿ ಪ್ರಸಾದ್ ಸಹ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ಹೀಗಾಗಿ ಅವರಿಗೆ ಡಿಕೆ ಸಂಪುಟದಲ್ಲಿ ಅವಕಾಶ ನೀಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಹೈಕಮಾಂಡ್  ನಿರ್ಧಾರ ಬದಲಿಸಿದ್ದು, ವಿಧಾನಪರಿಷತ್ ಜೊತೆಗೆ ಕೆಪಿಸಿಸಿ ಪಟ್ಟವನ್ನು ಕಟ್ಟಿದೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ, ಜೈಲಿನಿಂದ ಬಂದು 6 ವರ್ಷ ಪಕ್ಷ ಸಂಘಟಿಸಿದ್ಹೇಗೆ?

ಕಳೆದ ಆರು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಿಕೆ ಶಿವಕುಮಾರ್ ಅವರು ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಈಗ ಅನುಭವಿ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತರಲಾಗಿದೆ.

ಬಿಕೆ ಹರಿಪ್ರಸಾದ್ ಬಗ್ಗೆ

ಬಿ.ಕೆ. ಹರಿಪ್ರಸಾದ್ ಪೂರ್ಣ ಹೆಸರು ಬೈಚನಹಳ್ಳಿ ಕೆಂಪಯ್ಯ ಹರಿಪ್ರಸಾದ್ 1954ರ ಜುಲೈ 29ರಂದು ಜನಿಸಿದ್ದು, ಹಿಂದುಳಿದ ವರ್ಗದ (OBC) ‘ಬಿಲ್ಲವ’ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಎನ್‌ಎಸ್‌ಯುಐ (NSUI) ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿಸಿರುವ ಹರಿಪ್ರಸಾದ್, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಪ್ರಮುಖ ಹುದ್ದೆಗಳನ್ನು ನಿರ್ವಹಿಸಿರುವ ಅನುಭವ ಹೊಂದಿದ್ದಾರೆ. 1989-1990ರಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನು ಹೈಕಮಾಂಡ್ ಮಟ್ಟದಲ್ಲೂ ತಮ್ಮದೇ ಹಿಡಿತ ಹೊಂದಿರುವ ಹರಿಪ್ರಾಸದ್, ಒಟ್ಟು 4 ಬಾರಿ (1990, 2004, 2013 ಮತ್ತು 2014) ಕರ್ನಾಟಕವನ್ನು ಪ್ರತಿನಿಧಿಸಿ ರಾಜ್ಯಸಭೆಯ ಸಂಸದರಾಗಿ ಆಯ್ಕೆಯಾಗಿದ್ದರು.  ಹಾಗೇ ಹರಿಯಾಣ ರಾಜ್ಯದ ಎಐಸಿಸಿ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯರಾಗಿದ್ದಾರೆ.

  • ಬಿಕೆ ಹರಿಪ್ರಸಾದ್ ಅವರು ದೆಹಲಿ ರಾಜಕಾರಣದಲ್ಲಿ ದೀರ್ಘಕಾಲ ಸಕ್ರಿಯರಾಗಿದ್ದವರು ಮತ್ತು ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದಾರೆ.
  • ಜನವರಿ 2022 ರಿಂದ ಮೇ 2023 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿ ನಿಭಾಯಿಸಿದ್ದರು.
  • 2006 ರಿಂದ 2018 ರವರೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.
  • ಜರಾತ್, ಹರಿಯಾಣ, ಮಧ್ಯಪ್ರದೇಶ, ಒಡಿಶಾ, ಬಿಹಾರ, ಪಂಜಾಬ್ ಸೇರಿದಂತೆ ದೇಶದ ಸುಮಾರು 18ಕ್ಕೂ ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಮತ್ತು ಸಾಂಸ್ಥಿಕ ಉಸ್ತುವಾರಿಯಾಗಿ ಕೆಲಸ ಮಾಡಿದ ವ್ಯಾಪಕ ಅನುಭವ ಹೊಂದಿದ್ದಾರೆ.

Published On - 9:33 pm, Wed, 3 June 26

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us