ತನಿಖಾ ವರದಿ ಸಲ್ಲಿಕೆ: ವಾಲ್ಮೀಕಿ ಹಗರಣದ ಮತ್ತಷ್ಟು ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟ ಇಡಿ

| Updated By: ರಮೇಶ್ ಬಿ. ಜವಳಗೇರಾ

Updated on: Oct 09, 2024 | 10:21 PM

ಮುಡಾ ಜೊತೆಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ನಿಗಮದಲ್ಲಿನ ಹಗರಣದ ತನಿಖಾ ವರದಿಯನ್ನು ಇಡಿ ಸಿದ್ಧಪಡಿಸಿದ್ದು, ಇಂದು (ಅಕ್ಟೋಬರ್ 09) ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಲ್ಲಿಸಿದೆ. ವರದಿಯಲ್ಲಿ ಕೆಲ ಸ್ಫೋಟಕ ಅಂಶಗಳನ್ನು ಉಲ್ಲೇಖಿಸಿದ್ದು, ಕಾಂಗ್ರೆಸ್ ಶಾಸಕ ನಾಗೇಂದ್ರ ಮತ್ತೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಹಾಗಾದ್ರೆ, ಇಡಿ ಸಲ್ಲಿಸಿದ ವರದಿಯಲ್ಲೇನಿದೆ ಎನ್ನುವ ವಿವರ ಇಲ್ಲಿದೆ ನೋಡಿ.

ತನಿಖಾ ವರದಿ ಸಲ್ಲಿಕೆ: ವಾಲ್ಮೀಕಿ ಹಗರಣದ ಮತ್ತಷ್ಟು ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟ ಇಡಿ
ಬಿ ನಾಗೇಂದ್ರ, ಇಡಿ
Follow us on

ಬೆಂಗಳೂರು, (ಅಕ್ಟೋಬರ್ 09): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನಿಖಾ ವರದಿಯನ್ನು ಕೋರ್ಟ್​ಗೆ ಸಲ್ಲಿಸಿದೆ. ಇಂದು(ಅಕ್ಟೋಬರ್ 09) ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ತನಿಖಾ ವರದಿಯನ್ನು ಸಲ್ಲಿಸಿದ್ದು, ಮಾಜಿ ಸಚಿವ ಬಿ.ನಾಗೇಂದ್ರ ಪ್ರಮುಖ ಆರೋಪಿ ಎಂದು ಉಲ್ಲೇಖಿಸಿದೆ. ಇದರ ಜೊತೆಗೆ ಒಟ್ಟು ಈ ಪ್ರಕರಣದಲ್ಲಿ 24 ಜನರು ಭಾಗಿಯಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ. ಅಲ್ಲದೇ ನಾಗೇಂದ್ರ ಆಪ್ತ ವಿಜಯ್ ಕುಮಾರ್ ಮೊಬೈಲ್ ಪೋನ್ ವಶಕ್ಕೆ ಪಡೆದು ರಿಟ್ರೀವ್ ಮಾಡಿದಾಗ ಹಣ ಹಂಚಿಕೆ ಅವ್ಯವಹಾರ ಮಾಡಿರುವುದು ಬೆಳಕಿಗೆ ಬಂದಿದೆ ಎನ್ನುವ ಸ್ಫೋಟಕ ಅಂಶವನ್ನು ವರದಿಯಲ್ಲಿ ಉಲ್ಲೇಖವಾಗಿದೆ.

ಈ ಬಗ್ಗೆ ಮಾಧ್ಯಮ ಪ್ರಕರಣ ಹೊರಡಿಸಿರುವ ಇಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ ಕೇಂದ್ರ ತನಿಖಾ ಸಂಸ್ಥೆಯೂ ಪ್ರಾಸಿಕ್ಯೂಷನ್ ದೂರು ಅಥವಾ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ನ್ಯಾಯಾಲಯವು ಚಾರ್ಜ್ ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಇಡಿ ತಿಳಿಸಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ

