
ಚಿತ್ರದುರ್ಗ, ಆಗಸ್ಟ್ 22: ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶುಕ್ರವಾರ (ಆ.22) ಚಿತ್ರದುರ್ಗದ ಕಾಂಗ್ರೆಸ್ (Chitradurga) ಶಾಸಕ ಕೆ.ಸಿ.ವೀರೇಂದ್ರ (Congress MLA KC Veerendra) ಹಾಗೂ ಅವರ ಸಹೋದರರ ಮನೆಗಳ ಮೇಲೆ ದಾಳಿ ನಡೆಸಿದರು. ಚಿತ್ರದುರ್ಗ, ಚಳ್ಳಕೆರೆ, ಬೆಂಗಳೂರು, ಗೋವಾ ಸೇರಿದಂತೆ 30 ಕಡೆಗಳಲ್ಲಿ ದಾಳಿ ಮಾಡಿದರು. ಶಾಸಕ ಕೆ.ಸಿ.ವೀರೇಂದ್ರ ಮನೆಗಳು, ಕಂಪನಿಗಳು ಮತ್ತು ಇತರರ ಮನೆ, ಕಚೇರಿಗಳು ಸೇರಿ 30 ಕಡೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು ವಿಭಾಗದ ಇಡಿ ಅಧಿಕಾರಿಗಳ ತಂಡ ಚಿತ್ರದುರ್ಗ ಜಿಲ್ಲೆಯ 6 ಕಡೆ, ಬೆಂಗಳೂರು ನಗರದ 10, ಹುಬ್ಬಳ್ಳಿಯ 1 ಕಡೆ, ರಾಜಸ್ಥಾನದ ಜೋಧ್ಪುರದ 3 ಕಡೆ, ಮುಂಬೈನ 2 ಕಡೆ, ಗೋವಾದ 5 ಕ್ಯಾಸಿನೋ ಸೇರಿ ಹಲವೆಡೆ ದಾಳಿ ಮಾಡಿದ್ದಾರೆ. ಅಕ್ರಮ ಆನ್ಲೈನ್, ಆಫ್ಲೈನ್ ಬೆಟ್ಟಿಂಗ್ ಪ್ರಕರಣ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿಸಿದೆ.
ಆನ್ಲೈನ್ ಬೆಟ್ಟಿಂಗ್ ತಾಣಗಳಾದ ಕಿಂಗ್567, ರಾಜಾ567, ಪಪ್ಪಿಸ್003, ರತ್ನ ಗೇಮಿಂಗ್, ಶಾಸಕ ಕೆ.ಸಿ.ವೀರೇಂದ್ರ ಸಹೋದರ ಕೆ.ಸಿ.ತಿಪ್ಪೇಸ್ವಾಮಿಗೆ ಸೇರಿದ ದುಬೈನಲ್ಲಿರುವ ವ್ಯವಹಾರಗಳ ಕಚೇರಿಗಳಾದ ಡೈಮಂಡ್ ಸಾಫ್ಟೆಕ್, ಟಿಆರ್ಎಸ್ ಟೆಕ್ನಾಲಜಿಸ್, ಪ್ರೈಮ್9 ಟೆಕ್ನಾಲಜಿಸ್, ಕಾಲ್ ಸೆಂಟರ್ ಸರ್ವೀಸ್ ಮೇಲೆ ದಾಳಿ ನಡೆಸಿ, ಗೇಮಿಂಗ್ ಬ್ಯುಸಿನೆಸ್ಗೆ ಸಂಬಂಧಿಸಿದ ದಾಖಲೆ ಪರಿಶೀಲಿಸಿದರು.
20ಕ್ಕೂ ಹೆಚ್ಚು ವಾಹನದಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ 2016ರ ಡಿಸೆಂಬರ್ 11 ರಂದು ಕೆಸಿ ವೀರೇಂದ್ರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಆಗ ವಿರೇಂದ್ರ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣ, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆ ಆಗಿತ್ತು. ಕೆಸಿ ವಿರೇಂದ್ರ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ವಿದೇಶದಿಂದ ಹಣ: ಇಡಿ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಿಕ್ಕಿಂನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈವರೆಗೆ ಇಡಿ ಅಧಿಕಾರಿಗಳು ಈ ಬಗ್ಗೆ ಖಚಿತಪಡಿಸಿಲ್ಲ.
Published On - 6:31 pm, Fri, 22 August 25