ಎಸ್​​ಟಿ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಹಣ ಹೆಂಡ ಸಾರಾಯಿಗೆ, ಇದು ಸಮಾಜಿಕ ನ್ಯಾಯವೇ? ಸಿದ್ದರಾಮಯ್ಯಗೆ ಅಶೋಕ್ ಪ್ರಶ್ನೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೋಕಸಭೆ ಚುನಾವಣೆ ವೇಳೆ ಮದ್ಯ ಖರೀದಿಗೆ ಬಳಕೆಯಾಗಿದೆ ಎಂಬ ಜಾರಿ ನಿರ್ದೇಶನಾಲಯದ ತನಿಖಾ ವರದಿ ಪ್ರತಿಪಕ್ಷ ಬಿಜೆಪಿಯನ್ನು ಮತ್ತಷ್ಟು ಕೆರಳಿಸಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್, ಇದುವೇ ನಿಮ್ಮ ಸಾಮಾಜಿಕ ನ್ಯಾಯವೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

ಎಸ್​​ಟಿ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಹಣ ಹೆಂಡ ಸಾರಾಯಿಗೆ, ಇದು ಸಮಾಜಿಕ ನ್ಯಾಯವೇ? ಸಿದ್ದರಾಮಯ್ಯಗೆ ಅಶೋಕ್ ಪ್ರಶ್ನೆ
ಅಶೋಕ್ & ಸಿದ್ದರಾಮಯ್ಯ

Updated on: Jul 18, 2024 | 11:38 AM

ಬೆಂಗಳೂರು, ಜುಲೈ 18: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ವರ್ಗಾವಣೆಯಾಗಿದ್ದ ಹಣ ಲೋಕಸಭೆ ಚುನಾವಣೆ ಸಂದರ್ಭ ಹೆಂಡ, ಮದ್ಯ ಖರೀದಿಗೆ ಬಳಕೆಯಾಗಿತ್ತು ಎಂಬ ಜಾರಿ ನಿರ್ದೇಶನಾಲಯದ ಪ್ರಕಟಣೆ ಪ್ರತಿಪಕ್ಷ ಬಿಜೆಪಿಯನ್ನು ಕೆರಳಿಸಿದೆ. ಈಗಾಗಲೇ ಹಗರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಾಜೀನಾಮೆಗೆ ಆಗ್ರಹಿಸಿದ್ದ ಬಿಜೆಪಿ ಈಗ ಮತ್ತಷ್ಟು ವಾಗ್ದಾಳಿ ನಡೆಸಿದೆ.

ಸಿಎಂ ಸಿದ್ದರಾಮಯ್ಯನವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಶೋಕ್ ಎಕ್ಸ್ ಸಂದೇಶ


ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ಹಣ ಕಳ್ಳ ಕಾಕರ ನಶೆ ಏರಿಸುವ ಹೆಂಡ, ಸಾರಾಯಿ ಪಾಲಾಗಿದೆ ಎಂದರೆ ತಮ್ಮ ಕರುಳು ಕಿತ್ತುಬರುವುದಿಲ್ಲವೇ ಸಿಎಂ ಸಿದ್ದರಾಮಯ್ಯನವರೇ? ಇದೇನಾ ತಾವು ಪ್ರತಿಪಾದಿಸುವ ಸಾಮಾಜಿಕ ನ್ಯಾಯ? ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಪರಿಶಿಷ್ಟ ಪಂಗಡಗಳ ಜನರ ಕ್ಷೇಮ ಕೇಳಿ. ರಾಜೀನಾಮೆ ಕೊಟ್ಟು ಪ್ರಾಯಶ್ಚಿತ ಮಾಡಿಕೊಳ್ಳಿ. ದಲಿತ ಸಮುದಾಯ ನಿಮ್ಮ ದ್ರೋಹವನ್ನ ಯಾವತ್ತಿಗೂ ಕ್ಷಮಿಸುವುದಿಲ್ಲ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಆ ವಿಚಾರವಾಗಿ ಬುಧವಾರ ಪ್ರಕಟಣೆ ಬಿಡುಗಡೆ ಮಾಡಿತ್ತು. ಅಧಿಕೃತ ಅಂಕಿ-ಅಂಶಗಳನ್ನು ನೀಡಿ, ಒಟ್ಟು 89.65 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ತಿಳಿಸಿತ್ತು.

ಹಗರಣದಲ್ಲಿ ವರ್ಗಾವನೆ ಮಾಡಿದ ಗಣನೀಯ ಪ್ರಮಾಣದ ಹಣವನ್ನು ಲೋಕಸಭೆ ಚುನಾವಣೆ ವೇಳೆ ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಲಾಗಿತ್ತು. ಅಕ್ರಮದಲ್ಲಿ ಬಂದ ಇತರೇ ಹಣವನ್ನು ಬಳಸಿಕೊಂಡು ಲ್ಯಾಂಬೋರ್ಗಿನಿ ಸೇರಿದಂತೆ ಐಷಾರಾಮಿ ವಾಹನಗಳನ್ನ ಖರೀದಿಸಲಾಗಿತ್ತು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿತ್ತು.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅಲ್ಲ: ಹಗರಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಇಡಿ

ಇಡಿ ಬಿಡುಗಡೆ ಮಾಡಿರುವ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಆರ್ ಅಶೋಕ್ ಹಾಗೂ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us