ಬಿ.ನಾಗೇಂದ್ರ ಮಾಸ್ಟರ್ ಮೈಂಡ್

ಸತ್ಯನಾರಾಯಣ ವರ್ಮ, ಏಟಕಾರಿ ಸತ್ಯನಾರಾಯಣ, ಜೆ.ಜಿ.ಪದ್ಮನಾಭ, ನಾಗೇಶ್ವರ್ ರಾವ್, ನೆಕ್ಕೆಂಟಿ ನಾಗರಾಜ್ ಮತ್ತು ವಿಜಯ್ ಕುಮಾರ್ ಗೌಡ” ಅವರಂತಹ ಪ್ರಮುಖ ಸಹಚರರು ಸೇರಿದಂತೆ 24 ಮಂದಿಯ ಸಹಾಯದಿಂದ ಈ ಹಗರಣ ನಡೆದಿದ್ದು, ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಪ್ರಾಥಮಿಕ ಆರೋಪಿ ಮತ್ತು ಮಾಸ್ಟರ್ ಮೈಂಡ್ ಎಂದು ಹೆಸರಿಸಿರುವುದಾಗಿ ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಬಿ ನಾಗೇಂದ್ರ ಅವರ ಪ್ರಭಾವದಿಂದ ನಿಗಮದ(ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ) ಖಾತೆಯನ್ನು ಯಾವುದೇ ಸರಿಯಾದ ಅನುಮತಿಯಿಲ್ಲದೆ ಎಂಜಿ ರಸ್ತೆಯ ಶಾಖೆಗೆ ವರ್ಗಾಯಿಸಲಾಗಿದೆ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಹಣದ ಅಕ್ರಮ ವರ್ಗಾವಣೆಯಲ್ಲಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಅಲ್ಲದೇ 2024ರ ಲೋಕಸಭೆ ಚುನಾವಣೆಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿಯನ್ನು ಬೆಂಬಲಿಸಲು ಹಾಗೂ ಬಿ ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕಾಗಿ 20.19 ಕೋಟಿ ರೂ.ಗಳನ್ನು ಬಳಸಲಾಗಿದೆ ಎಂದು ಇಡಿ ಹೇಳಿದೆ.

ನಾಗೇಂದ್ರ ಅವರ ಸೂಚನೆಯಂತೆಯೇ ಸಂಪೂರ್ಣವಾಗಿ ಹಣಕಾಸು ವಹಿವಾಟು ನಡೆದಿದೆ. ತಾನು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಈ ವೆಚ್ಚಗಳ “ಸಾಕ್ಷ್ಯ” ಪತ್ತೆಯಾಗಿದೆ ಮತ್ತು ಆರ್ಥಿಕ ವಿಶ್ಲೇಷಣೆ ಮತ್ತು ಹೇಳಿಕೆಗಳಿಂದ ಇದನ್ನು “ದೃಢೀಕರಿಸಲಾಗಿದೆ” ಎಂದು ಇಡಿ ತಿಳಿಸಿದೆ.

ವಾಲ್ಮೀಕಿ ನಿಗಮದ ಹಗರಣದಲ್ಲಿಇಡಿ ಅಧಿಕಾರಿಗಳು ಜುಲೈ 11ರಂದು ನಾಗೇಂದ್ರರನ್ನು ಬಂಧಿಸಿದ್ದರು. ಅಂದಿನಿಂದ ನಾಗೇಂದ್ರ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೇ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಯ ಎಸ್‌ಐಟಿ ಅಧಿಕಾರಿಗಳು ಆಗಸ್ಟ್‌ನಲ್ಲಿ ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ ನಾಗೇಂದ್ರರ ಹೆಸರನ್ನು ಉಲ್ಲೇಖಿಸದೆ ಕೇವಲ ಅಧಿಕಾರಿಗಳ ಪಾತ್ರದ ಕುರಿತ ವಿವರ ದಾಖಲಿಸಿದ್ದರು. ಆದರೆ, ಇಡಿ ಅಧಿಕಾರಿಗಳು ಎಸ್‌ಐಟಿ ತನಿಖೆಗೆ ವಿರುದ್ಧವಾಗಿ ನಾಗೇಂದ್ರ ಅವರೇ ಹಗರಣದ ಮಾಸ್ಟರ್ ಮೈಂಡ್ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:20 pm, Wed, 9 October 24